ಸಂಘ ಪರಿವಾರ ಸಾಮಾಜಿಕ ನ್ಯಾಯ ಹೋರಾಟದ ದಾರಿ ತಪ್ಪಿಸುತ್ತಿದೆ: ಸಿದ್ದರಾಮಯ್ಯ ಆರೋಪ

ನಾವೆಲ್ಲ ಹಿಂದೂ ನಾವೆಲ್ಲ ಒಂದು ಎಂದು ಹೇಳುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ವಹಿಸುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೀಸಲಾತಿಯನ್ನು ನೇರವಾಗಿ ವಿರೋಧಿಸದ ಸಂಘ ಪರಿವಾರದ ಮುಖಂಡರು ಜಾತಿ ಜಾತಿಗಳ ಮಧ್ಯೆ ವಿವಾದ ಸೃಷ್ಟಿಸಿ ಸಾಮಾಜಿಕ ನ್ಯಾಯ ಹೋರಾಟದ ದಾರಿ ತಪ್ಪಿಸುತ್ತಿದ್ದಾರೆ. ಸಂಘ ಪರಿವಾರದ ಕುಟಿಲತೆಗೆ ಜನಸಾಮಾನ್ಯರು ಬಲಿಯಾಗಬಾರದು. ಮೊದಲಿನಿಂದಲೂ ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ ಬಿಜೆಪಿ ಮುಖಂಡರು ಈಗ ಮೀಸಲಾತಿಗಾಗಿ ಕೂಗೆಬ್ಬಿಸುತ್ತಿರುವುದು ಸಾಮಾಜಿಕ ನ್ಯಾಯ ಹೋರಾಟದ ದಿಕ್ಕು ತಪ್ಪಿಸುವ ಷಡ್ಯಂತ್ರದಂತೆ ಗೋಚರಿಸುತ್ತಿದೆ ಎಂದು ತಿಳಿಸಿದರು.
ಮೀಸಲಾತಿ ಹೆಚ್ಚಳಕ್ಕಾಗಿ ಆಧಾರ ಕೋರುತ್ತಿರುವ ನ್ಯಾಯಾಲಯಕ್ಕೆ ರಾಜ್ಯದಲ್ಲಿ ನಡೆದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಗಣತಿಯೇ ಉತ್ತರ. ಬಿಜೆಪಿ ಸರಕಾರ ಮೀಸಲಾತಿ ಪರವಾಗಿದ್ದರೆ, ಹಿಂದೆ ನಡೆಸಿದ್ದ ಸಮೀಕ್ಷೆಯ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದರು.
ಮೀಸಲಾತಿ ಪ್ರಮಾಣ ಹೆಚ್ಚಿಸುವುದಿದ್ದರೆ ತಮಿಳುನಾಡು ಮಾದರಿಯಲ್ಲಿ ಮೀಸಲಾತಿಯನ್ನು ಶೇ.೭೩ರಷ್ಟು ಹೆಚ್ಚಿಸಬೇಕು. ಹಿಂದಿನ ಕಾಂಗ್ರೆಸ್‌ ಸರಕಾರ ಮಾಡಿದ ಕಾನೂನಿನಿಂದ ಮಾತ್ರ ಸಮಸ್ಯೆಗೆ ಪರಿಹಾರ ದೊರಕಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement