ಸ್ಫೋಟಕ ವಸ್ತು ಬಳಕೆಗೆ ಕಡ್ಡಾಯ ಕಾನೂನು ಜಾರಿ, ಯಾರೇ ಭಾಗಿಯಾಗಿದ್ದರೂ ನಿರ್ದಾಕ್ಷಿಣ್ಯ ಕ್ರಮ:ನಿರಾಣಿ

ನವ ದೆಹಲಿ: ಇನ್ನು ಮುಂದೆ ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಸೋಟಕ ವಸ್ತುಗಳನ್ನು ಬಳಸಲು ಸರ್ಕಾರದಿಂದ ಅನುಮತಿ ಪಡೆದವರು ಮಾತ್ರ ಬಳಕೆ ಮಾಡಲು ಹೊಸ ಕಾನೂನು ಜಾರಿ ಮಾಡುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ನವ ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕಾನೂನು ಬಾಹಿರವಾಗಿ  ಕಲ್ಲು ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸ್ಪೋಟಕ ವಸ್ತುಗಳನ್ನು ಬಳಕೆ  ಮಾಡುತ್ತಿರುವುದರಿಂದಲೇ ಇಂಥ ಘಟನೆಗಳು ನಡೆಯುತ್ತವೆ ಎಂದು ಹೇಳಿದರು.
ಇದನ್ನು ತಡೆಯಲು  ಸದ್ಯದಲ್ಲೇ ಹೊಸ ಕಾನೂನು ಜಾರಿ ಮಾಡಲಾಗುವುದು. ಸರ್ಕಾರದಿಂದ  ಲೈಸೆನ್ಸ್ ಪಡೆದವರು ಮಾತ್ರ ಸ್ಫೋಟಕ ವಸ್ತುಗಳನ್ನು ಬಳಸುವ ಕಾನೂನು  ಜಾರಿ ಮಾಡಲಾಗುವುದು. ಕೆಲವು ಕಡೆ ಕಾನೂನು ಬಾಹಿರವಾಗಿ  ಕಲ್ಲುಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿಯಾದ ಕ್ರಮಗಳನ್ನು ಕೈಗೊಂಡಿದ್ದೇವೆ.  ಒಂದು ವೇಳೆ ನಮ್ಮ ಅಧಿಕಾರಿಗಳು ಇಂತಹುದರಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.
ಈ ಘಟನೆಗಳು ನುರಿತ ಕೆಲಸಗಾರರಿಗೆ ತರಬೇತಿ ಮತ್ತು ಗಣಿಗಾರಿಕೆ ಶಾಲೆಯ ಸ್ಥಾಪನೆಯ ಮಹತ್ವವನ್ನು ನಮಗೆ ನೆನಪಿಸುತ್ತವೆ. ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಗಣಿಗಾರಿಕೆ ಸ್ಥಳಗಳಲ್ಲಿ ಜಿಲಿಟಿನ್ ಕಡ್ಡಿಗಳು ಸ್ಫೋಟಕಗಳು ಮತ್ತು ಇತರ ವಸ್ತುಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ಅಗತ್ಯವಿದೆ ಎಂದರು.
ರಾಜ್ಯದಲ್ಲಿ ಗಣಿಗಾರಿಕೆ ಶಾಲೆ ಸ್ಥಾಪಿಸಲು ತೀರ್ಮಾನಿಸಿದ್ದೇವೆ.ಗಣಿಗಾರಿಕೆ ಪ್ರದೇಶಗಳಲ್ಲಿನ ಜನರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ. ಅಕ್ರಮ ಗಣಿಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರು ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಘಟನೆಯಲ್ಲಿ ಯಾರೇ ಪ್ರಭಾವಿಗಳಾಗಿದ್ದರೂ ಎಷ್ಟೇ ದೊಡ್ಡವರಾಗಿದ್ದರೂ ಸುಮ್ಮನೆ ಬಿಡುವುದಿಲ್ಲ.  ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ,  ನಾವು ಎಲ್ಲ ರೀತಿಯ ಮುಂಜಾಗ್ರತಾ  ಕ್ರಮಗಳನ್ನು ಕೈಗೊಂಡಿದ್ದರೂ ಪುನಃ ಪುನಃ ಮರುಕಳಿಸುತ್ತಿರುವುದು ನೋವಿನ ಸಂಗತಿ ಎಂದರು.
ಘಟನೆ ನಡೆದ ನಂತರ ಕೆಲವರು ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ.ಪೊಲೀಸರು ತಕ್ಷಣವೇ ಅವರನ್ನು ಬಂಧಿಸುವ ವಿಶ್ವಾಸವಿದೆ. ಘಟನೆಗೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು. ಸಚಿವರಾದ ಬಸವರಾಜ್ ಬೊಮ್ಮಾಯಿ, ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮತ್ತು ನಮ್ಮ ಇಲಾಖೆಗಳನ್ನು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪರಿಸ್ಥಿತಿಯನ್ನು ಅಂದಾಜು ಮಾಡಿದ್ದಾರೆ. .ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಸಹ ಮಾಹಿತಿ ನೀಡಲಾಗಿದೆಸಂತ್ರಸ್ತರ ಕುಟುಂಬಗಳಿಗೆ ಮತ್ತು ಗಾಯಾಳುಗಳಿಗೆ ಸರ್ಕಾರವು ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡಲಿದೆ ಎಂದು  ನಿರಾಣಿ ತಿಳಿಸಿದರು.
ಶಿವಮೊಗ್ಗ ಸ್ಫೋಟಕ್ಕೆ ಮುಂಚಿತವಾಗಿ ಇವುಗಳನ್ನು ಸಂಗ್ರಹಿಸಲಾಗಿದೆ ಎಂದು ನಾನು ಅಧಿಕಾರಿಗಳಿಂದ ತಿಳಿದುಕೊಂಡಿದ್ದೇನೆ. ಕೆಲವು ಅಧಿಕೃತ ಮತ್ತು ವೈಯಕ್ತಿಕ ಕೆಲಸಗಳಿಂದಾಗಿ ನಾನು ದೆಹಲಿಯಲ್ಲಿದ್ದೇನೆ. ಇಂದು ಸಂಜೆ ಬೆಂಗಳೂರಿಗೆ ತೆರಳಲಿದ್ದು, ನೇರವಾಗಿ ಚಿಕ್ಕಬಲ್ಲಾಪುರದ ಸ್ಫೋಟದ ಸ್ಥಳಕ್ಕೆ ಹೋಗುತ್ತೇನೆ ಎಂದು ತಿಳಿಸಿದರು

ಪ್ರಮುಖ ಸುದ್ದಿ :-   ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ ಇನ್ನಿಲ್ಲ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement