ಕರ್ನಾಟಕದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಎರಡನೆ ದಿನವಾದ ಇಂದು (ಗುರುವಾರ) ಯಾವುದೇ ಗೊಂದಲವಿಲ್ಲದೆ ಸುಗಮವಾಗಿ ಪರೀಕ್ಷೆ ನಡೆಯಿತು.
ಹೊಸ ಸ್ವರೂಪದಲ್ಲಿ ನಡೆದ ಪರೀಕ್ಷೆಯಲ್ಲಿ 4485 ಪರೀಕ್ಷಾ ಕೇಂದ್ರಗಳಲ್ಲಿ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಇಂದು ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಗಳ ಪರೀಕ್ಷೆ ಬರೆದರು.
ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಪರೀಕ್ಷೆ ನಡೆಸಲಾಯಿತು. ಬೆಳಗ್ಗೆ 10.30ಕ್ಕೆ ಹಾಜರಾದ ವಿದ್ಯಾರ್ಥಿಗಳು ಒಎಂಆರ್ ಉತ್ತರ ಪತ್ರಿಕೆಗಳಲ್ಲಿ ಪರೀಕ್ಷೆ ಬರೆದರು. ಶಿಕ್ಷಣ ಸಚಿವ ಸುರೇಶಕುಮಾರ ಹಲವು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಪರೀಕ್ಷೆ ಎದುರಿಸುತ್ತಿರುವುದರಿಂದ ಸಹಜವಾಗಿಯೇ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಕೊಂಚ ಆತಂಕವಿತ್ತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿಕ್ಷಣ ಸಚಿವ ಸುರೇಶಕುಮಾರ ವಿದ್ಯಾರ್ಥಿಗಳಿಗೆ ಆತಂಕಕ್ಕೊಳಗಾಗದೆ ಪರೀಕ್ಷೆ ಎದುರಿಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದರು.
ಜುಲೈ 19ರಂದು ನಡೆದ ಮೊದಲ ದಿನದ ಪರೀಕ್ಷೆ ಸುಗಮವಾಗಿ ನಡೆದಿತ್ತು. ಇಂದು ಗುರುವಾರ ಕೂಡ ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆ ಬರೆದರು.ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತಾದರೂ ಹೆಚ್ಚು ಪ್ರಕರಣಗಳು ಕಂಡುಬರಲಿಲ್ಲ.
ಒಎಂಆರ್ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಸ್ಕ್ಯಾನಿಂಗ್‍ಗೆ ಕಳುಹಿಸಿ ನಂತರ ಮೌಲ್ಯಮಾಪನ ಮಾಡಿ ಆಗಸ್ಟ್ 10ರೊಳಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಲಾಗಿದೆ.
ಯಾರನ್ನೂ ಅನುತ್ತೀರ್ಣ ಮಾಡುವುದಿಲ್ಲ ಎಂದು ಈಗಾಗಲೇ ಸರ್ಕಾರ ಹೇಳಿದೆ. ಮತ್ತು ಎಲ್ಲರಿಗೂ ಪಿಯುಸಿ ಮೊದಲ ವರ್ಷಕ್ಕೆ ದಾಖಲಾತಿ ನೀಡಲಾಗುತ್ತದೆ ಸರ್ಕಾರ ತಿಳಿಸಿದೆ. ಹೀಗಾಗಿ ಪೋಷಕರು ಕಾಲೇಜುಗಳತ್ತ ಮುಖ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement