ಪ್ರತ್ಯೇಕ ಜಿಲ್ಲೆಗೆ ಒತ್ತಾಯಿಸಿ ಶಿರಸಿ ಬಂದ್‌

ಶಿರಸಿ: ಉತ್ತರ ಕನ್ನಡದ ಕರಾವಳಿಯಿಂದ ಪ್ರತ್ಯೇಕಿಸಿ ಪ್ರತ್ಯೇಕ ಶಿರಸಿ ಜಿಲ್ಲೆ ಮಾಡುವಂತೆ ಆಗ್ರಹಿಸಿ ಬುಧವಾರ ಶಿರಸಿ ತಾಲೂಕು ಬಂದ್ ಮಾಡಲಾಯಿತು. ಶಿರಸಿ ಜಿಲ್ಲಾ ಹೋರಾಟ ಸಮಿತಿ ಪ್ರತಿಭಟನೆಯನ್ನೂ ನಡೆಸಿತು. ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಾದ ಶಿರಸಿ,ಸಿದ್ದಾಪುರ,ಮುಂಡಗೋಡು,ಯಲ್ಲಾಪುರ,ಜೋಯಿಡಾ,ಹಳಿಯಾಳ ಸೇರಿಸಿ ಶಿರಸಿ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಲಾಯಿತು.
ಶಿವಾಜಿ ಸರ್ಕಲ್ ನಿಂದ ಪ್ರತಿಭಟನೆ ಆರಂಭಿಸಿದ ಪ್ರದರ್ಶನಕಾರರು ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಶಿರಸಿ,ಸಿದ್ದಾಪುರ,ಮುಂಡಗೋಡು,ಯಲ್ಲಾಪುರ,ಜೋಯಿಡಾ,ಹಳಿಯಾಳ ಸೇರಿಸಿ ಶಿರಸಿ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ಮನವಿ ಸಲ್ಲಿಸಿದರು.
ಬಂದ್ ಹಿನ್ನಲೆಯಲ್ಲಿ ಶಿರಸಿ ತಾಲೂಕಿನಾದ್ಯಂತ ಅಂಗಡಿ ಮುಂಗಟ್ಟುಗಳು ಹಾಗೂ ವಾಣಿಜ್ಯ ಚಟುವಟಿಕೆಗಳು ಸ್ಥಗಿತವಾಗಿತ್ತು. ಆಟೋ ಚಾಲಕರು, ಕನ್ನಡ ಸಂಘಟನೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳವರು ಬಂದ್‌ಗೆ ಬೆಂಬಲ ನೀಡಿದ್ದವು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ವಿವೇಕಾನಂದ ವೈದ್ಯ, ಉತ್ತರ ಕನ್ನಡ ಜಿಲ್ಲೆ ಎರಡಾಗುವುದು ಅಭಿವೃದ್ಧಿ ದೃಷ್ಟಿಯಿಂದ ಅನಿವಾರ್ಯ. ಈ ಜಿಲ್ಲೆ ಬಹಳ ವಿಸ್ತಾರವಾಗಿದೆ. ಹೀಗಾಗಿ ಘಟ್ಟದ ಮೇಲಿನ ತಾಲೂಕುಗಳನ್ನು ಸೇರಿಸಿ ಪ್ರತ್ಯೇಕ ಜಿಲ್ಲೆ ಘೋಷಣೆಯಾಗಬೇಕು ಎಂಬುದು ನಮ್ಮ ಒತ್ತಾಯ. ಆದರೆ, ಈ ಬಗ್ಗೆ ಯಾವ ಜನಪ್ರತಿನಿಧಿಗಳೂ ಮಾತನಾಡುತ್ತಿಲ್ಲ ಎಂದರು.
ಜಿಪಂ ಸದಸ್ಯ ಜಿ.ಎನ್.ಹೆಗಡೆ ಮುರೇಗಾರ, ಮೊದಲು ಪ್ರತ್ಯೇಕ ಜಿಲ್ಲೆ ರಚನೆಯಾಗಬೇಕು ಎಂಬುದು ನಮ್ಮ ಹಕ್ಕೊತ್ತಾಯ. ಆನಂತರದಲ್ಲಿ . ಜಿಲ್ಲಾ ಕೇಂದ್ರದ ಬಗ್ಗೆ ನಂತರ ತೀರ್ಮಾನಿಸಿದರಾಯಿತು ಎಂದರು.
ಬನವಾಸಿ ತಾಲ್ಲೂಕು ಹೋರಾಟ ಸಮಿತಿ ಅಧ್ಯಕ್ಷ ಉದಯಕುಮಾರ ಕಾನಳ್ಳಿ, ಇಲ್ಲಿರುವ ನಾಯಕರಿಗೆ ರಾಜಕೀಯ ಇಚ್ಛಾಶಕ್ತಿ ಕೊರತೆ ಇದೆ. ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ ಜನಪ್ರತಿನಿಧಿಗಳು ಈ ಬಗ್ಗೆ ಸ್ಪಂದನೆ ನೀಡುತ್ತಿಲ್ಲ.ಅವರು ಈ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಹೋರಾಟ ಸಮಿತಿಯ ಅಧ್ಯಕ್ಷ ಉಪೇಂದ್ರ ಪೈ ಮಾತನಾಡಿ ಮುಂದಿನ ದಿನಗಳಲ್ಲಿಯೂ ನಮ್ಮ ಹೋರಾಟ ಮುಂದುವರೆಯಲಿದೆ,ಯಲ್ಲಾಪುರ ಜಿಲ್ಲೆಯಾಗಬೇಕು ಎಂದು ಯಲ್ಲಾಪುರ ಜನ ಹೊಸ ಹೋರಾಟ ಪ್ರಾರಂಭಿಸುತ್ತಿದ್ದಾರೆ. ಆದರೆ ಪ್ರತ್ಯೇಕ ಜಿಲ್ಲೆಗೆ ಯಲ್ಲಾಪುರದ ಜನ ನಮ್ಮೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಪ್ರಮುಖರಾದ ಪರಮಾನಂದ ಹೆಗಡೆ, ಮಂಜು ಮೊಗೇರ, ಎಂ.ಎಂ.ಭಟ್ಟ ಇನ್ನೂ ಅನೇಕರಿದ್ದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement