ಬೆಂಗಳೂರು : ಈ ಬಾರಿಯ ಮಳೆಗಾಲದ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸಲು ಸರ್ಕಾರ ಚಿಂತನೆ ನಡೆಸಿದ್ದು, ಈ ಸಂಬಂಧ ಗುರುವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.
ಸಂಪುಟ ಸಭೆಯಲ್ಲಿ ಚರ್ಚಿಸಿ ಸಿಎಂ ಯಡಿಯೂರಪ್ಪ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಎರಡು ವರ್ಷಗಳಿಂದಲೂ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ಸರ್ಕಾರ ಅಧಿವೇಶನವನ್ನೇ ನಡೆಸಲಿಲ್ಲ. ಒಂದು ಪ್ರವಾಹದ ಕಾರಣದಿಂದ ಮತ್ತೊಂದು ಕೊರೊನಾ ಉಲ್ಬಣದಿಂದ ಎರಡು ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಿಲ್ಲ.
ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಬೆಳಗಾವಿಯಲ್ಲಿ ಅಧಿವೇಶನ ನಡೆಸುವಂತೆ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆದಿದ್ದಾರೆ. ಕಳೆದೆರೆಡು ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಆಗಿಲ್ಲ. ಆದರೆ ಈ ಬಾರಿ ಕೊರೋನಾ ಕಡಿಮೆ ಆಗಿದ್ದು ಬೆಳಗಾವಿಯಲ್ಲೇ ಅಧಿವೇಶನ ನಡೆಸಬಹುದು. ಈ ಮೂಲಕ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಪರಿಹಾರ ಕೊಡಿಸುವ ಕೆಲಸ ಮಾಡಬಹುದು ಎಂದು ಪತ್ರದಲ್ಲಿ ಬರೆದಿದ್ದಾರೆ.
ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರೂ ಸಹ ಉತ್ತರ ಕರ್ನಾಟಕ ಭಾಗದ ಶಾಸಕರ ಆಗ್ರಹದಿಂದ ಈ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸಲು ಒಲವು ತೋರಿದ್ದಾರೆ ಎನ್ನಲಾಗಿದೆ. ಆದರೆ ಅಧಿಕಾರಿಗಳು ಕೊರೊನಾ ಸಂದರ್ಭದಲ್ಲಿ ಇಲ್ಲಿಂದ ಬೆಳಗಾವಿಗೆ ಎಲ್ಲಾ ಶಿಫ್ಟ್ ಮಾಡಿ, ಅಧಿವೇಶನಕ್ಕೆ ಸಿದ್ದತೆ ಕಷ್ಟ ಎಂಬ ಮನಸ್ಥಿತಿಯಲ್ಲಿ ಇದ್ದಾರೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ಸದ್ಯಕ್ಕೆ ಕೊರೊನಾ ಸೋಂಕು ಕಡಿಮೆಯಾಗಿದ್ದರೂ ಕೂಡ ೩ನೇ ಅಲೆ ಭೀತಿ ಕಡಿಮೆಯಾಗಿಲ್ಲ. ಆಗಸ್ಟ್ ಕೊನೆಯ ವಾರದಲ್ಲಿ ಮೂರನೇ ಅಲೆ ಬರುವ ಬಗ್ಗೆ ಈಗಾಗಲೇ ತಜ್ಞರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಸರ್ಕಾರ ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಿ, ಮಳೆಗಾಲದ ಅಧಿವೇಶನವನ್ನು ಬೆಳಗಾವಿ ಯಲ್ಲಿ ನಡೆಸಬೇಕಾ ಅಥವಾ ಬೆಂಗಳೂರಲ್ಲಿ ನಡೆಸಬೇಕೆ ಎಂಬುದರ ಬಗ್ಗೆ ಗುರುವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ನಿಮ್ಮ ಕಾಮೆಂಟ್ ಬರೆಯಿರಿ