ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತ ಮರೆಯುವ ಮುನ್ನವೇ ಮತ್ತೆ ರಾಜ್ಯದಲ್ಲಿ ಅದೇ ಮಾದರಿಯ ಮತ್ತೊಂದು ಜಿಲೆಟಿನ್ ಸ್ಫೋಟ ಪ್ರಕರಣ ನಡೆದಿದೆ. ಕ್ವಾರಿಯಲ್ಲಿ ಜಿಲೆಟಿನ್ ಸ್ಪೋಟದಿಂದ ಆರು ಜನ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ನಡೆದ ಬಗ್ಗೆ ವರದಿಯಾಗಿದೆ.
ಸ್ಪೋಟದ ತೀವ್ರತೆಗೆ ಮೃತದೇಹಗಳೆಲ್ಲ ಛಿದ್ರ ಛಿದ್ರವಾಗಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಒಂದು ತಿಂಗಳ ಹಿಂದೆ ಶಿವಮೊಗ್ಗ ಜಿಲ್ಲೆಯಲ್ಲಿಯೂ ಇದೇ ರೀತಿಯ ಅಪಘಾತ ಸಂಭವಿಸಿತ್ತು. ಅದಾದ ಒಂದು ತಿಂಗಳ ನಂತರ ಈ ದುರಂತ ಸಂಭವಿಸಿದೆ.
ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಸುಧಾಕರ್, ಕ್ವಾರಿ ಜೆಲೆಟಿನ್ ತುಂಡುಗಳನ್ನು ಅಕ್ರಮವಾಗಿ ಮತ್ತು ಅನಿಯಮಿತವಾಗಿ ಸಂಗ್ರಹಿಸುತ್ತಿದ್ದು, ಇದು ಮಂಗಳವಾರ ಸ್ಫೋಟಕ್ಕೆ ಕಾರಣವಾಗಿದೆ, ಇದಕ್ಕೆ ಸಂಬಂಧಪಟ್ಟಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಹಿರೆನಾಗವಲ್ಲಿ ಗ್ರಾಮದ ಬಳಿ ಆರು ಜನರ ಸಾವು ಆಘಾತಕಾರಿಯಾಗಿದೆ. ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದ್ದು, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಸ್ಪೋಟದಿಂದ ಪ್ರಾಣಹಾನಿಯಾಗಿದ್ದು, ದುಃಖಿತ ಕುಟುಂಬಗಳಿಗೆ ಪ್ರಧಾನಿಯವರು ಸಂತಾಪ ಸೂಚಿಸಿದ್ದಾರೆ ಹಾಗೂ ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದ್ದಾರೆ, ”ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
ಶಿವಮೊಗ್ಗ ದುರಂತದಲ್ಲಿ, ಸ್ಫೋಟಕಗಳನ್ನು ಹೊತ್ತ ಲಾರಿ ಅಜಾಗರೂಕತೆಯಿಂದ ಸ್ಫೋಟಗೊಂಡು ವಾಹನದ ಮೇಲಿದ್ದ ಐವರು ಮೃತಪಟ್ಟಿದ್ದರು. ಘಟನೆಯ ನಂತರ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ರಾಜ್ಯದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಮತ್ತು ಗಣಿಗಾರಿಕೆ ವ್ಯವಸ್ಥೆಗಳನ್ನು ಪರಿಶೀಲಿಸಲು ಚಾಲನೆ ನೀಡಿದ್ದರು. ಎಲ್ಲಾ ಅಕ್ರಮ ಸ್ಫೋಟಕ ಬಳಕೆಯನ್ನು ಕೂಡಲೇ ನಿಲ್ಲಿಸಬೇಕೆಂದು ಅವರು ಆದೇಶಿಸಿದ್ದರು,
ನಿಮ್ಮ ಕಾಮೆಂಟ್ ಬರೆಯಿರಿ