ಬೆಂಗಳೂರು: ಕೊರೊನಾ ಸೋಂಕು ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡುವ ಕುರಿತು ಪ್ರಧಾನಿ ಮೋದಿ ನಿರ್ದೇಶನಕ್ಕೆ ಕಾಯುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿ ಬಗ್ಗೆ ಪ್ರಧಾನಿ ಮೋದಿ ಏನು ಸೂಚನೆ ನೀಡುತ್ತಾರೆಯೋ ಅದನ್ನು ಪಾಲಿಸುವುದು ನಮ್ಮ ಜವಾಬ್ದಾರಿ. ಸುಪ್ರೀಂ ಕೋರ್ಟ್ ಸೇರಿದಂತೆ ಎಲ್ಲರೂ ನೀಡಿದ ಸಲಹೆ ಬಗ್ಗೆ ಸಂಜೆ ನಡೆಯುವ ಸಂಪುಟ ಸಭೆಯಲ್ಲಿ ಪ್ರಧಾನಿ ನಿರ್ಧಾರ ಕೈಗೊಳ್ಳಲಿದ್ದಾರೆ. ಅವರು ಯಾವ ನಿರ್ದೇಶನ ನೀಡಲಿದ್ದಾರೆ ಎಂಬ ಬಗ್ಗೆ ನಾವೆಲ್ಲರೂ ಕಾಯುತ್ತಿದ್ದೇವೆ. ಸಂಜೆಯ ಬಳಿಕ ಪ್ರಧಾನಿ ನಿರ್ಧಾರ ಪ್ರಕಟವಾಗಲಿದೆ ಎಂದು ಹೇಳಿದರು. ಒಂದು ವೇಳೆ ಪ್ರಧಾನಿ ಮೋದಿ ಲಾಕ್ ಡೌನ್ ಜಾರಿ ಮಾಡುವಂತೆ ಸಲಹೆ ನೀಡಿದರೆ ರಾಜ್ಯದಲ್ಲಿಯೂ ಮತ್ತೆ ಲಾಕ್ ಡೌನ್ ಜಾರಿಗೆ ಬರಲಿದೆ ಎಂಬುದನ್ನು ಸ್ಪಷ್ಟಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರುಗಳು ತಮ್ಮ ತಮ್ಮ ಜಿಲ್ಲೆಗಳಿಗೆ ತೆರಳಿ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಅದರಂತೆ ಎಲ್ಲಾ ಸಚಿವರು ಕಾರ್ಯನಿರ್ವಹಿಸಬೇಕು ಎಂದರು.


ನಿಮ್ಮ ಕಾಮೆಂಟ್ ಬರೆಯಿರಿ