ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪಿಯ ವಿರುದ್ದ ಸಂಘಟಿತ ಅಪರಾಧ ಪ್ರಕರಣವನ್ನು ಕೈಬಿಟ್ಟಿದ್ದನ್ನು ಪ್ರಶ್ನಿಸಿ ಗೌರಿ ಸಹೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ತೀರ್ಪನ್ನು ಮಂಗಳವಾರ ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆ (ಕೋಕಾ) 2000ದ ಅಡಿ ಆರೋಪಿ ಮೋಹನ್ ನಾಯಕ್ ವಿರುದ್ಧ ದಾಖಲಿಸಿದ್ದ ಆರೋಪಗಳನ್ನು ಕೈಬಿಟ್ಟಿದ್ದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಕವಿತಾ ಲಂಕೇಶ್ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಎ. ಎಂ. ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಮತ್ತು ಸಿ. ಟಿ. ರವಿಕುಮಾರ ಅವರಿದ್ದ ತ್ರಿಸದಸ್ಯ ಪೀಠವು ವಿಚಾರಣೆ ನಡೆಸಿದ ನಂತರ ತೀರ್ಪು ಕಾಯ್ದಿರಿಸಿದೆ ಎಂದು ಬಾರ್ ಎಂಡ್ ಬೆಂಚ್ ವರದಿ ಮಾಡಿದೆ.
ಕೋಕಾ ಕಾಯಿದೆಯ ಸೆಕ್ಷನ್ 24ರಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗಿಂತ ಕೆಳಗಿನ ದರ್ಜೆಯಲ್ಲದ ಅಧಿಕಾರಿಗಳಿಂದ ಅನುಮತಿ ಪಡೆಯದೆ ಯಾವುದೇ ಕಾರಣಕ್ಕೂ ವಿಶೇಷ ನ್ಯಾಯಾಲಯವು ಅಪರಾಧದವನ್ನು ಪರಿಗಣಿಸಬಾರದು ಎಂದು ಹೇಳಲಾಗಿದೆ. ಇಲ್ಲಿ ಕಾಯಿದೆಯ ಸೆಕ್ಷನ್ 24 ಅನ್ನು ಪರಿಗಣಿಸದೇ ಹೈಕೋರ್ಟ್ ಲೋಪ ಎಸಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.
ವಿಚಾರಣಾ ಅನುಮತಿ ಹಂತಕ್ಕೂ ಮುನ್ನ ಸಂಶಯದ ಲಾಭವನ್ನು ಆರೋಪಿ ಮೋಹನ್ ನಾಯಕ್ಗೆ ನೀಡಬಹುದಾಗಿತ್ತು. ಆದರೆ, ಆರೋಪಿಯ ವಿರುದ್ಧದ ಆರೋಪಪಟ್ಟಿಯನ್ನು ವಜಾ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಪೀಠ ತಿಳಿಸಿದೆ ಎಂದು ವರದಿ ಹೇಳಿದೆ.
ಸಾಕ್ಷ್ಯದ ಕೊರತೆ ಎಂದು ನೀವು ವಾದಿಸಬಹುದು. ಆದರೆ, ಹೈಕೋರ್ಟ್ ಆರೋಪಪಟ್ಟಿಯನ್ನೇ ವಜಾ ಮಾಡಿದೆ. ಇದು ಸರಿಯಲ್ಲ ಮತ್ತು ನ್ಯಾಯಿಕ ವ್ಯಾಪ್ತಿ ಮೀರಿದ್ದಾಗಿದೆ. ಈ ರೀತಿ ಆರೋಪಪಟ್ಟಿಯನ್ನು ವಜಾ ಮಾಡಲಾಗದು. ಆರೋಪಪಟ್ಟಿಯ ವಿಶ್ಲೇಷಣೆಯನ್ನು ಹೈಕೋರ್ಟ್ ನಡೆಸಿಲ್ಲ. ಹೀಗಿರುವಾಗ ಹೈಕೋರ್ಟ್ ಆರೋಪಪಟ್ಟಿಯನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿಲ್ಲ ಎಂದೇ ಹೇಳಬೇಕಾಗುತ್ತದೆ” ಎಂದು ಪೀಠ ಹೇಳಿದೆ.
ಹೈಕೋರ್ಟ್ ಪತ್ತೆ ಮಾಡಿರುವುದನ್ನು ಒಂದೊಮ್ಮೆ ಸುಪ್ರೀಂ ಕೋರ್ಟ್ ಎತ್ತಿಹಿಡಿದರೂ ಆರೋಪಿಯು ಅಪರಾಧ ಕೂಟದ ಸದಸ್ಯನೇ ಎಂಬುದನ್ನು ಪತ್ತೆಹಚ್ಚುವುದಕ್ಕೆ ತನಿಖಾ ಸಂಸ್ಥೆಗೆ ಯಾರೂ ತಡೆಯೊಡ್ಡುವುದಿಲ್ಲ. ನಿಮಗೆ ಮಾಹಿತಿ ಲಭ್ಯವಾದರೆ ಆರೋಪಿಯ ವಿರುದ್ಧದ ಪ್ರಕ್ರಿಯೆಯನ್ನು ಮುಂದುವರಿಸಬಹುದು ಎಂದೂ ನ್ಯಾಯಾಲಯವು ಹೇಳಿತು.
ಆರೋಪಿ ಮೋಹನ್ ನಾಯಕ್ ಪರ ಹಿರಿಯ ವಕೀಲ ಬಸವ ಪ್ರಭು ಎಸ್. ಪಾಟೀಲ್ “ಅಪರಾಧ ಕೃತ್ಯದ ನೈಜ ಎಸಗುವಿಕೆಯಲ್ಲಿ ತಮ್ಮ ಕಕ್ಷಿದಾರನ ಪಾತ್ರವಿಲ್ಲ. ಕೋಕಾ ಅಡಿ ತಮ್ಮ ಕಕ್ಷಿದಾರರನ್ನು ವಶಕ್ಕೆ ಪಡೆಯಲು ಅಪರಾಧ ಕೂಟದಲ್ಲಿ ತಮ್ಮ ಕಕ್ಷಿದಾರರು ಭಾಗಿಯಾಗಿದ್ದರು ಎಂಬುದಕ್ಕೆ ಯಾವುದೇ ಸಾಕ್ಷಿಯಿಲ್ಲ” ಎಂದು ವಾದಿಸಿದರು.
ಇದಕ್ಕೆ ಪೀಠವು ಇದನ್ನು ವಿಚಾರಣೆ ಹಂತದಲ್ಲಿ ನೋಡಬಹುದಾಗಿದೆ ಎಂದಿತು. ಮೇಲ್ಮನವಿಯ ತೀರ್ಪು ಕಾಯ್ದಿರಿಸುವುದಕ್ಕೂ ಮುನ್ನ ಪೀಠವು ಉಭಯ ಪಕ್ಷಕಾರರ ಪರ ವಕೀಲರಿಗೆ ಲಖಿತ ವಾದ ಸಲ್ಲಿಸುವಂತೆ ಆದೇಶಿಸಿತು.
ಕೋಕಾ ಕಾಯಿದೆ ಅಡಿ ಆರೋಪಗಳನ್ನು ಹೈಕೋರ್ಟ್ ವಜಾ ಮಾಡಿದ ನಂತರ ಆರೋಪಿ ಮೋಹನ್ ನಾಯಕ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಮನವಿಯಲ್ಲಿ ಹೇಳಲಾಗಿದೆ.
2018ರಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರ ಆದೇಶವನ್ನು ಮತ್ತು ಆ ಬಳಿಕ ಸಲ್ಲಿಸಿದ ಪೂರಕ ಆರೋಪಪಟ್ಟಿಯನ್ನು 2021ರ ಏಪ್ರಿಲ್ 22ರಂದು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದ ಆದೇಶವನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ. ಮೋಹನ್ ನಾಯಕ್ ವಿರುದ್ಧ ಕೋಕಾ ಕಾಯಿದೆಯ ಸೆಕ್ಷನ್ 3 (1) (ಐ), 3 (2), 3 (3) ಮತ್ತು 3 (4) ರ ಅಡಿಯಲ್ಲಿ ಅಪರಾಧಗಳನ್ನು ಕೈಬಿಡಲಾಗಿದೆ. ಕೃತ್ಯ ಎಸಗುವ ಮೊದಲು ಮತ್ತು ನಂತರ ಕೊಲೆಗಾರರಿಗೆ ಆಶ್ರಯ ನೀಡುವಲ್ಲಿ ನಾಯಕ್ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎಂದು ಮೇಲ್ಮನವಿಯಲ್ಲಿ ತಿಳಿಸಲಾಗಿದೆ ಎಂದು ವರದಿ ಹೇಳಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ನಿಮ್ಮ ಕಾಮೆಂಟ್ ಬರೆಯಿರಿ