ರೈತರ ಪ್ರತಿಭಟನಾ ಸ್ಥಳದಲ್ಲಿ ಪ್ರತ್ಯೇಕ ಇಂಟರ್‌ನೆಟ್‌, ಸಿಸಿಟಿವಿ ಅಳವಡಿಕೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ಪ್ರತ್ಯೇಕ ಇಂಟರ್‌ನೆಟ್‌ ಹಾಗೂ ಸಿಸಿಟಿವಿ ಅಳವಡಿಸಿಕೊಳ್ಳುವ ಮೂಲಕ ಕೇಂದ್ರ ಸರಕಾರಕ್ಕೆ ಪ್ರತಿಭಟನಾನಿರತ ರೈತರು ಸವಾಲೆಸೆದಿದ್ದಾರೆ.
ಪ್ರತಿಭಟನಾ ಸ್ಥಳದಲ್ಲಿ ಇಂಟರ್‌ನೆಟ್‌ ಕಡಿತಗೊಳಿಸಿದ ಕ್ರಮವನ್ನು ಖಂಡಿಸಿದ ಹೋರಾಟಗಾರರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಕಾನೂನು ರದ್ದುಪಡಿಸುವುದು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದ ಬೆನ್ನಲ್ಲೇ ರೈತರು ತಮ್ಮ ಹೋರಾಟವನ್ನು ಇನ್ನಷ್ಟು ಚುರುಕುಗೊಳಿಸಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಪೂರಕ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಪ್ರತಿಭಟನಾ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲು 100 ಸಿಸಿ ಟವಿ ಕ್ಯಾಮೆರಾಗಳು, 600 ಸ್ವಯಂ ಸೇವಕರು, ಮುಂಬರುವ ಬೇಸಿಗೆ ಎದುರಿಸಲು ಎಲೆಕ್ಟ್ರಿಕ್‌ ಫ್ಯಾನ್‌, ಹವಾನಿಯಂತ್ರಿತ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ. ರೈತರು ಪ್ರತ್ಯೇಕ ಆಫ್ಟಿಕಲ್‌ ಫೈಬರ್‌ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಆ ಮೂಲಕ ಪ್ರತಿಭಟನೆ ಸದ್ಯಕ್ಕೆ ನಿಲ್ಲುವುದಿಲ್ಲ ಎನ್ನುವ ಸಂದೇಶ ರವಾನಿಸಿದ್ದಾರೆ.
ಪ್ರತಿನಿತ್ಯ ಪ್ರತಿಭಟನಾ ಸ್ಥಳಕ್ಕೆ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದು, ಅವರೆಲ್ಲರ ಮೇಲೆ ನಿಗಾ ಇಡಲು ಮುಖ್ಯ ವೇದಿಕೆಯ ಹಿಂಭಾಗದಲ್ಲಿ ನಿಯಂತ್ರಣ ಕೊಠಡಿ ನಿರ್ಮಿಸಲಾಗುತ್ತಿದೆ. ಅಲ್ಲದೇ ಮುಖ್ಯ ವೇದಿಕೆಯಲ್ಲಿ ಭಾಷಣ ಮಾಡುವ ರೈತ ಮುಖಂಡರ ಭಾಷಣ ವೀಕ್ಷಣೆಗೆ ದೂರದಲ್ಲಿರುವ ರೈತರಿಗೆ ಅನುಕೂಲವಾಗುವಂತೆ ಹಲವು ಎಲ್‌ಸಿಡಿ ಪರದೆಗಳನ್ನೂ ಅಳವಡಿಸಲಾಗುತ್ತಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   'ಅನುಮಾನ ಆಧರಿಸಿ ಇವಿಎಂ ವಿರುದ್ಧ ನಿರ್ದೇಶನ ನೀಡಲು ಸಾಧ್ಯವೇ? : ಸುಪ್ರೀಂ ಕೋರ್ಟ್ ಪ್ರಶ್ನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement