ಕಲಬುರಗಿ ಪಾಲಿಕೆ ಅಧಿಕಾರ: ದೇವೇಗೌಡರ ಜೊತೆ ಖರ್ಗೆ ಮಾತುಕತೆ -ಡಿಕೆಶಿ

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವ ವಿಚಾರವಾಗಿ ಪಕ್ಷದ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಜೆಡಿಎಸ್ ರಾಷ್ಟ್ರೀಯ ನಾಯಕರಾದ ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕಲಬುರಗಿ ವಿಚಾರವಾಗಿ ಜೆಡಿಎಸ್ ನಾಯಕರಾದ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಜತೆ ನೇರವಾಗಿ ಮಾತನಾಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಏ ಒಳ್ಳೆಯದಾಗುವ ದೃಷ್ಟಿಯಿಂದ ಅವಶ್ಯಕತೆ ಇದ್ದಾಗ ಏನು ಮಾಡಬೇಕೋ, ಅದನ್ನೆಲ್ಲಾ ನಾನು ಮಾಡುತ್ತೇನೆ. ಮೇಯರ್ ಪಟ್ಟ ನಮಗೇ ಬೇಕು ಎಂದು ಯಾರೂ ನನ್ನ ಮುಂದೆ ಬೇಡಿಕೆ ಇಟ್ಟಿಲ್ಲ. ಎರಡೂ ಪಕ್ಷಗಳು ಒಟ್ಟಿಗೆ ಆಡಳಿತ ನಡೆಸಬೇಕು ಎಂಬ ಪ್ರಸ್ತಾವನೆಯಷ್ಟೇ ನನ್ನ ಮುಂದೆ ಇದೆ ಎಂದರು.
ಸದಾಶಿವನಗರ ನಿವಾಸದಲ್ಲಿ ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಲಬುರಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಸಂಖ್ಯೆಯಲ್ಲಿ ಗೆದ್ದಿದ್ದು, ಉತ್ತಮ ಫಲಿತಾಂಶ ಸಿಕ್ಕಿದೆ. ಜೆಡಿಎಸ್ ಕೂಡ ಗೆದ್ದಿದೆ. ಬಿಜೆಪಿಯ ಇಡೀ ಸರ್ಕಾರವೇ ಅಲ್ಲಿ ನಿಂತಿದ್ದರೂ ನಾವು ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದ್ದೇವೆ ಎಂದು ತಿಳಿಸಿದರು.
ಹುಬ್ಬಳ್ಳಿ-ಧಾರವಾಡದಲ್ಲಿ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರು ಇದ್ದರೂ ಕೂಡ ಅವರು 39 ಮಾತ್ರ ಗೆದ್ದಿದ್ದಾರೆ, ನಾವು 33 ಸ್ಥಾನಗಳನ್ನು ಗೆದ್ದಿದ್ದೇವೆ. ಜತೆಗೆ ನಮ್ಮ ಬಂಡಾಯ ಸದಸ್ಯರೂ ಗೆದ್ದಿದ್ದಾರೆ. ಬಿಜೆಪಿಗೆ ಬಹುಮತ ಪಡೆಯಲು ಸಾಧ್ಯವಾಗಲಿಲ್ಲ ಎಂದರು.
ಬಿಜೆಪಿಯವರು ಬಳ್ಳಾರಿ, ರಾಮನಗರ, ಚನ್ನಪಟ್ಟಣದ ಚುನಾವಣೆ ದಿನಾಂಕ ಘೋಷಿಸಲು ಹಿಂದೆ-ಮುಂದೆ ನೋಡುತ್ತಿದ್ದಾರೆ. ಬಿಜೆಪಿ ತನ್ನ ಅಧಿಕಾರವನ್ನು ಎಷ್ಟು ಸಾಧ್ಯವೋ ಅಷ್ಟು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement