ಬೆಂಗಳೂರು: ಬ್ರಾಹ್ಮಣ್ಯದ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಬಳಿಕ ನಟ ಚೇತನ್ ಚೇತನ್ ಅವರ ಪೋಸ್ಟ್ ಖಂಡಿಸಿ, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಟ್ವೀಟ್ ಮಾಡಿದ್ದರು. ಹಾಗೂ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಸಚಿವ ಹೆಬ್ಬಾರ್ ಅವರ ಪೋಸ್ಟಿನಿಂದ ತಮ್ಮ ತೇಜೋವಧೆ ಆಗಿದೆ ಎಂದು ಚೇತನ್ ಅವರು ಸಚಿವರ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಚೇತನ್ ಅವರ ವೈಯಕ್ತಿಕ ಮತ್ತು ವೃತ್ತಿಪರ ಖ್ಯಾತಿ ಹಾಳುಮಾಡುವ ಉದ್ದೇಶದಿಂದ ಪ್ರತಿವಾದಿಯು ಮಾಲಾಫೈಡ್ ಉದ್ದೇಶದಿಂದ ಹೇಳಿಕೆ ನೀಡಿದ್ದಾರೆ ಈ ಮಾನನಷ್ಟ ಹೇಳಿಕೆಗೆ ಹಾನಿಯನ್ನು ಪಾವತಿಸಲು ಅವರು ಹೊಣೆಗಾರರಾಗಿರುತ್ತಾರೆ.ಅಲ್ಲದೆ, ಪ್ರತಿವಾದಿಗೆ ಸ್ವತಃ, ಅವರ ಸೇವಕರು ಮತ್ತು ಏಜೆಂಟರು, ಯಾವುದೇ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವ ಅಥವಾ ಪ್ರಕಟಿಸುವ, ಮುದ್ರಿಸುವ, ಪ್ರಸಾರ ಮಾಡುವ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಯಾವುದೇ ಪತ್ರಿಕಾ ಟಿಪ್ಪಣಿಗಳನ್ನು ವಿತರಿಸುವ ಶಾಶ್ವತ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಲೈವ್ ಲಾ ವರದಿ ಮಾಡಿದೆ.
ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ತನ್ನ ತೇಜೋವಧೆ ಮಾಡಿದ್ದರಿಂದ 1 ರೂ. ಮಾನನಷ್ಟ ಪರಿಹಾರ ನೀಡಬೇಕು ಮತ್ತು ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಚೇತನ್ ಅವರು ಮೊಕದ್ದಮೆ ಹೂಡಿದ್ದಾರೆ. ಈ ಸಂಬಂಧ ಸಿಟಿ ಸಿವಿಲ್ ಸೆಷನ್ಸ್ ಕೋರ್ಟ್ನಿಂದ ಸಚಿವ ಶಿವರಾಮ್ ಹೆಬ್ಬಾರ್ಗೆ ನೋಟಿಸ್ ಜಾರಿ ಮಾಡಲಾಗಿದ್ದು, ವಿಚಾರಣೆ ಜು.14ಕ್ಕೆ ನಡೆಯಲಿದೆ ಎಂದು ವರದಿ ಹೇಳಿದೆ.
ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿತು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು. ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ’ ಎಂದು ಶಿವರಾಮ್ ಹೆಬ್ಬಾರ್ ಟ್ವೀಟ್ ಮಾಡಿದ್ದರು.
ಬ್ರಾಹ್ಮಣ ಸಮುದಾಯದ ವಿರುದ್ಧ ಹೇಳಿಕೆಗಳನ್ನು ನೀಡಿರುವ ನಟ ಚೇತನ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ