ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಮಾರ್ಗಸೂಚಿಗಳನ್ನು ಜಾರಿಗೆ ತರಲು ಸೋಮವಾರ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಯಲ್ಲಿ
ರಾಜ್ಯದಲ್ಲಿ ಕೊರೊನಾ ಹೆಚ್ಚಳದ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಲಾಕ್ಡೌನ್, ಸೆಮಿಲಾಕ್ಡೌನ್, ರಾತ್ರಿ ಕರ್ಫ್ಯೂ ಜಾರಿ ಮಾಡುವುದು ಸದ್ಯಕ್ಕೆ ಬೇಡ ಎಂಬಾಭಿಪ್ರಾಯ ವ್ಯಕ್ತವಾಗಿದ್ದರಿಂದ ಲಾಕ್ಡೌನ್ ಬದಲಿಗೆ ನಿಯಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.
. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್, ಕೊರೊನಾ ತಡೆಗೆ ಸೆಮಿಲಾಕ್ಡೌನ್ ಮತ್ತು ರಾತ್ರಿ ಕರ್ಫ್ಯೂ ಜಾರಿ ಮಾಡುವ ಅಗತ್ಯತೆ ಬಗ್ಗೆ ಹೇಳಿದರು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಜನ ನಿಯಮಗಳನ್ನು ಪಾಲನೆ ಮಾಡುವಂತೆ ಬಿಗಿ ಕ್ರಮ ಕೈಗೊಳ್ಳುವುದು ಈಗ ಒಲ್ಳೆಯದು. ಸಂದರ್ಭ ನೋಡಿಕೊಂಡು ಮುಂದೆ ತೀರ್ಮಾನ ಕೈಗೊಳ್ಳಲು ಒಲುವು ವ್ಯಕ್ತಪಡಿಸಿದರು ಎನ್ನಲಾಗಿದೆ.
ರಾಜ್ಯದ ಆರ್ಥಿಕ ಪರಿಸ್ಥಿತಿ ಈಗ ಸುಧಾರಣೆ ಕಾಣುತ್ತಿದೆ. ಇಂತಹ ಸಂದರ್ಭದಲ್ಲಿ ಮತ್ತೆ ಲಾಕ್ಡೌನ್ ಜಾರಿ ಆರ್ಥಿಕ ದೃಷ್ಟಿಯಿಂದ ಸಮರ್ಪಕವಲ್ಲ. ಹೀಗಾಗಿ ಕೊರೊನಾ ಸೋಂಕು ಮತ್ತಷ್ಟು ಹೆಚ್ಚಾದರೆ ನಿಯಮಗಳನ್ನು ಪರಿಷ್ಕರಣೆ ಮಾಡಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳ ಕೈಗೊಳ್ಳುವ ತೀರ್ಮಾನಕ್ಕೆ ಬರಲಾಗಿದೆ ಎನ್ನಲಾಗಿದೆ.
ಸೋಂಕು ಇದೇ ರೀತಿ ಹೆಚ್ಚಾಗುತ್ತಾ ಹೋದರೆ ತಜ್ಞರ ಜತೆ ಚರ್ಚಿಸಿ ಅಭಿಪ್ರಾಯ ಪಡೆಯುವ, ಸದ್ಯಕ್ಕಂತೂ ಲಾಕ್ಡೌನ್ ಬೇಡ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಕ್ಕೆ ಸಂಪುಟ ಸದಸ್ಯರು ಸಹಮತಿ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ