ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸಂತೋಷ ರಾವ್‌ ಖುಲಾಸೆಗೊಳಿಸಿದ ನ್ಯಾಯಾಲಯ

ಬೆಂಗಳೂರು: ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂತೋಷ್‌ ರಾವ್‌ ಅವರನ್ನು ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.
ಸಿಆರ್‌ಪಿಸಿ ಸೆಕ್ಷನ್‌ 235(1)ರ ಅಡಿ ಆರೋಪಿ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು 50ನೇ ಹೆಚ್ಚುವರಿ ಸತ್ರ ನ್ಯಾಯಾಧೀಶರಾದ ಸಿ ಬಿ ಸಂತೋಷ ಆದೇಶ ಮಾಡಿದ್ದಾರೆ. ವಿಸ್ತೃತವಾದ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.
ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಆರೋಪಿ ಸಂತೋಷ್‌ ರಾವ್ ​ನನ್ನು ನಿರ್ದೋಷಿ ಎಂದು ಆದೇಶ ಹೊರಡಿಸಿದ್ದಾರೆ. ಬರೋಬ್ಬರಿ 11 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಿದೆ. ಒಂದೊಮ್ಮೆ ಪ್ರಕರಣದಲ್ಲಿ ಮೇಲ್ಮನವಿ ಅಥವಾ ಆದೇಶ ಮರುಪರಿಶೀಲನಾ ಅರ್ಜಿ ಸಲ್ಲಿಕೆಯಾದರೆ ಆತನ ಹಾಜರಾತಿ ಖಾತರಿಪಡಿಸುವ ಉದ್ದೇಶದಿಂದ ಜಾಮೀನು ಬಾಂಡ್‌ ಮತ್ತು ಭದ್ರತೆಯು ಸಿಆರ್‌ಪಿಸಿ ಸೆಕ್ಷನ್‌ 437(ಎ) ಅಡಿ ಆರು ತಿಂಗಳು ಮುಂದುವರಿಯಲಿದೆ.
ಪ್ರಕರಣದ ಹಿನ್ನೆಲೆ: ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್‌ 9ರಂದು ನಾಪತ್ತೆಯಾಗಿದ್ದರು. ಮರು ದಿನ ಮೃತ ವಿದ್ಯಾರ್ಥಿನಿಯ ದೇಹವು ಮಣ್ಣಸಂಕ ಬಳಿ ಪತ್ತೆಯಾಗಿತ್ತು. ಆಕೆಯ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಬೆಳ್ತಂಗಡಿ ಠಾಣೆಯಲ್ಲಿ ಮೊದಲಿಗೆ ಆಕೆಯ ತಂದೆ ಚಂದ್ರಪ್ಪ ಗೌಡ ಅವರು ತನ್ನ ಎರಡನೇ ಪುತ್ರಿ ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದರು. ಆನಂತರ ಅದನ್ನು ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನಾಗಿ ಪರಿವರ್ತಿಸಲಾಗಿತ್ತು.
2013ರಲ್ಲಿ ಪ್ರಕರಣವು ಸಿಬಿಐಗೆ ವರ್ಗಾವಣೆಗೊಂಡಿದ್ದು, 2015ರಲ್ಲಿ ಪ್ರಕರಣವು ಮಂಗಳೂರಿನಿಂದ ಬೆಂಗಳೂರಿನ ಸಿಬಿಐ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement