ಮೀಸಲಾತಿ ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಕಕ್ಕೆ ನಿರ್ಧಾರ

ಬೆಂಗಳೂರು: ಮೀಸಲಾತಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಬೀಸೋ ದೊಣ್ಣೆಯಿಂದ ಇದರಿಂದ ಪಾರಾಗಲು ಉನ್ನತ ಮಟ್ಟದ ಸಮಿತಿ ನೇಮಕ ಮಾಡಲು ಮುಂದಾಗಿದೆ.
ವೀರಶೈವ ಲಿಂಗಾಯತರು, ಒಕ್ಕಲಿಗರು, ಪಂಚಮಸಾಲಿಗಳು, ಕುರುಬರು, ವಾಲ್ಮೀಕಿ ಮತ್ತಿತರ ಹಿಂದುಳಿದ ಸಮುದಾಯಗಳು ಮೀಸಲಾತಿಗಾಗಿ ಬಿಗಿಪಟ್ಟು ಹಿಡಿದು ಒತ್ತಡ ಹೇರುತ್ತಿರುವುದರಿಂದ ಎದುರಾಗಿರುವ ಸಂಕಷ್ಟದಿಂದ ಪಾರಾಗಲು ಸರ್ಕಾರ ಉನ್ನತ ಸಮಿತಿ ರಚಿಸಲು ಮುಂದಾಗಿದೆ.
ಸಚಿವರುಗಳು, ನಿವೃತ್ತ ನ್ಯಾಯಮೂರ್ತಿಗಳು, ಕಾನೂನು ತಜ್ಞರು, ಸಂವಿಧಾನ ಪರಿಣಿತರು, ನಿವೃತ್ತ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಿ ಸಮುದಾಯಗಳ ಸ್ಥಿತಿಗತಿ ಸಾಮಾಜಿಕ ಪರಿಸ್ಥಿತಿ ಹಾಗೂ ಮತ್ತಿತರ ವಿಚಾರಗಳನ್ನು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಈ ಸಮಿತಿಗೆ ಜವಾಬ್ದಾರಿ ನೀಡಲಾಗುವುದು. ಸಮಿತಿ ರಚನೆ ಸಂಬಂಧ ಸಚಿವ ಸಂಪುಟ ಸಭೆಯಲ್ಲೂ ಚರ್ಚೆ ನಡೆಸಲಾಗಿದೆ. ಸಮಿತಿ ನೇಮಕದಿಂದ ಸರ್ಕಾರಕ್ಕೆ ಸಾಕಷ್ಟು ಕಾಲಾವಕಾಶ ಸಿಗಲಿದೆ.
ಹೀಗಾಗಿ ಸಮಿತಿ ರಚಿಸುವುದೇ ಸೂಕ್ತ ಎಂದು ಕೆಲ ಸಚಿವರು ಸಲಹೆ ನೀಡಿದ್ದರು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಕನಕಗುರು ಪೀಠದ ಶ್ರೀ ಕಾಗಿನೆಲೆ ನಿರಂಜನಾನಂದಪುರಿ ಶ್ರೀಗಳು, ಪಾದಯಾತ್ರೆ ಕೈಗೊಂಡು ಬೆಂಗಳೂರಿನಲ್ಲಿ ಸಮಾವೇಶ ನಡೆಸಿ ಕುರುಬರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವಂತೆ ಹಕ್ಕೊತ್ತಾಯ ಮಂಡಿಸಿದ ಬೆನ್ನಲ್ಲೇ ಲಿಂಗಾಯಿತ ಪಂಚಮಸಾಲಿ ಜಗದ್ಗುರು ಶ್ರೀ ಜಯಮೃತ್ಯುಂಜಯ ಸ್ವಾಮಿಗಳು ಜ.೧೪ರಿಂದ ಕೂಡಲ ಸಂಗಮದಿಂದ ಪಾದಯಾತ್ರೆ ಕೈಗೊಂಡು ಫೆ.೨೨ರಂದು ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ ನಡೆಸಿ ಪಂಚಮಸಾಲಿಗಳನ್ನು ೨ಎ ಮೀಸಲಾತಿಗೆ ಸೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ.
ಈ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲವಾದರೆ ವಿಧಾನಸೌಧದ ಮುಂದೆ ಸತ್ಯಾಗ್ರಹ ನಡೆಸಲು ಶ್ರೀಗಳು ಮುಂದಾಗಿದ್ದಾರೆ.
ಪಂಚಮಸಾಲಿ ಶ್ರೀಗಳು ಪಾದಯಾತ್ರೆ ಕೈಗೊಳ್ಳುತ್ತಿದ್ದಂತೆಯೇ ವೀರಶೈವ ಲಿಂಗಾಯತ ಮಠಾಧೀಶರು ನಗರದಲ್ಲಿ ಸಭೆ ಸೇರಿ ತಮ್ಮ ಸಮುದಾಯವನ್ನು ಒಬಿಸಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಮಧ್ಯೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳ ನೇತೃತ್ವದಲ್ಲಿ ಒಕ್ಕಲಿಗರು ಸಭೆ ಸೇರಿ ಪ್ರತ್ಯೇಕ ನಿಗಮ ಸ್ಥಾಪನೆ ಹಾಗೂ ಮೀಸಲಾತಿ ಕಲ್ಪಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದರು. ಇವೆಲ್ಲದರ ಜೊತೆಗೆ ಭೋವಿ, ವಾಲ್ಮೀಕಿ ಹಾಗೂ ಮತ್ತಿತರ ಸಮುದಾಯಗಳ ಶ್ರೀಗಳು ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಆಗ್ರಹಿಸಿದ್ದು ಸರ್ಕಾರಕ್ಕೆ ಬಿಸಿತುಪ್ಪವಾಗಿದೆ.
ಈ ಎಲ್ಲಾ ಬೇಡಿಕೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಸಾಧಕ- ಬಾಧಕಗಳಿಗೆ ಅವಲೋಕಿಸಿ ಆಯಾಯ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಅಧ್ಯಯನ ನಡೆಸಿ ವರದಿಸಲ್ಲಿಸಲು ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಲು ಮುಂದಾಗಿದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement