ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭ: ಆತುರದ ನಿರ್ಧಾರವಿಲ್ಲ

ಬೆಂಗಳೂರು: ಮಕ್ಕಳ ಸುರಕ್ಷತೆಯೇ ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿರುವ ಸಚಿವ ಡಾ.ಕೆ.ಸುಧಾಕರ್, ಶಾಲಾ ಕಾಲೇಜುಗಳನ್ನು ಪುನರಾರಂಭಿಸುವ ಬಗ್ಗೆ ತರಾತುರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾ ಶಾಲಾಕಾಲೇಜುಗಳನ್ನು ಆರಂಭಿಸಲು ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ. ಇದೊಂದು ಸೂಕ್ಷ್ಮ ವಿಷಯ. ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅವರ ಆರೋಗ್ಯವೂ ಅಷ್ಟೇ ಮುಖ್ಯ. ಹೀಗಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿಯೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಮಕ್ಕಳಿಗೆ ಸೋಂಕು ಬೇಗನೆ ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ನಾವು ಏನೇ ನಿರ್ಧಾರ ಕೈಗೊಳ್ಳುವ ಮುನ್ನ ಹತ್ತಾರು ಬಾರಿ ಯೋಚಿಸಬೇಕು. ನುರಿತ ಮಕ್ಕಳ ತಜ್ಞರು, ವೈದ್ಯರು, ನರ್ಸ್‍ಗಳನ್ನು ನೇಮಕ ಮಾಡಿಕೊಳ್ಳಬೇಕು. ಇದಕ್ಕೆ ಸಮಯಾವಕಾಶ ಬೇಕಾಗುತ್ತದೆ. ಪ್ರತಿಯೊಂದು ನಿರ್ಧಾರವೂ ಮುಖ್ಯವಾಗಿರುತ್ತದೆ ಎಂದು ಹೇಳಿದರು.
ಡಾ.ದೇವಿಶೆಟ್ಟಿ ನೇತೃತ್ವದ ಸಮಿತಿಯು ಸರ್ಕಾರಕ್ಕೆ ವರದಿ ನೀಡಲಿದೆ. ಈ ವರದಿಯನ್ನು ಆಧಾರವಾಗಿಟ್ಟುಕೊಂಡು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಮತ್ತಿತರರು ತೀರ್ಮಾನ ಕೈಗೊಳ್ಳಲಿದ್ದಾರೆ.
ಮಕ್ಕಳ ಭವಿಷ್ಯದ ಜೊತೆಗೆ ಆರೋಗ್ಯದ ಸುರಕ್ಷತೆಯನ್ನು ಸಹ ಗಮನದಲ್ಲಿಟ್ಟುಕೊಂಡೇ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ಸಹ ನಡೆಯಬೇಕು. ಕೆಲವು ಸೂಕ್ಷ್ಮ ವಿಚಾರಗಳಲ್ಲಿ ಏಕಾಏಕಿ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
ನಮಗೆ ಮಕ್ಕಳ ಸುರಕ್ಷತೆಯೇ ಪ್ರಮುಖ ಆದ್ಯತೆಯಾಗಿದೆ. ಯಾವುದೇ ಒತ್ತಡಕ್ಕೆ ಮಣಿದು ಶಾಲಾಕಾಲೇಜುಗಳನ್ನು ಪ್ರಾರಂಭಿಸುವುದಿಲ್ಲ. ತಜ್ಞರ ಸಮಿತಿ ನೀಡುವ ವರದ ಆಧರಿಸಿ ಎಲ್ಲವನ್ನೂ ನಿರ್ಧರಿಸಲಾಗುತ್ತದೆ. ಪ್ರತಿ 14 ದಿನಗಳಿಗೊಮ್ಮೆ ತಾಂತ್ರಿಕ ಸಲಹಾ ಸಮಿತಿ ಹಾಗೂ ಅಧಿಕಾರಿಗಳು ಸಭೆ ನಡೆಸುತ್ತಾರೆ. ಅವರು ಕಾಲಕಾಲಕ್ಕೆ ಸರ್ಕಾರಕ್ಕೆ ವರದಿ ನೀಡುತ್ತಾರೆ. ಆ ವರದಿ ಆಧಾರದ ಮೇಲೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಆತುರದ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಲಸಿಕೆ ನೀಡುವುದರಲ್ಲಿ ಭಾರತ ವಿಶ್ವದಲ್ಲಿಯೇ ದಾಖಲೆ ಬರೆದಿದೆ. ದೇಶದಲ್ಲೇ ಕರ್ನಾಟಕ ಅತಿಹೆಚ್ಚು ಜನರಿಗೆ ಲಸಿಕೆ ನೀಡಿದ 2ನೇ ರಾಜ್ಯವಾಗಿದೆ ಎಂದ ಪ್ರಶಂಸೆ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸೋಮವಾರ 7 ಲಕ್ಷ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿತ್ತು. 11.22 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ನಮ್ಮ ನಿರೀಕ್ಷೆಗೂ ಮೀರಿ ಲಸಿಕೆ ನೀಡಲಾಗಿದೆ ಎಂದು ಹೇಳಿದರು.
ಪ್ರತಿಪಕ್ಷದವರು ಸರ್ಕಾರ ಲಸಿಕೆ ನೀಡಿಲ್ಲ ಎಂದು ಸುಳ್ಳು ಆರೋಪ ಮಾಡುತ್ತಿದ್ದರು. ಈಗ ವಿಶ್ವದಲ್ಲೇ ಭಾರತ ಅತಿಹೆಚ್ಚು ಲಸಿಕೆ ನೀಡಿರುವ ದೇಶವಾಗಿದೆ. ಇನ್ನಾದರೂ ಆರೋಪ ಮಾಡುವುದನ್ನು ನಿಲ್ಲಿಸಿ ಎಂದು ಪರೋಕ್ಷವಾಗಿ ಕಾಂಗ್ರೆಸ್‍ಗೆ ಸುಧಾಕರ್ ಟಾಂಗ್ ನೀಡಿದರು.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement