ಬೆಂಗಳೂರು: ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ಹಿಂದೆ ದಲ್ಲಾಳಿಗಳನ್ನು ಬೆಂಬಲಿಸುವ ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷ ಹಾಗೂ ದೇಶವಿರೋಧಿ ಖಲಿಸ್ತಾನಿ ಶಕ್ತಿಗಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ ಕಟೀಲು ಹೇಳಿದರು,
ಆದರೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಚಾರಕ್ಕಾಗಿ ದೆಹಲಿ ದಂಗೆಯ ಹಿಂದೆ ಬಿಜೆಪಿ ಒಳಸಂಚಿದೆ ಎಂದು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಖರ್ಗೆ ಅವರ ಸೋಲಿಗೆ ಅವರ ಪಕ್ಷದವರೇ ಕಾರಣ ಎಂದು ಕಾಂಗ್ರೆಸ್ ಪಕ್ಷದ ಸತ್ಯಶೋಧನಾ ಸಮಿತಿ ತಿಳಿಸಿದೆ. ಕಾಂಗ್ರೆಸ್ನಲ್ಲಿ ನಾಯಕರೇ ಇಲ್ಲದ ಸ್ಥಿತಿಯಿದೆ. ಕುಟುಂಬ ರಾಜಕಾರಣಕ್ಕೆ ಜೋತುಬಿದ್ದಿರುವ ಕಾಂಗ್ರೆಸ್ ಅನಿವಾರ್ಯವಾಗಿ ಖರ್ಗೆ ಅವರನ್ನು ರಾಜ್ಯ ಸಭೆಗೆ ಆಯ್ಕೆ ಮಾಡಿ ವಿರೋಧ ಪಕ್ಷದ ಮುಖಂಡನ ಸ್ಥಾನ ನೀಡಿದೆ. ಇದನ್ನು ಖರ್ಗೆ ಅರ್ಥ ಮಾಡಿಕೊಳ್ಳುವುದು ಒಳಿತು ಎಂದರು.
ದೆಹಲಿಯಲ್ಲಿ ಗಣರಾಜ್ಯೋತ್ಸವದ ದಿನದಂದು ದೊಡ್ಡ ಪ್ರಮಾಣದ ಹಿಂಸಾಚಾರ ನಡೆಯುವುದನ್ನು ಕಾಂಗ್ರೆಸ್ ಪಕ್ಷ ನಿರೀಕ್ಷಿಸಿತ್ತು. ಆ ಗಲಭೆ, ಆಗುವ ಹಾನಿಗೆ ಪೊಲೀಸರು ಮತ್ತು ಪೊಲೀಸ್ ವ್ಯವಸ್ಥೆಯನ್ನು ನಿಯಂತ್ರಿಸುವ ಕೇಂದ್ರ ಸರ್ಕಾರವೇ ಕಾರಣ ಎಂದು ದೂರುವ ಉದ್ದೇಶ ಕಾಂಗ್ರೆಸ್ ಪಕ್ಷಕ್ಕೆ ಇತ್ತು ಎಂಬುದು ಖರ್ಗೆ ಅವರ ಈ ಹೇಳಿಕೆಯಿಂದ ಸ್ಪಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಒಳಜಗಳದ ಕಾರಣಕ್ಕಾಗಿ ಎಲ್ಲೆಡೆ ಸೋಲುತ್ತಿದೆ. ಆದರೂ ಕರ್ನಾಟಕದಲ್ಲಿ ಗೆದ್ದು ಅಧಿಕಾರಕ್ಕೇರುವ ಹಗಲುಗನಸು ಕಾಣುವುದನ್ನು ಆ ಪಕ್ಷದ ನಾಯಕರು ಇನ್ನೂ ಬಿಟ್ಟಿಲ್ಲ ಎಂದು ಅವರು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ