ರೈತರಿಗೆ 721 ಕೋಟಿ ಕನಿಷ್ಠ ಬೆಂಬಲ ಬೆಲೆ : ಸರ್ಕಾರಕ್ಕೆ ಸಂಪುಟ ಉಪಸಮಿತಿ ಶಿಫಾರಸು

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಿರುವ ರಾಗಿ, ಭತ್ತ ಹಾಗೂ ಗೋಗೆ 2-3 ದಿನದಲ್ಲಿ 721 ಕೋಟಿ ರೂ. ಬಾಕಿ ಪಾವತಿಸಲು ಸಂಪುಟ ಉಪಸಮಿತಿ ತೀರ್ಮಾನಿಸಿದೆ.

ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ನಾಲ್ಕೈದು ತಿಂಗಳ ಹಿಂದೆ ರಾಗಿ, ಭತ್ತ ಹಾಗೂ ಗೋಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಿದ್ದು, ರೈತರ ಖಾತೆಗೆ ನೇರವಾಗಿ ಹಣ ಜಮೆ ಮಾಡುವ ಸಲುವಾಗಿ 721 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದರು.

2021-22 ರ ಸಾಲಿನಲ್ಲಿ ಇಂತಹ ಸಮಸ್ಯೆಗಳು ತಲೆದೋರದಂತೆ ಮಾಡಲು ಏನೆಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು? ಏನು ಮಾಡಬಹುದು ಎಂಬಿತ್ಯಾದಿ ವಿಷಯಗಳ ಬಗ್ಗೆ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು. ಜು.29 ರಂದು ಸಂಪುಟ ಉಪ ಸಮಿತಿ ಸಭೆ ಕರೆಯಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಯಾವ ರೀತಿಯಾಗಿ ಬೆಂಬಲ ಬೆಲೆಯನ್ನು ನಿಗದಿಪಡಿಸಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರೈತರಿಗೆ ಬೆಂಬಲ ಬೆಲೆ ನೀಡುವ ಸಂಬಂಧ ನಡೆದ ಪ್ರಥಮ ಸಭೆಯಲ್ಲಿ ರೈತರಿಗಾಗುತ್ತಿರುವ ಸಮಸ್ಯೆಗಳು ಹಾಗೂ ಅದಕ್ಕೆ ಬೇಕಿರುವ ಪರಿಹಾರಗಳ ಬಗ್ಗೆ ಚರ್ಚಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಾರ್ಯಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಚಿವ ಸೋಮಶೇಖರ್ ತಿಳಿಸಿದರು.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ಕೃಷಿ ಸಚಿವ ಬಿ.ಸಿ.ಪಾಟೀಲ್, ಆಹಾರ ಸಚಿವ ಉಮೇಶ್ ಕತ್ತಿ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಸಕ್ಕರೆ ಸಚಿವ ಶಂಕರ್, ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಮತ್ತು ಅಧಿಕಾರಿಗಳು ಸಭೆಯಲ್ಲಿದ್ದರು.

ಸಹಕಾರ ಸಚಿವಾಲಯ;

ಸಹಕಾರ ಕ್ಷೇತ್ರ ಕೃಷಿಗೆ ಪೂರಕವಾಗಿರುವ ಕ್ಷೇತ್ರವಾಗಿದೆ. ಕೃಷಿ ಚಟುವಟಿಕೆಗೆ ನೇರ ಸಂಬಂಧ ಹೊಂದಿರುವ ಸಹಕಾರ ಕ್ಷೇತ್ರಕ್ಕೆ ಕೃಷಿ ಇಲಾಖೆಯಷ್ಟು ಮಹತ್ವವಾಗಲೀ, ಸಮಯವಾಗಲೀ ಸಿಗುತ್ತಿರಲಿಲ್ಲ. ಈಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಐತಿಹಾಸಿಕ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಪ್ರತ್ಯೇಕವಾಗಿ ಸಹಕಾರ ಸಚಿವಾಲಯ ಹಾಗೂ ಸಚಿವರನ್ನು ನೇಮಿಸುವ ಮೂಲಕ ದಿಟ್ಟ ಹೆಜ್ಜೆ ಇಡಲಾಗಿದೆ. ಸಹಕಾರ ಇಲಾಖೆಗೆ ಸಂಬಂಧಪಟ್ಟಂತೆ ನಮಗೆ ಯಾವುದಾದರೂ ಸಮಸ್ಯೆ ತಲೆದೋರಿದರೆ ನೇರವಾಗಿ ಕೇಂದ್ರದಲ್ಲಿ ಸಹಕಾರ ಸಚಿವರನ್ನು ಭೇಟಿ ಮಾಡಬಹುದಾಗಿದೆ. ಸೂಕ್ತವಾದ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement