ಬೆಂಗಳೂರು:ಸಾರ್ವಜನಿಕ -ಖಾಸಗಿ ಸಹಭಾಗಿತ್ವದಲ್ಲಿ ಕಂಠೀರವ ಕ್ರೀಡಾಂಗಣವನ್ನು 1500 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲು ಉದ್ದೇಶಿಸಲಾಗಿದೆ ಎಂದು ಕ್ರೀಡಾ ಮತ್ತು ಯುವಜನ ಖಾತೆ ಸಚಿವ ನಾರಾಯಣಗೌಡ ಹೇಳಿದ್ದಾರೆ
ಗುರುವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಅವರು,ಈಗಾಗಲೆ ನೀಲ ನಕ್ಷೆ ಸಿದ್ದವಾಗಿದ್ದು, ಸದ್ಯ ಮಾತುಕತೆ ಹಂತದಲ್ಲಿದೆ. ಶೀಘ್ರದಲ್ಲಿಯೇ ಅಂತಿಮ ರೂಪ ನೀಡಲಾಗುವುದು. ಕ್ರೀಡಾಂಗಣವನ್ನು ಪಿಪಿಪಿ ಮಾದರಿಯಲ್ಲಿ ಹೈಟೆಕ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಖಾಸಗಿ -ಸಹಭಾಗಿತ್ವಕ್ಕಾಗಿ ಕಂಪನಿಗಳ ಜೊತೆ ಮಾತುಕತೆ ನಡೆಸಲಾಗುತ್ತಿದ್ದು, 2 ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ.
ಜೊತೆಗೆ ಬಹುಮಹಡಿ ಕಟ್ಟಡ, ತ್ರಿ ಸ್ಟಾರ್ ಹೊಟೇಲ್ ಮತ್ತು ಪಂಚತಾರಾ ಹೊಟೇಲ್ಗಳು, ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಮಳಿಗೆಗಳು ಒಳಗೊಂಡಿರಲಿವೆ. ಜಿಲ್ಲೆಗಳ ಕ್ರೀಡಾಂಗಣವನ್ನೂ ಉನ್ನತೀಕರಿಸಲು ಉದ್ದೇಶಿಸಲಾಗಿದೆ. ಖಾಸಗಿ ಕಂಪೆನಿಗಳು ಮುಂದೆಬಂದಲ್ಲಿ, ಅವರೊಂದಿಗೆ ಮಾತುಕತೆ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದರು.
ಕ್ರೀಡಾಂಗಣದ ಅಭಿವೃದ್ಧಿಗೆ ಸಿಎಸ್ಆರ್ ಫಂಡ್ ಬಳಕೆ ಮಾಡಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ರಾಜ್ಯದಿಂದ ಒಲಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳ ಸಂಖ್ಯೆ ಹೆಚ್ಚಾಗಬೇಕು ಎನ್ನುವುದೇ ಇದರ ಮೂಲ ಉದ್ದೇಶ. ಆ ನಿಟ್ಟಿನಲ್ಲಿ ಅಗತ್ಯವಿರುವ ಕ್ರೀಡಾಸೌಲಭ್ಯ, ತರಬೇತಿ ನೀಡಲು ಕ್ರಮ ತೆಗೆದುಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಿಮ್ಮ ಕಾಮೆಂಟ್ ಬರೆಯಿರಿ