ಅನಧಿಕೃತ ಸ್ಫೋಟಕಗಳ ಪತ್ತೆಗೆ ಅಧಿಕಾರಿಗಳಿಗೆ ಸಚಿವ ನಿರಾಣಿ ಕಟ್ಟುನಿಟ್ಟಿನ ಸೂಚನೆ

ಚಿಕ್ಕಬಳ್ಳಾಪುರ ( ಗುಡಿಬಂಡೆ)- ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಯಾರಾದರೂ ಸಂಗ್ರಹಿಸಿಟ್ಟಿದ್ದರೆ, ತಕ್ಷಣವೇ ಪತ್ತೆ ಹಚ್ಚಬೇಕೆಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಿರೇನಾಗವಲ್ಲಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು,ರಾಜ್ಯದ ನಾನಾ ಭಾಗಗಳಲ್ಲಿ ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿರುವ ಬಗ್ಗೆ ಸಾರ್ವಜನಿಕರಿಂದ ನನಗೆ ದೂರುಗಳು ಬಂದಿವೆ ಎಂದು ಹೇಳಿದರು.
ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.ಇಲಾಖೆಯಿಂದ ಅನುಮತಿ ಪಡೆಯದೆ, ಸ್ಫೋಟಕ ವಸ್ತುಗಳನ್ನು ಬಳಸಿದರೆ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದರು.
ಸ್ಫೋಟಕ ವಸ್ತುಗಳನ್ನು ಬಳಕೆ ಮಾಡಬೇಕಾದರೆ, ಸರಕಾರದಿಂದ ಲೈಸೆನ್ಸ್ ಪಡೆದಿರಬೇಕು. ಇನ್ನು ಮುಂದೆ ಇಂತಹ ಘಟನೆಗಳಿಗೆ ಕಾರಣರಾದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದೆಂದು ಹೇಳಿದರು.
ಸಾರಿಗೆ ಹಾಗೂ ಗೃಹ ಇಲಾಖೆಯ ಸಹಭಾಗಿತ್ವದಲ್ಲಿ ರಾಜ್ಯದ ಪ್ರತಿಯೊಂದು ಚೆಕ್ ಪೋಸ್ಟ್‌ಗಳಲ್ಲಿ ಬಿಗಿಯಾದ ತಪಾಸಣೆ ನಡೆಸಲಾಗುವುದು. ಹೊರರಾಜ್ಯಗಳಿಂದ ಬರುವ ಹಾಗೂ ಇಲ್ಲಿಂದ ಹೋಗುವ ವಾಹನಗಳ ಮೇಲೆ ಹದ್ದಿನ ಕಣ್ಣಿಡಲಾಗುವುದು. ಮುಂದಿನ ದಿನಗಳಲ್ಲಿ ಸ್ಫೋಟಕ ವಸ್ತುಗಳನ್ನು ಬಳಕೆಯನ್ನು ಅನುಮತಿ ಪಡೆದವರು ಮಾತ್ರ ಮಾಡಬೇಕು.ಈ ಕುರಿತು ಕಾನೂನು ಜಾರಿ ಮಾಡಲಿದ್ದೇವೆ ಎಂದು ಸಚಿವರು ತಿಳಿಸಿದರು.
ಅಧಿಕಾರಿಗಳಿಗೆ ಎಚ್ಚರಿಕೆ: ರಾಜ್ಯದಲ್ಲಿ ಪದೇಪದೇ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ. ತಕ್ಷಣವೇ ಅಧಿಕಾರಿಗಳು ಎಚ್ಚೆತ್ತುಕೊಂಡು ಅನಾಹುತ ತಡೆಯದಿದ್ದರೆ,ಅಂತಹವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ.ಸ್ಫೋಟಕ ವಸ್ತುಗಳನ್ನು ಸಾಗಾಣಿಕೆ ಮಾಡುವ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾರಾದರೂ ಉದಾಸೀನ ತೋರಿದರೆ, ಶಿಸ್ತು ಕ್ರಮ ಖಚಿತ..
.ಈ ಘಟನೆಯಲ್ಲಿ ಯಾರೇ ಭಾಗಿಯಾದರೂ ಎಷ್ಟೇ ಪ್ರಭಾವಿಗಳಾಗಿದ್ದರೂ ಸುಮ್ಮನೆ ಬಿಡುವುದಿಲ್ಲ ಎಂದರು.
ಘಟನೆಯ ಸತ್ಯಾ ಸತ್ಯತೆ ತಿಳಿಯಲು ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಸಿಐಡಿ ತನಿಖೆಗೆ ಆದೇಶದ ಮಾಡಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲಾಗುವುದು ಎಂದರು.
ಸಚಿವ ನಿರಾಣಿ ನವದೆಹಲಿಯಿಂದ ಬೆಂಗಳೂರಿಗೆ ರಾತ್ರಿ ಆಗಮಿಸಿದ ನಂತರ ನೇರವಾಗಿ ಘಟನಾ ಸ್ಥಳಕ್ಕೆ ಭೇಟಿ ನೀಡಿದರು.
ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಇದ್ದರು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement