ಹುಬ್ಬಳ್ಳಿ: ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಅಧಿವೇಶನದಲ್ಲಿ 5 ಸುಗ್ರೀವಾಜ್ಞೆಗಳು ಸೇರಿದಂತೆ 20 ಪ್ರಮುಖ ಮಸೂದೆಗಳನ್ನು ಮಂಡಿಸಲಾಗುತ್ತದೆ. ಜುಲೈ 18 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ವಪಕ್ಷಗಳ ಸಂಸತ್ ಸದಸ್ಯರ ಸಭೆ ಕರೆದಿದ್ದಾರೆ. ಸರ್ಕಾರ ಎಲ್ಲ ರೀತಿಯ ರಚನಾತ್ಮಕ ಚರ್ಚೆಗೆ ಸಿದ್ಧವಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆಯನ್ನು ಕೇಂದ್ರ ಸರ್ಕಾರ ಯಶಸ್ವಿಯಾಗಿ ನಿಭಾಯಿಸಿದೆ. ವಿಶ್ವ ಅತಿ ದೊಡ್ಡ ಲಸಿಕಾ ಅಭಿಯಾನ ದೇಶದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. 37 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಬರುವ ದಿನಗಳಲ್ಲಿ ವ್ಯಾಕ್ಸಿನೇಶನ್ ಅನ್ನು ಚುರುಕುಗೊಳಿಸಲಾಗುವುದು ಎಂದು ತಿಳಿಸಿದರು.
ದೇಶದಲ್ಲಿ 135 ಕೋಟಿ ಜನಸಂಖ್ಯೆಯಿದೆ. ರಾಜ್ಯಗಳಿಗೆ ಅಗತ್ಯಾನುಸಾರ ಲಸಿಕೆ ಪೂರೈಸಲಾಗುತ್ತಿದೆ. ಹಂತ ಹಂತವಾಗಿ ಲಸಿಕೆ ನೀಡಲಾಗುವುದು.
ಸರ್ಕಾರದಲ್ಲಿ ಆರೇಳು ವರ್ಷಗಳ ಕಾಲ ಸಚಿವರಾಗಿ ಕಾರ್ಯನಿರ್ವಹಿಸಿದವರನ್ನು ಸಚಿವ ಸಂಪುಟ ಪುನ್ರರಚನೆ ವೇಳೆ ಕೈಬಿಡಲಾಗಿದೆ. ಸಚಿವ ಸಂಪುಟಕ್ಕೆ ಹೊಸಮುಖ ತರುವ ಕೆಲಸ ಮಾಡಲಾಗಿದೆ. ಡಾ.ಹರ್ಷವರ್ಧನ ಆರೋಗ್ಯ ಸಚಿವರಾಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ಅವರಿಗೆ ಪಕ್ಷ ಸಂಘಟನೆ ಮಹತ್ವದ ಜವಾಬ್ದಾರಿ ನೀಡಲಾಗುತ್ತದೆ ಎಂದರು.
ಸದ್ಯ ಕೋವಿಡ್ ನಿರ್ವಹಣೆ ಆದ್ಯತೆಯ ಕೆಲಸವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಬಿಜೆಪಿಯ ರಾಜ್ಯದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಅರುಣ್ ಸಿಂಗ್ ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ.
ಕೆ.ಆರ್.ಎಸ್. ಅಣೆಕಟ್ಟಿನ ವಿಷಯದಲ್ಲಿ ರಾಜಕಾರಣ ಸಲ್ಲದು. ಏನಾದರೂ ದೂರುಗಳು ಇದ್ದರೆ ಕಾವೇರಿ ನಿಗಮಕ್ಕೆ ನೀಡಬಹುದು. ಅಣೆಕಟ್ಟಿನ ಸ್ಥಿರತೆ ಬಗ್ಗೆ ನಿಗಮ ಈಗಾಗಲೇ ಸ್ಪಷ್ಟೀಕರಣ ನೀಡಿದೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ