ಮುಂಬೈ: ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಸಲ್ಲಿಸಿದ್ದ ಪ್ರಕರಣದಲ್ಲಿ 15 ದಿನಗಳಲ್ಲಿ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದ ನಂತರ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಂಬೈ ಹೈಕೋರ್ಟ್ ಆದೇಶ ನೀಡಿದ ಸುಮಾರು ಒಂದು ತಾಸಿನಲ್ಲಿ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ದೇಶ್ಮುಖ್ ಮೂರು ಪಕ್ಷಗಳ ಒಕ್ಕೂಟದ ಮಹಾ ವಿಕಾಸ ಅಘಾಡಿ ಸರ್ಕಾರದ ಅಂಗ ಪಕ್ಷವಾದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಪಕ್ಷಕ್ಕೆ ಸೇರಿದವರು. ಮುಂಬೈ ಹಿಂದಿನ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಗ್ ಅವರು ಅಂಬಾನಿ ಮನೆ ಬಳಿ ಎಸ್ಯುವಿಯಲ್ಲಿ ಸ್ಫೋಟಕ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಬಂಧಿಸಿರುವ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಅವರಿಗೆ ತಿಂಗಳಿಗೆ ೧೦೦ ಕೋಟಿ ರೂ.ಸಂಗ್ರಹಿಸುವಂತೆ ಒತ್ತಡ ಹೇರಿದ್ದರು ಎಂದು ಗೃಹ ಸಚಿವ ದೇಶ್ಮುಖ್ ವಿರುದ್ಧ ಆರೋಪಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದರು. ನಂತರ ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ನಡೆಸಬೇಕೆಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಸಿಬಿಐಗೆ ೧೫ ದಿನಗಳ ಒಳಗೆ ಪ್ರಾಥಮಿಕ ತನಿಖೆ ನಡೆಸುವಂತೆ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಅನಿಲ ದೇಶ್ಮುಖ್ ಅವರು ಸೋಮವಾರ ತಮ್ಮ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ