ಮುಂದಿನ ಸಂಕ್ರಾಂತಿ ವೇಳೆಗೆ 2023ರ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡ್ತಾರಂತೆ ಎಚ್‌ಡಿಕೆ..!

ಬೆಂಗಳೂರು: ಮುಂದಿನ ಜ.15ರ ಒಳಗೆ 150 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ನಗರದ ಜೆಪಿ ಭವನದಲ್ಲಿ ಜಿಲ್ಲಾವಾರು ಸಭೆಗಳಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಬೇಕೆಂಬ ಉದ್ದೇಶದಿಂದ ಪಕ್ಷ ಸಂಘಟನೆ ಮಾಡಲಾಗುತ್ತಿದೆ ಎಂದರು.
ಕಾಂಗ್ರೆಸ್, ಬಿಜೆಪಿಯ ನಡವಳಿಕೆಗಳನ್ನು ಜನರು ಸೂಕ್ಷ್ಮ ವಾಗಿ ಗಮನಿಸಿದ್ದಾರೆ. ಪ್ರಾದೇಶಿಕ ಪಕ್ಷಕ್ಕೆ ಒಲವು ತೋರಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್‌ 150-170 ಸ್ಥಾನಗಳಲ್ಲಿ ಗೆದ್ದರೂ ಗೆಲ್ಲಬಹುದು ಎಂದರು.
ರಾಷ್ಟ್ರೀಯ ಪಕ್ಷಗಳು ರಾಜ್ಯ ಉಸ್ತುವಾರಿಗಳನ್ನು ನೇಮಕ ಮಾಡುವ ಉದ್ದೇಶವೇ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ ಬೇರೆ ರಾಜ್ಯದ ಚುನಾವಣೆಗೆ ಬಳಸುವುದು ಎಂದು ಆರೋಪಿಸಿದ ಅವರು, ಬಿಜೆಪಿಯವರು 10 ವರ್ಷ ಸರ್ಕಾರ ಮಾಡುತ್ತೇವೆಂದು ಹೇಳುತ್ತಾರೆ. 2008ರಲ್ಲೂ ಇದೇ ಮಾತು ಹೇಳಿದ್ದರು. ನಂತರ ಏನಾಗಿದೆ ಎಂಬುದು ಜನರಿಗೆ ಗೊತ್ತಿದೆ. ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆ ಚುನಾವಣೆ ಎಂದು ಹೇಳಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಕಡೆ ಸ್ಪರ್ಧಿಸಿದರು. ಮತ್ತೆ ಕನಸು ಕಾಣಲು ಸ್ವತಂತ್ರವಾಗಿದ್ದಾರೆ ಎಂದು ಲೇವಡಿ ಮಾಡಿದರು
ಕಾಂಗ್ರೆಸ್ ಪಕ್ಷದಲ್ಲಿ ನಿತ್ಯ ಒಬ್ಬರು ಮುಖ್ಯಮಂತ್ರಿಯಾಗುವ ಹೆಸರನ್ನು ಹೇಳುತ್ತಿದ್ದಾರೆ. ರಾಷ್ಟ್ರೀಯ ಪಕ್ಷಗಳಿಂದ ಪೆಟ್ಟು ತಿಂದಿರುವ ಜನರು ಮರು ಚಿಂತೆನೆ ಮಾಡುತ್ತಿದ್ದಾರೆ. ಜನತಾದಳ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಹೆಚ್ಚು ಅಭಿವೃದ್ಧಿಯಾಗಿದೆ ಎಂದು ಹೇಳಿದರು.
ಮುಂದಿನ ಎರಡು ವರ್ಷದಲ್ಲಿ ಏನೇನು ಆಗುತ್ತದೆ ಎಂದು ಕಾದು ನೋಡಬೇಕು. ಕೋವಿಡ್ ಅನಾಹುತ, ಶಿಕ್ಷಣ ಕ್ಷೇತ್ರ ಸುಧಾರಣೆ, ಕೃಷಿ ಕಾರ್ಯಕ್ರಮ, ಉದ್ಯೋಗ ಸೃಷ್ಟಿ, ಮನೆ ನಿರ್ಮಾಣದಂತಹ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡುವ ಭರವಸೆಯೊಂದಿಗೆ ಜನರ ವಿಶ್ವಾಸ ಗಳಿಸುತ್ತೇವೆ. ಪ್ರಾದೇಶಿಕ ಪಕ್ಷದ ಅನಿವಾರ್ಯತೆಯನ್ನ ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದರು.
ಆಷಾಢದ ನಂತರ ಪಕ್ಷ ಸಂಘಟನೆಗಾಗಿ ಜಿಲ್ಲಾವಾರು ಪ್ರವಾಸ ಹಮ್ಮಿಕೊಳ್ಳುತ್ತೇವೆ. ಇಂದಿನಿಂದ ಒಂದುವಾರ ಸರಣಿ ಸಭೆ ನಡೆಸುವ ಮೂಲಕ ಪದಾಧಿಕಾರಿಗಳ ನೇಮಕ, ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ ಚುನಾವಣೆ ಕುರಿತು ಚರ್ಚಿಸುವುದಾಗಿ ಹೇಳಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement