ಕರ್ನಾಟಕದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿಜ್ಞಾನ ಆಧಾರಿತ ಕೋರ್ಸ್‌ ಬೋಧನೆ; ಜುಲೈ ಒಳಗೆ ವರದಿಗೆ ಡಿಸಿಎಂ ಸೂಚನೆ

ಬೆಂಗಳೂರು: ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿಜ್ಞಾನ ಆಧಾರಿತ ಕೋರ್ಸ್‌ ಬೋಧನೆ ವಿಚಾರವಾಗಿ ಜುಲೈ ಒಳಗೆ ವರದಿ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸೂಚಿಸಿದ್ದಾರೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಬಹುಶಿಸ್ತೀಯ ಬೋಧನಾ ಕ್ರಮದಂತೆ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ವಿಜ್ಞಾನ ಆಧಾರಿತ ಕೋರ್ಸುಗಳನ್ನು ಬೋಧಿಸುವ ಬಗ್ಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ತಜ್ಞರ ಜತೆ ಗುರುವಾರ ಸಮಾಲೋಚನೆ ನಡೆಸಿದರು.
ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರೊ.ಕರಿಸಿದ್ದಪ್ಪ ಹಾಗೂ ಗೋಪಾಲ ಜೋಶಿ ಆನ್‌ಲೈನ್‌ ಮೂಲಕ ಭಾಗಿಯಾಗಿದ್ದರು.
ರಾಜ್ಯದಲ್ಲಿ ಒಟ್ಟು 220 ಎಂಜಿನಿಯರಿಂಗ್ ಕಾಲೇಜುಗಳಿದ್ದು, ಈ ಪೈಕಿ 100 ಕಾಲೇಜುಗಳಲ್ಲಿ ಅತ್ಯುತ್ತಮ ಮೂಲಸೌಕರ್ಯಗಳಿವೆ. ಬಿಎಸ್ಸಿ ಮಾದರಿಯ 4 ವರ್ಷಗಳ ವಿಜ್ಞಾನ ಆಧಾರಿತ ಕೋರ್ಸುಗಳನ್ನು ಈ ಕಾಲೇಜುಗಳಲ್ಲಿ ಬೋಧಿಸುವ ಸಾಧ್ಯತೆ ಬಗ್ಗೆ ಜುಲೈ ಅಂತ್ಯದೊಳಗೆ ಒಂದು ನಿರ್ದಿಷ್ಟ ಕಾರ್ಯ ಚೌಕಟ್ಟು (ಕಾರ್ಯಸೂಚಿ) ರೂಪಿಸುವಂತೆ ಪ್ರೊ.ತಿಮ್ಮೇಗೌಡ ಅವರಿಗೆ ಅವರು ಸೂಚನೆ ನೀಡಿದರು.
ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್‌, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕ ಗೋಪಾಲ ಜೋಶಿ, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ ಪ್ರಭಾಕರ, ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ಅವರೊಂದಿಗೆಡಾ.ಅಶ್ವತ್ಥ ನಾರಾಯಣ ಅವರು ಮಹತ್ವದ ಚರ್ಚೆ ನಡೆಸಿದರು.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಈಗಾಗಲೇ ಸಂಪುಟ ಒಪ್ಪಿಗೆ ನೀಡಿದೆ. ಹೀಗಾಗಿ ಈ ವರ್ಷದಿಂದಲೇ ಈ ಕೋರ್ಸುಗಳನ್ನು ಬೋಧಿಸಲು ಸಾಧ್ಯವೇ? ಅದಕ್ಕೇನಾದರೂ ಕಾನೂನು ತೊಡಕುಗಳು ಇವೆಯೇ ಎಂಬಿತ್ಯಾದಿ ಅಂಶಗಳ ಬಗ್ಗೆ ಪರೀಶೀಲನೆ ನಡೆಸಿ ಸಮಗ್ರ ವರದಿ ನೀಡುವಂತೆ ಸೂಚಿಸಿದರು.
ಒಂದು ವೇಳೆ ಎಂಜಿನೀಯರಿಂಗ್‌ ಕಾಲೇಜುಗಳಲ್ಲಿ ಮೂಲ ವಿಜ್ಞಾನ ಬೋಧಿಸಲು ಕಾನೂನು ತೊಡಕಿದ್ದರೆ ಸುಗ್ರೀವಾಜ್ಞೆ ಜಾರಿಗೆ ತರಬೇಕಾಗುತ್ತದೆ. ಗಣಿತ, ಅನ್ವಯಿಕ ವಿಜ್ಞಾನ ಸೇರಿ ಯಾವ ಕೋರ್ಸುಗಳನ್ನು ಅಳವಡಿಸಬೇಕು ಎಂಬುದರ ಬಗ್ಗೆಯೂ ಅವರು ಸಮಾಲೋಚನೆ ನಡೆಸಿದರು.
ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌)ಯಲ್ಲಿ ವಿಜ್ಞಾನವನ್ನು ಯಾವ ರೀತಿ ಬೋಧಿಸಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಅದೇ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ವಿಜ್ಞಾನ ಕಲಿಕೆ ಆಗಬೇಕು ಹಾಗೂ ಹಾಲಿ ಇರುವ ಮೂಲ ಸೌಕರ್ಯದಿಂದಲೇ ಈ ಸುಧಾರಣೆಯನ್ನು ಜಾರಿಗೆ ತರಲು ಸಾಧ್ಯವೇ ಎಂಬುದರ ಬಗ್ಗೆ ವರದಿಯಲ್ಲಿ ಉಲ್ಲೇಖ ಮಾಡಬೇಕು ಎಂದರು.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement