ಬೆಂಗಳೂರು: ಕೋವಿಡ್ ಮೂರನೇ ಅಲೆ ಸಂಬಂಧ ಆರೋಗ್ಯ ತಜ್ಞ ಡಾ.ದೇವಿಶೆಟ್ಟಿ ನೇತೃತ್ವದ ತಜ್ಞರ ವರದಿ ತಮ್ಮ ಕೈಸೇರಿದ ಬಳಿಕ ಕೂಲಂಕಷವಾಗಿ ಪರಿಶೀಲಿಸಿ, ಶಾಲಾ ಚಟುವಟಿಕೆಗಳ ಕುರಿತು ಸೂಕ್ತ ನಿರ್ಣಯ ಕೈಗೊಳ್ಳಲಾಗುವುದೆಂದು ಶಿಕ್ಷಣ ಸಚಿವ ಸುರೇಶಕುಮಾರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಮುಖ್ಯಮಂತ್ರಿಗಳಿಗೆ ಸಲ್ಲಿಕೆಯಾಗಲಿದೆ ಎಂದು ಹೇಳಲಾಗಿದೆ. ಡಾ.ದೇವಿಶೆಟ್ಟಿ ಅವರ ವರದಿಯಲ್ಲಿ ತರಗತಿ ಕಲಿಕೆಯ ಬಗ್ಗೆ ಉಲ್ಲೇಖವಿದೆ ಎಂದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಆ ವರದಿ ತಮ್ಮ ಕೈಸೇರಿದ ಬಳಿಕವಷ್ಟೇ ಈ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯ ಎಂದರು.
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಡೆಸಿದ ಅಧ್ಯಯನದಲ್ಲಿ ಶಾಲೆಗಳು ನಡೆಯದ ಕಾರಣ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ಹೊರಗುಳಿದು ಶೈಕ್ಷಣಿಕ ಚಟುವಟಿಕೆಗಳಿಂದ ಹೊರಗುಳಿದಿದ್ದಾರೆ ಎಂಬ ಅಂಶವು ಬಹಿರಂಗಗೊಂಡಿದೆ.
ಈ ಅಧ್ಯಯನ ವರದಿಯ ಬೆಳಕಿನಲ್ಲಿ ನಾವು ಈ ವರ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಹೆಚ್ಚಿನ ಗಮನಹರಿಸುವ ಸವಾಲು ನಮ್ಮ ಮುಂದಿದೆ ಎಂದು ತಿಳಿಸಿದರು.
ಶಾಲೆಗಳನ್ನು ತೆರೆಯಬೇಕೆಂಬ ಉತ್ಸುಕತೆ, ತರಗತಿ ಕಲಿಕೆ ಮುಖ್ಯವೆನ್ನುವುದು ಸಾಮಾನ್ಯ ಅಭಿಪ್ರಾಯವಾಗಿದ್ದರೂ ಹಲವಾರು ಅಂಶಗಳನ್ನು ಗಮನಿಸಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಡಾ.ದೇವಿಶೆಟ್ಟಿ ಸಲ್ಲಿಸಲಿರುವ ವರದಿಯನ್ನು ಪರಿಪೂರ್ಣವಾಗಿ ಗಮನಿಸಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ