3ನೇ ಹಂತದ ಅನ್‍ಲಾಕ್ : ಕೋವಿಡ್-19 ಉಸ್ತುವಾರಿ ಸಚಿವರು, ಅಧಿಕಾರಿಗಳ ಜತೆ ನಾಳೆ ಸಿಎಂ ಸಭೆ

ಬೆಂಗಳೂರು: ರಾಜ್ಯದಲ್ಲಿ ಮೂರನೇ ಹಂತದ ಅನ್‍ಲಾಕ್ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಳೆ ಕೋವಿಡ್-19 ಉಸ್ತುವಾರಿ ಸಚಿವರ ಸಭೆ ನಡೆಸಲಿದ್ದಾರೆ. ನಾಳೆ ಸಂಜೆ 5.30ಕ್ಕೆ ಕಾವೇರಿ ನಿವಾಸದಲ್ಲಿ ಹಿರಿಯ ಸಚಿವರೊಂದಿಗೆ ಸಭೆ ನಡೆಸಿ ಮೂರನೇ ಹಂತದ ಅನ್‍ಲಾಕ್ ಸಡಿಲಿಕೆ ಮಾಡುವ ಸಂಬಂಧ ಮಾತುಕತೆ ನಡೆಸಲಿದ್ದಾರೆ.
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದ್ದು, ಬಹುತೇಕ ಚಟುವಟಿಕೆಗಳಿಗೆ ಸರ್ಕಾರ ಅವಕಾಶ ನೀಡಿದೆ. ಶಾಪಿಂಗ್ ಮಾಲ್‍ಗಳು, ಸೇರಿದಂತೆ ಮುಚ್ಚಲ್ಪಟ್ಟಿರುವ ಚಟುವಟಿಕೆಗಳಿಗೆ ಅನುಮತಿ ನೀಡುವ ಸಾಧ್ಯತೆಯಿದೆ.
ಜು.5ರಂದು ಅನ್ವಯವಾಗುವಂತೆ ಸರ್ಕಾರ ಮೂರನೇ ಹಂತದ ಅನ್‍ಲಾಕ್ ಘೋಷಣೆ ಮಾಡಲಿದ್ದು, ಪ್ರಸ್ತುತ ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆವರೆಗೂ ವ್ಯಾಪಾರ ವಹಿವಾಟುಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಮಯವನ್ನು ರಾತ್ರಿ 7 ಗಂಟೆ ವರೆಗೂ ವಿಸ್ತರಣೆ ಮಾಡುವ ಸಾಧ್ಯತೆಯಿದೆ.
ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಶೇ.50ರಷ್ಟು ಗ್ರಾಹಕರು ಕುಳಿತು ಮದ್ಯ ಸೇವನೆ, ಹೋಟೆಲ್‍ಗಳ ಸಮಯ ವಿಸ್ತರಣೆ ಸೇರಿದಂತೆ ಮತ್ತಿತರ ಚಟುವಟಿಕೆಗಳಿಗೆ ಸರ್ಕಾರ ಹಸಿರು ನಿಶಾನೆ ನೀಡುವ ಬಗ್ಗೆ ಚರ್ಚಿಸಲಿದೆ. ಸದ್ಯಕ್ಕೆ ಸಿನಿಮಾ ಮಂದಿರಗಳನ್ನು ತೆರೆಯಲು ಅವಕಾಶ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಹಗರಣ: ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ರೇವಣ್ಣ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement