ಬೆಂಗಳೂರು: ಕೊವಿಡ್ ಸಂಕಷ್ಟದ ಸನ್ನಿವೇಶದಲ್ಲಿ ಬಜೆಟ್ ಮಂಡನೆ ಮಾಡಿದ್ದೇನೆ, ಪ್ರತಿಕೂಲ ಪರಿಸ್ಥಿತಿಯಲ್ಲೂ ಸರ್ವರಿಗೂ ಒಳ್ಳೆಯದನ್ನು ನೀಡುವ ಬಜೆಟ್ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಸೋಮವಾರ ಬಜೆಟ್ ಮಂಡನೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯಾರಿಗೂ ಒಂದು ರೂಪಾಯಿ ತೆರಿಗೆ ಹಾಕಿಲ್ಲ, ಯಾರಿಗೂ ಹೊರೆಯಾಗದ ಬಜೆಟ್ ಮಂಡಿಸಿದ್ದೇನೆ,ಇಂತ ಸಂಕಷ್ಟದ ಪರಿಸ್ಥಿತಿಯಲ್ಲಿ ಯಾರಿಗೂ ತೆರಿಗೆ ಹಾಕದೆ ಬಜೆಟ್ ಮಂಡಿಸಿದ್ದು ಇತಿಹಾಸದಲ್ಲೇ ಇದು ಮೊದಲು” ಎಂದು ಬಜೆಟ್ ಅನ್ನು ಸಮರ್ಥಿಸಿಕೊಂಡರು.
ಕಳೆದ ವರ್ಷದ ಆಯವ್ಯಯದ ಗಾತ್ರಕ್ಕಿಂತಲೂ 8,314 ಕೋಟಿ ರೂ. ಹೆಚ್ಚಿನ ಗಾತ್ರದ ಬಜೆಟ್ ಇದಾಗಿದೆ. ವಿತ್ತೀಯ ಶಿಸ್ತನ್ನು ಕಾಪಾಡಿಕೊಳ್ಳುವುದರ ಜೊತೆಗೆ, ಆರ್ಥಿಕ ವರ್ಷದ ಕಡೆಯ ತ್ರೈಮಾಸಿಕದಲ್ಲಿ ಪರಿಸ್ಥಿತಿ ತುಸು ಸುಧಾರಿಸಿದ್ದರಿಂದ ಈ ರೀತಿಯ ಬಜೆಟ್ ಮಂಡನೆ ಸಾಧ್ಯವಾಗಿದೆ. ಅಭಿವೃದ್ಧಿ ಮತ್ತು ಜನ ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನದ ಕೊರತೆಯಾಗದಂತೆ ಎಚ್ಚರಿಕೆ ವಹಿಸಿದ್ದು ವೈಯಕ್ತಿಕವಾಗಿ ನನಗೆ ತೃಪ್ತಿ ತಂದಿದೆ ಎಂದು ಹೇಳಿದರು.
ಬಜೆಟ್ ಮಂಡನೆಗೂ ಮುನ್ನ ಕಾಂಗ್ರೆಸ್ ಸದಸ್ಯರು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ, ಯಡಿಯೂರಪ್ಪ ಅವರಿಗೆ ಬಜೆಟ್ ಮಂಡಿಸುವ ನೈತಿಕತೆ ಇಲ್ಲ ಎಂದು ಪ್ರತಿಭಟಿಸಿ ಸಭಾತ್ಯಾಗ ಮಾಡಿದರು. ಇದಕ್ಕೂ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, “ಕಾಂಗ್ರೆಸ್ನವರ ನೈತಿಕತೆ ಬಗ್ಗೆ ನಾಳೆ ವಿಧಾನಸಭೆಯಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ಗುಡುಗಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಿದ್ದರಾಮಯ್ಯನವರು ಮುಂದಿನ ಬಾರಿಯೂ ಪ್ರತಿಪಕ್ಷದಲ್ಲಿಯೇ ಕುಳಿತಿಕೊಳ್ಳುತ್ತಾರೆ. ಅವರನ್ನು ಪ್ರತಿಪಕ್ಷದಲ್ಲೇ ಕೂರಿಸದಿದ್ದರೆ ನಾನ ಯಡಿಯೂರಪ್ಪನೇ ಅಲ್ಲ, ಮುಂದಿನ ಚುನಾವಣೆಯಲ್ಲಿ ನಾವು 130 ರಿಂದ 135 ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ಸವಾಲು ಹಾಕಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ