ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಯ (Agriculture Bill) ವಿರುದ್ಧ ರೈತರು ಸತತ ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ, ರೈತರ ಹೋರಾಟದ ಬಗ್ಗೆ ಕೇಂದ್ರ ಸರ್ಕಾರ (Government) ಈವರೆಗೆ ರೈತರ ಬೇಡಿಕೆಗೆ ಮಣಿದಿಲ್ಲ. ರೈತರು ಪಟ್ಟು ಬಿಡುತ್ತಿಲ್ಲ. ಸರ್ಕಾರ ಕೃಷಿ ಕಾನೂನು ಹಿಂಪಡೆಯಬೇಕು ಒಂದು ಒತ್ತಾಯಿಸಿ ರೈತರ ಹೋರಾಟ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (Samyukt Kisan Morcha) ಸೆಪ್ಟೆಂಬರ್ 27 ರಂದು ಭಾರತ್ ಬಂದ್ಗೆ ಕರೆ ನೀಡಿದೆ.
ಭಾರತ್ ಬಂದ್ ಸಮಯ
ಬೆಳಿಗ್ಗೆ 6 ರಿಂದ ಸಂಜೆ 4 ರವರೆಗೆ ಬಂದ್ ನಡೆಯಲಿದ್ದು, ಈ ಸಮಯದಲ್ಲಿ ದೇಶಾದ್ಯಂತ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು, ಶೈಕ್ಷಣಿಕ ಮತ್ತು ಇತರ ಸಂಸ್ಥೆಗಳು, ಅಂಗಡಿಗಳು, ಕೈಗಾರಿಕೆಗಳು ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಸಮಾರಂಭಗಳನ್ನು ಮುಚ್ಚಲಾಗುವುದು. ಆದಾಗ್ಯೂ, ಆಸ್ಪತ್ರೆಗಳು, ವೈದ್ಯಕೀಯ ಅಂಗಡಿಗಳು, ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ಮತ್ತು ವೈಯಕ್ತಿಕ ತುರ್ತುಸ್ಥಿತಿಗಳಿಗೆ ಹಾಜರಾಗುವ ಜನರು ಸೇರಿದಂತೆ ಎಲ್ಲಾ ತುರ್ತು ಸಂಸ್ಥೆಗಳು ಮತ್ತು ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗುತ್ತದೆ. ಬಂದ್ ಅನ್ನು ಸ್ವಯಂಪ್ರೇರಿತ ಮತ್ತು ಶಾಂತಿಯುತವಾಗಿ ಜಾರಿಗೊಳಿಸಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ (Samyukt Kisan Morcha) ಭರವಸೆ ನೀಡಿದೆ.
ಈ ಬಂದ್ಗೆ ಬಿಜೆಪಿಯೇತರ (BJP) ಸರ್ಕಾರವಿರುವ ಅನೇಕ ರಾಜ್ಯಗಳು ಮತ್ತು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿವೆ. ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ಗೆ ಕಾಂಗ್ರೆಸ್, ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (AAP) ಮತ್ತು ತೆಲುಗು ದೇಶಂ ಪಕ್ಷ (TDP) ಮತ್ತು ಎಡಪಕ್ಷಗಳು ಈಗಾಗಲೇ ಬೆಂಬಲವನ್ನು ಘೋಷಿಸಿವೆ. ಇದಲ್ಲದೆ, ಅನೇಕ ರಾಜಕೀಯ ಪಕ್ಷಗಳು ಸಹ ಬೆಂಬಲ ಸೂಚಿಸಿವೆ.
ಕಾಂಗ್ರೆಸ್;
ಭಾರತ್ ಬಂದ್ಗೆ ತನ್ನ ಸಂಪೂರ್ಣ ಬೆಂಬಲ ನೀಡಿರುವ ಕಾಂಗ್ರೆಸ್, ಪ್ರತಿಭಟನಾಕಾರರೊಂದಿಗೆ ಸರ್ಕಾರ ಚರ್ಚೆಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿದೆ. ಶಾಂತಿಯುತ ಮುಷ್ಕರಕ್ಕೆ ಕರೆ ನೀಡಿರುವ ಕಾಂಗ್ರೆಸ್ ವಕ್ತಾರ ಗೌರವ ವಲ್ಲಭ್, ಕೇಂದ್ರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಗಳು ನೀಡಿದ ಭಾರತ್ ಬಂದ್ಗೆ ಪಕ್ಷ ಮತ್ತು ಅದರ ಎಲ್ಲಾ ಕಾರ್ಯಕರ್ತರು ಬೆಂಬಲ ನೀಡುತ್ತಿದ್ದಾರೆ. ಪ್ರತಿ ರೈತನಿಗೂ ಎಮ್ಎಸ್ಪಿಯನ್ನು ಕಾನೂನುಬದ್ಧ ಹಕ್ಕಾಗಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ವೈಎಸ್ಆರ್ ಕಾಂಗ್ರೆಸ್
ವೈಎಸ್ಆರ್ ಕಾಂಗ್ರೆಸ್ ನೇತೃತ್ವದ ಆಂಧ್ರಪ್ರದೇಶ ಸರ್ಕಾರವು ರೈತರು ಕರೆ ನೀಡಿರುವ ಸೆಪ್ಟೆಂಬರ್ 27 ಭಾರತ್ ಬಂದ್ಗೆ ಬೆಂಬನ ನೀಡಿದೆ. ಆಂಧ್ರಪ್ರದೇಶದ ಮಾಹಿತಿ ಮತ್ತು ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ (ನಾನಿ) ಶನಿವಾರ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ.
ಜಗನ್ ಮೋಹನ್ ರೆಡ್ಡಿ ನೇತೃತ್ವದ ರಾಜ್ಯ ಸರ್ಕಾರ ರೈತರ ಪ್ರತಿಭಟನೆಗೆ ಸಂಪೂರ್ನ ಬೆಂಬಲ ನೀಡಿದೆ. ಜೊತೆಗೆ ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆಯ ಕಾರ್ಮಿಕರ ಪ್ರತಿಭಟನೆಯನ್ನು ಬೆಂಬಲಿಸಿ, ಕೇಂದ್ರ ಸರ್ಕಾರದ ಖಾಸಗೀಕರಣ ಪ್ರಯತ್ನಗಳನ್ನು ವಿರೋಧಿಸುತ್ತೇವೆ ಎಂದು ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷ;
ಎಎಪಿ ಸಹ ಬೆಂಬಲ ನೀಡಿದೆ. ರೈತರಿಗೆ ಒಗ್ಗಟ್ಟಿನ ಈ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಪಕ್ಷವು ಬೆಂಬಲವನ್ನು ಘೋಷಿಸಿದೆ ಎಂದು ಎಎಪಿ ನಾಯಕ ರಾಘವ್ ಚಡ್ಡಾ ಹೇಳಿದ್ದಾರೆ. ಆಮ್ ಆದ್ಮಿ ಪಕ್ಷವು ರೈತರ ದೆಹಲಿ ಚಲೋ ಆರಂಭವಾದಾಗಿನಿಂದ ರೈತರಿಗೆ ಬೆಂಬಲವಾಗಿ ನಿಂತಿದೆ.
ತೆಲುಗು ದೇಶಂ- ಎಡಪಕ್ಷಗಳು;
ಭಾರತ್ ಬಂದ್ ಅನ್ನು ಯಶಸ್ವಿಗೊಳಿಸಲು ಆಂಧ್ರಪ್ರದೇಶದ ಕಮ್ಯುನಿಸ್ಟ್ ಪಾರ್ಟಿ ಇಂಡಿಯಾ (ಸಿಪಿಐ) ಕಚೇರಿಯಲ್ಲಿ ಎಡ ಪಕ್ಷಗಳು, ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಯಿಂದ ಸಭೆ ನಡೆದಿದೆ. ಸಿಪಿಐ ರಾಜ್ಯ ನಾಯಕ ದೊಣೆಪುಡಿ ಶಂಕರ್, “ದೆಹಲಿಯಲ್ಲಿ ರೈತರು ಒಂಬತ್ತು ತಿಂಗಳಿಂದ ಆಂದೋಲನ ನಡೆಸುತ್ತಿದ್ದಾರೆ, ಆದ್ದರಿಂದ ಅವರನ್ನು ಬೆಂಬಲಿಸಲು ಈ ಭಾರತ್ ಬಂದ್ ನಡೆಯಲಿದೆ” ಎಂದು ಹೇಳಿದ್ದರು.
ಆರ್ಜೆಡಿ ಹಾಗೂ ಎಲ್ಡಿಎಫ್:
ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಸೆಪ್ಟೆಂಬರ್ 27 ರಂದು ಭಾರತ್ ಬಂದ್ಗೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಕರೆಗೆ ಬೆಂಬಲ ನೀಡಿದ್ದಾರೆ.
ಕೇರಳದ ಆಡಳಿತಾರೂಢ ಎಲ್ಡಿಎಫ್ ಕೂಡ ರೈತರಿಗೆ ಬೆಂಬಲ ಸೂಚಿಸಲು, ಸೆಪ್ಟೆಂಬರ್ 27 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ತಿರುವನಂತಪುರಂನಲ್ಲಿ ಆಡಳಿತ ಪಕ್ಷದ ಮೈತ್ರಿಕೂಟದ ನಾಯಕರ ಸಭೆಯ ನಂತರ ಸಿಪಿಐ (ಎಂ) ಹಂಗಾಮಿ ಕಾರ್ಯದರ್ಶಿ ಎ ವಿಜಯರಾಘವನ್ ಬೆಂಬಲ ಘೋಷಿಸಿರುವುದಾಗಿ ಹೇಳಿದ್ದಾರೆ.
ಪ್ರತಿಭಟನೆಯಲ್ಲಿ ಐದು ಲಕ್ಷ ಜನರು ಭಾಗವಹಿಸಲಿದ್ದಾರೆ. ಸಾರಿಗೆ ನೌಕರರು, ಬ್ಯಾಂಕ್ ಉದ್ಯೋಗಿಗಳು ಮತ್ತು ರೈತ ಸಂಘಟನೆಗಳು ಸೇರಿದಂತೆ 100 ಕ್ಕೂ ಹೆಚ್ಚು ಸಂಘಟನೆಗಳು ಎಲ್ಡಿಎಫ್ ಆಂದೋಲನಕ್ಕೆ ತಮ್ಮ ಬೆಂಬಲವನ್ನು ನೀಡಿವೆ” ಎಂದು ವಿಜಯರಾಘವನ್ ಹೇಳಿದ್ದಾರೆ.
ಬ್ಯಾಂಕ್ ಅಧಿಕಾರಿಗಳ ಸಂಘ;
ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಅಲ್ಬಿಒಸಿ) ಸೋಮವಾರ ನಡೆಯಲಿರುವ ಭಾರತ್ ಬಂದ್ಗೆ ತನ್ನ ಬೆಂಬಲವನ್ನು ನೀಡಿದೆ. ರೈತರ ಬೇಡಿಕೆಗಳ ಕುರಿತು ಒಕ್ಕೂಟ ಸರ್ಕಾರ ಸಂವಾದ ನಡೆಸಬೇಕು ಮತ್ತು ಮೂರು ವಿವಾದಿತ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದೆ.
ರಾಜಕೀಯ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು, ರೈತ ಸಂಘಗಳು, ಕಾರ್ಮಿಕ ಸಂಘಟನೆಗಳು, ಯುವಕರು, ಶಿಕ್ಷಕರು, ಕಾರ್ಮಿಕರು ಮತ್ತು ಜನಪರ ಸಂಘಟನೆಗಳು ಸೇರಿದಂತೆ ಹಲವು ವಿವಿಧ ಸಂಸ್ಥೆಗಳು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಕರೆ ನೀಡಿರುವ ಭಾರತ್ ಬಂದ್ಗೆ ಸಂಪೂರ್ಣ ಬೆಂಬಲ ಸೂಚಿಸಿವೆ.
ನಿಮ್ಮ ಕಾಮೆಂಟ್ ಬರೆಯಿರಿ