ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌.. ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ ಸಾಧ್ಯತೆ

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿದ್ದು, ಇನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯುಗಾದಿಯ ಮಾರನೇ ದಿನ ಬುಧವಾರ ಪ್ಲವ ಸಂವತ್ಸರದ ಮೊದಲ ಮಳೆ ರಾಜಧಾನಿ ಬೆಂಗಳೂರಿಗೆ ತಂಪೆರೆದಿದೆ. ಬೆಳಗ್ಗೆಯಿಂದ ಮೋಡ ಮುಸುಕಿದ ವಾತವರಣವಿದ್ದು, ಮಳೆಯಾಗುವ ಬಗ್ಗೆ ಮೊದಲೇ ಹವಾಮಾನ ಇಲಾಖೆ ವರದಿ ಮಾಡಿತ್ತು.
ಬುಧವಾರ ಹುಬ್ಬಳ್ಳಿ-ಧಾರವಾಡದಲ್ಲಿಯೂ ಸ್ವಲ್ಪ ಜೋರಾಗಿಯೇ ಮಳೆ ಬಿದ್ದಿದೆ. ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದರೂ ಬುಧವಾರ ನಾಲ್ಕನೇ ದಿನ ಸುಮಾರು ಅರ್ಧತಾಸು ಕಾಲ ಮಳೆ ಸ್ವಲ್ಪ ಜೋರಾಗಿಯೇ ಸುರಿದಿದೆ. ಬೆಳಿಗ್ಗೆಯಿಂದಲೇ ಮಳೆಯ ವಾತಾವರಣವಿತ್ತು. ಸಂಜೆ ೪ರ ಸುಮಾರಿಗೆ ಮಳೆ ಸುರಿದಿದೆ. ಕೊಡಗಿನಲ್ಲೂ ಕೂಡ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಕೆಲವು ಭಾಗಗಳು, ದಕ್ಷಿಣ ಕನ್ನಡ ಜಿಲ್ಲೆ ಕೆಲವು ಭಾಗಗಳು, ವಿಜಯಪುರ ಮೊದಲಾದೆಡೆ ಕಳೆದೆರಡು ದಿನಗಳಲ್ಲಿ ಮಳೆಯಾದ ವರದಿಯಾಗಿದೆ. ಕುಂದಾಪುರ, ವಿಜಯಪುರ ಮೊದಲಾದೆಡೆ ಆಲಿಕಲ್ಲು ಮಳೆಯಾದ ವರದಿಯಾಗಿತ್ತು.

ಇನ್ನೂ ಎರಡರಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. . ಹವಾಮಾನ ಬದಲಾವಣೆ ಹಾಗೂ ನೈಋತ್ಯ ಚಂಡಮಾರುತದ ಕಾರಣ ರಾಜ್ಯದ ಹಲವೆಡೆ ಸಾಧಾರಾಣದಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬುಧವಾರ ಮತ್ತು ಗುರುವಾರ (ಏಪ್ರಿಲ್‌ ೧೫) ರಾಜ್ಯದ ಹಲವೆಡೆ ಮೋಡ ಮುಸುಕಿದ ವಾತಾವರಣ ಇರಲಿದ್ದು, ಗುಡುಗು ಮಿಂಚಿನ ಮಳೆಯಾಗಬಹುದು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಾಮರಾಜನಗರ, ಮೈಸೂರು, ಹಾಸನ ಮತ್ತು ಶಿವಮೊಗ್ಗ,ಧಾರವಾಡ, ಹಾವೇರಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಹಳದಿ ಆಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡದ ಧರ್ಮಸ್ಥಳ, ಪಣಂಬೂರು ಹಾಗೂ ಉತ್ತರ ಕನ್ನಡದ ಯಲ್ಲಾಪುರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ತಾಪಮಾನದ ಹೆಚ್ಚಳದಿಂದಾಗಿ ಹಲವೆಡೆ ಮಳೆಯಾಗಲಿದೆ. ಅದರಲ್ಲಿಯೂ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇನ್ನು ಎರಡು ದಿನಗಳು ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ತೆಲಂಗಾಣ, ಕೇರಳದಲ್ಲೂ ಮೂರ್ನಾಲ್ಕು ದಿನ ಮಳೆಯಾಗಲಿದೆ.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement