ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ದರ ಶೇ.5ರ ಒಳಗೆ ಬಂದರೆ ಅನ್ಲಾಕ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಣ ಪ್ರಮಾಣ ಹಾಗೂ ಪಾಸಿಟಿವ್ ದರ ಇಳಿಮುಖಗೊಂಡಲ್ಲಿ ಲಾಕ್ಡೌನ್ ನಿರ್ಬಂಧ ತೆಗೆಯುವ ಕುರಿತು ಚಿಂತನೆ ಮಾಡಲಾಗುವುದು ಎಂದರು.

ನಾಳೆಯೊಳಗೆ ಗೊಂದಲ ನಿವಾರಣೆ…
ಮೈಸೂರು ಜಿಲ್ಲಾಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಮಧ್ಯೆ ಗೊಂದಲ ಉಂಟಾಗಿರುವುದು ನಿಜ. ಈಗಾಗಲೇ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದೇನೆ. ನಾಳೆಯೊಳಗಾಗಿ ಸಮಸ್ಯೆ ಬಗೆಹರಿಸುತ್ತೇನೆ.
-ಬಿ.ಎಸ್.ಯಡಿಯೂರಪ್ಪ , ಮುಖ್ಯಮಂತ್ರಿ
ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಶಕ್ತಿ ಮೀರಿ ಕಾರ್ಯ ನಿರ್ವಹಿಸುತ್ತಿದೆ. ಸಾರ್ವಜನಿಕರು ಸಹಕಾರ ನೀಡಿದಾಗ ಮಾತ್ರ ಕೊರೊನಾ ತಡೆಗಟ್ಟಲು ಸಾಧ್ಯ ಎಂದ ಅವರು, ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಸರ್ಕಾರ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ಮೂರನೇ ಅಲೆ ಎದುರಿಸಲು ಡಾ.ದೇವಿ ಪ್ರಸಾದ ಶೆಟ್ಟಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಹಣ ಫಲಾನುಭವಿಗಳಿಗೆ ತಲುಪಿಸುವ ಕೆಲಸವಾಗಬೇಕು. ಸೋಂಕಿತರ ಮೇಲೆ ನಿಗಾವಹಿಸಲು ಸೂಚಿಸಲಾಗಿದೆ. ಸೋಂಕಿತರನ್ನು ಹೋಂ ಐಸೋಲೇಷನ್ನಿಂದ ಕೊರೊನಾ ಕೇರ್ ಸೆಂಟರುಗಳಿಗೆ ಸ್ಥಳಾಂತರ ಮಾಡುವಂತೆ ಸೂಚಿಸಲಾಗಿದೆ ಎಂದರು.
9 ಸಾವಿರ ವಯಲ್ಸ್ ಹಂಚಿಕೆ :
ಬ್ಲಾಕ್ ಫಂಗಸ್ಗೆ ಚಿಕಿತ್ಸೆ ನೀಡಲು ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದಲ್ಲಿ 600 ಬೆಡ್ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 9000 ಅಂಪೋಟೆರಿಸನ್ ಬಿ ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.


ನಿಮ್ಮ ಕಾಮೆಂಟ್ ಬರೆಯಿರಿ