ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ

ಹಾವೇರಿ: ಕೋವಿಡ್ 3ನೇ ಅಲೆ ಮಕ್ಕಳ ಮೇಲೆ ಪ್ರಭಾವ ಬೀರುತ್ತದೆ ಎಂಬ ವರದಿಗಳಿವೆ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಮಕ್ಕಳ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 25ರ ಹೊತ್ತಿಗೆ ಕೋವಿಡ್ ಎರಡನೆಯ ಅಲೆ ನಿಯಂತ್ರಣಕ್ಕೆ ಬರುವ ಸಾಧ್ಯತೆ ಇದೆ. ಹೀಗಾಗಿ ಜೂನ್ 25ರ ನಂತರ ಮಕ್ಕಳ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಮುಂದಿನ ಮೂರು ತಿಂಗಳುಗಳ ಕಾಲ ನಿರಂತರವಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಮಕ್ಕಳ ತಜ್ಞರು ಮತ್ತು ಇತರೆ ವೈದ್ಯರು ಮಕ್ಕಳ ಆರೋಗ್ಯ ತಪಾಸಣೆ ಮಾಡಿ ಅವರಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಿದ್ದಾರೆ. ಯಾವ ಮಕ್ಕಳಿಗೆ ಪೌಷ್ಟಿಕತೆಯ ಕೊರತೆ ಇದೆಯೋ ಅವರಿಗೆ ಪೌಷ್ಟಿಕ ಆಹಾರ ನೀಡಲಾಗುವುದು ಎಂದರು.
ಜಿಲ್ಲಾ ಆಸ್ಪತ್ರೆಯಲ್ಲಿ 50 ವೆಂಟಿಲೇಟರ್ : ಈ ತಿಂಗಳ ಅಂತ್ಯದೊಳಗೆ ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿನ ವೆಂಟಿಲೇಟರ್ ಗಳ ಸಂಖ್ಯೆಯನ್ನು 50 ಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದೆ. ಈಗಾಗಲೇ 32 ವೆಂಟಿಲೇಟರ್ ಗಳು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಥೆಯ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಮೂರು ವೆಂಟಿಲೇಟರ್ ಗಳನ್ನು ಜಿಲ್ಲೆಗೆ ಮಂಗಳವಾರ ದಾನ ಮಾಡಿದ್ದಾರೆ.
8 ವೆಂಟಿಲೆಟರ್ ಗಳನ್ನು ಸರ್ಕಾರ ಒದಗಿಸಿದೆ. ಬಾಕಿ ಉಳಿದ ವೆಂಟಿಲೇಟರ್ ಗಳನ್ನು ಸರ್ಕಾರದಿಂದ ಹಾಗೂ ದಾನಿಗಳಿಂದ ಪಡೆದು ಜಿಲ್ಲಾ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಗಳ ಸಂಖ್ಯೆಯನ್ನು 50ಕ್ಕೆ ಹೆಚ್ಚಿಸಲಾಗುವುದು. ಇದಕ್ಕೆ ಬೇಕಾದ ಸಿಬ್ಬಂದಿ ಮತ್ತು ಅವರಿಗೆ ತರಬೇತಿಯನ್ನು ನೀಡುವ ಕೆಲಸವನ್ನು ಜಿಲ್ಲಾಧಿಕಾರಿಗಳು ನಿರ್ವಹಿಸಲಿದ್ದಾರೆ ಎಂದರು.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement