ಕಲಬುರ್ಗಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆ ( rainfall) ಆಗುತ್ತಿದ್ದು, 2 ರಿಂದ 3 ದಿನ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಉತ್ತರ ಒಳನಾಡಿನ ಇತರ ಜಿಲ್ಲೆಗಳಾದ ರಾಯಚೂರು, ಬಾಗಲಕೋಟೆ, ಹಾವೇರಿ, ಗದಗ, ಬಳ್ಳಾರಿ, ವಿಜಯನಗರ, ಗದಗ, ಧಾರವಾಡದಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದಿರಂದ ಯೆಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇದೂ ಸೇರಿ ರಾಜ್ಯದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಭಾರೀ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಇಂದೂ ಸಹ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರೀ ಮಳೆ (heavy rainfall) ಬೀಳುತ್ತಿದೆ. ಕಳೆದ ಒಂದು ವಾರದಿಂದಲೂ ಬೀದರ್ (Bidar), ಕಲಬುರ್ಗಿ ಹಾಗೂ ಯಾಗಿರಿ ಜಿಲ್ಲೆಗಳಲ್ಲಿ ನಿರಂತವಾಗಿ ಮಳೆಯಾಗುತ್ತಿದೆ. ಭೀಮಾ ನದಿ ((Bhima river) ಪಾತ್ರ ಪ್ರದೇಶಗಳು ಮುಳುಗಡೆಯಾಗುವ ಅಪಾಯದಲ್ಲಿವೆ. ಯಾದಗಿರಿಯಲ್ಲಿ ಭೀಮೆ ಉಕ್ಕೇರಿದ ಪರಿಣಾಮ ನಗರದ ಹೊರಭಾಗದಲ್ಲಿರುವ ಕಂಗೇಶ್ವರ ಮತ್ತು ವೀರಾಂಜನೇಯ ದೇಗುಲಗಳು ಜಲಾವೃತಗೊಂಡಿವೆ. ಒಂದು ವಾರದಿಂದಲೂ ಇಲ್ಲಿ ಭಾರೀ ಮಳೆಯಾಗುತ್ತಿದೆ. ಹಲವೆಡೆ ಮನೆಗಳು ಕುಸಿದ ಬಗ್ಗೆ ವರದಿಯಾಗಿದೆ.
ಮಳೆಯಿಂದಾಗಿ ಸನ್ನತ್ತಿ ಬ್ಯಾರೇಜ್ ಮತ್ತು ಹತ್ತಿಕುಣಿ ಜಲಾಶಯಕ್ಕೆ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ನೀರು ಹೊರಬಿಡಲಾಗಿದೆ. ಹೀಗಾಗಿ, ಭೀಮಾ ನದಿಪಾತ್ರದ ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ಉದ್ಭವಿಸಿದೆ. ಇನ್ನು, ಬೀದರಿನ ಕಾರಂಜಾ ಜಲಾಶಯದಿಂದ ಕೂಡ ನೀರು ಹೊರಬಿಡಲಾಗಿದೆ. ಜೊತೆಗೆ ಎಡಬಿಡದ ಮಳೆಯಿಂದಾಗಿ ಬೀದರ್ ಜಿಲ್ಲೆಯಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಅನೇಕ ಕಡೆ ರಸ್ತೆಗಳು ಜಲಾವೃತಗೊಂಡಿವೆ. ರೈತರ ಬೆಳೆಗಳು ನೀರು ಪಾಲಾಗಿವೆ.
ಕಲಬುರ್ಗಿ ಜಿಲ್ಲೆಯಲ್ಲೂ ಮಳೆಯಿಂದಾಗಿ ಕಾಗಿಣಾ ನದಿ ಕಳೆದ ನಾಲ್ಕು ದಿನಗಳಿಂದಲೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಳಖೇಡ ಬಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಇದರಿಂದಾಗಿ ಕಲಬುರ್ಗಿ- ಸೇಡಂ–ಮೆಹಬೂಬನಗರ–ಹೈದರಾಬಾದ್ ರಸ್ತೆ ಸಂಪರ್ಕ ಕಡಿತಗೊಂಡಿದೆ. ಆಳಂದ ತಾಲೂಕಿನ ಭೂಸನೂರು ಗ್ರಾಮ ಗ್ರಾಮ ದ್ವೀಪದಂತಾಗಿದೆ. ಇಡೀ ಗ್ರಾಮದ ಸುತ್ತ ನೀರು ನದಿಯಂತೆ ಸುತ್ತುವರಿದಿದೆ.
ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್ನಿಂದ 29,000 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಭೀಮಾ ನದಿ ಉಕ್ಕೇರುತ್ತಿದೆ. ಇಲ್ಲಿರುವ ನದಿ ಪಾತ್ರದ ಪ್ರದೇಶಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ