ರೈತರ ಮೇಲಿನ ದಬ್ಬಾಳಿಕೆ ಕಡಿವಾಣಕ್ಕೆ ನೂತನ ಕೃಷಿ ಕಾಯ್ದೆ ಜಾರಿ

ಬೆಂಗಳೂರು: ಕಾಯ್ದೆಗಳ ಹೆಸರಿನಲ್ಲಿ ಕಳೆದ 3 ವರ್ಷಗಳಲ್ಲಿ ರೈತರಿಂದ ಸುಮಾರು 25 ಕೋಟಿ ದಂಡ ವಸೂಲಿ ಮಾಡಲಾಗಿದೆ. ಇಂತಹ ದಬ್ಬಾಳಿಕೆ ಕಡಿವಾಣಕ್ಕೆ ನೂತನ ಕೃಷಿ ಕಾಯ್ದೆ ಜಾರಿಗೊಳಿಸಲಾಗುತ್ತಿದೆ’ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಕೆಂಗೇರಿ ಉಪನಗರದ ಗಣೇಶ ಆಟದ ಮೈದಾನದಲ್ಲಿ ಕೆಂಗೇರಿ- ಉಪನಗರ ರೋಟರಿ ಸಂಸ್ಥೆಯ ರಜತ ಮಹೋತ್ಸವ ಅಂಗವಾಗಿ ಆಯೋಜಿಸಲಾಗಿದ್ದ ‘ರೈತ ಸಂತೆ’ ಉದ್ಘಾಟಿಸಿ ಮಾತನಾಡಿದ ಅವರು, ಹೊಸ ಕೃಷಿ ಕಾಯ್ದೆಗಳಿಂದ ರೈತರ ಅಭಿವೃದ್ಧಿಯಾಗಲಿದೆ. ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆ ಹಾಗೂ ಮಾರುಕಟ್ಟೆ ದೊರಕಿಸಲು ನೂತನ ಕೃಷಿ ಕಾಯ್ದೆ ರೂಪಿಸಲಾಗಿದೆ ಎಂದರು.
ಆತ್ಮ ನಿರ್ಭರ ಯೋಜನೆಯಡಿ ಮಂಡ್ಯದ ಬೆಲ್ಲ, ಬ್ಯಾಡಗಿ ಮೆಣಸಿನಕಾಯಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಒದಗಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಇದರಿಂದ ರೈತರ ಆದಾಯ ದುಪ್ಪಟ್ಟಾಗಲಿದೆ. ರೈತ ಪರ ಕಾರ್ಯ ನಿರ್ವಹಿಸುವ ಯಾವುದೇ ಸಂಘ ಸಂಸ್ಥೆಗಳಿಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಇದೇ ಸಂರ್ಭದಲ್ಲಿ ರೈತರು ಹಾಗೂ ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸುವ ವರ್ಥ್‌ ಮೈ ವ್ಯಾಲ್ಯೂ ಮೊಬೈಲ್ ಅಪ್ಲಿಕೇಷನ್ ಬಿಡುಗಡೆ ಮಾಡಿದರು.
ಐಐಎಚ್‍ಆರ್ ಪ್ರಧಾನ ವಿಜ್ಞಾನಿ ಡಾ.ಬಿ.ನಾರಾಯಣಸ್ವಾಮಿ ಮಾತನಾಡಿ, ರೈತ ಸಂತೆಗಳೂ ಮಧ್ಯವರ್ತಿಗಳಿಂದ ಮುಕ್ತವಾಗಿಲ್ಲ. ದಳ್ಳಾಳಿಗಳೇ ರೈತಸಂತೆಯ ಎಲ್ಲಾ ಉತ್ಪನ್ನಗಳನ್ನು ಕೊಂಡು, ನಂತರ ತಮಗಿಷ್ಟ ಬಂದ ಬೆಲೆಗೆ ಮಾರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement