ಆಘಾತಕಾರಿ..ಬೆಂಗಳೂರಿನಲ್ಲಿ ಸಮುದಾಯಕ್ಕೂ ಹಬ್ಬುತ್ತಿದೆ ಎಂದ ಆರೋಗ್ಯ ಸಚಿವರು…!

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ವೈರಸ್‌ ಸಮುದಾಯಕ್ಕೂ ಹಬ್ಬುತ್ತಿದೆ ಎಂಬ ಆಘಾತಕರ ಮಾಹಿತಿಯನ್ನು ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ ಹೊರ ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಸೋಂಕು ನಮ್ಮ ನಿರೀಕ್ಷೆಗೂ ಮೀರಿ ಹಬ್ಬುತ್ತಿದೆ. ಇದು ಸಮುದಾಯಕ್ಕೂ ಹಬ್ಬುತ್ತಿದೆ. ನಾವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಸೋಂಕು ಸಮುದಾಯಕ್ಕೆ ಹಬ್ಬಿರುವುದರ ಬಗ್ಗೆ ಕೇಂದ್ರ ಸರ್ಕಾರವೇ ಮಾಹಿತಿ ನೀಡಿದೆ. ನಾವು ಬಿಗಿಯಾದ ಕ್ರಮಗಳನ್ನು ಕೈಗೊಳ್ಳದಿದ್ದರೆ ಪರಿಸ್ಥಿತಿ ಕೈ ಮೀರಲಿದೆ. ಬೆಂಗಳೂರಿಗೆ ವಿಶೇಷವಾದ ಕಠಿಣ ಕ್ರಮ ಅನಿವಾರ್ಯವಾಗಿದೆ. ಈಗಾಗಲೇ ಸಾಕಷ್ಟು ಸಮಸ್ಯೆಗಳು ಎದುರಾಗಿವೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಕೊರೊನಾ ಸೋಂಕು ದಿನೇದಿನೇ ಹೆಚ್ಚಳವಾಗುತ್ತಿರುವುದರಿಂದ ಆಸ್ಪತ್ರೆಯಲ್ಲಿ ಐಸಿಯು ಹಾಸಿಗೆಳ ಕೊರತೆ ಉಂಟಾಗುತ್ತಿದೆ. ಆದರೂ ಎಲ್ಲರಿಗೂ ಉತ್ತಮ ಚಿಕಿತ್ಸೆ ನೀಡಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.
ಸೋಮವಾರ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಬೆಂಗಳೂರು ಪ್ರತಿನಿಧಿಸುವ ಸಚಿವರು, ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ಕಠಿಣವಾದ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಸುಧಾಕರ್ ತಿಳಿಸಿದರು.
ಐಸಿಯವಿನ ಸಾಮರ್ಥ್ಯಕ್ಕಿಂತ ಹೆಚ್ಚಾಗಿ ರೋಗಿಗಳು ಬರುತ್ತಿದ್ದಾರೆ. ಸರ್ಕಾರವು ಐಸಿಯು ಹೆಚ್ಚಳಕ್ಕೆ ಕ್ರಮ ಕೈಗೊಂಡಿದೆ ಎಂದ ಅವರು, ಸಾರ್ವಜನಿಕರು ಕೊರೊನಾ ಕುರಿತು ನಿರ್ಲಕ್ಷ್ಯ ತೋರಿದ್ದಾರೆ ಎಂದರು.
ಆಸ್ಪತ್ರೆಯಲ್ಲಿ ಸಮನ್ವಯತೆ ಸರಿಪಡಿಸಲು ವಲಯವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುತ್ತಿದ್ದೇವೆ. ಐಎಎಸ್, ಐಪಿಎಸ್, ಬಿಬಿಎಂಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಕಾರಿಗಳು ಇದರಲ್ಲಿ ಇರುತ್ತಾರೆ. ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.
ಏಕಾಏಕಿ ರೋಗಿಗಳ ಸಂಖ್ಯೆ ದಿಢೀರನೆ ಏರಿಕೆಯಾಗಿದೆ. ಕೊರತೆ ಎದುರಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಸಾರ್ವಜನಿಕರು ಕೊರೊನಾ ಮಾರ್ಗಸೂಚಿಗಳನ್ನು ಪಾಲನೆ ಮಾಡದ ಕಾರಣ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಸರ್ಕಾರ ಏನೇ ಬಿಗಿ ಕ್ರಮ ಕೈಗೊಂಡರೂ ಸಾರ್ವಜನಿಕರ ಸಹಕಾರವಿಲ್ಲದಿದ್ದರೆ ನಾವು ಏನು ಮಾಡಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕರ್ನಾಟಕದಲ್ಲೇ 800 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದನೆ ಮಾಡುವ ಸಾಮರ್ಥ್ಯವಿದೆ. ಪ್ರಸ್ತುತ ನಮ್ಮಲ್ಲಿ 300 ಮೆಟ್ರಿಕ್ ಟನ್ ಆಕ್ಸಿಜನ್ ಲಭ್ಯವಿದೆ. ಸದ್ಯಕ್ಕೆ ನಮಗೆ 200 ಮೆಟ್ರಿಕ್‍ಟನ್ ಆಕ್ಸಿಜನ್ ಬೇಕಾಗಿದೆ. ಹೆಚ್ಚುವರಿ ಆಕ್ಸಿಜನ್ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement