ಸಿಎ ಸೈಟ್ ಹಂಚಿಕೆ: ಬಿಜೆಪಿ ಸಂಸದ ಉಮೇಶ್ ಜಾಧವ್ ಪತ್ನಿ ಟ್ರಸ್ಟ್‌ಗೆ ಸೈಟ್ ಹಂಚಿಕೆ‌ ರದ್ದು; ಕೆಎಚ್‌ಬಿಗೆ 1 ಲಕ್ಷ ರೂ ದಂಡ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿಯು (ಕೆಎಚ್‌ಬಿ) ಬೆಂಗಳೂರಿನಲ್ಲಿ ಸಾರ್ವಜನಿಕ ಸೌಕರ್ಯ ಕಲ್ಪಿಸಲು ಮೀಸಲಾಗಿರುವ ನಿವೇಶನವನ್ನು (ಸಿ ಎ ಸೈಟ್‌) ಕಲಬುರ್ಗಿ ಲೋಕಸಭಾ ಸದಸ್ಯ ಬಿಜೆಪಿಯ ಉಮೇಶ್‌ ಜಾಧವ್‌ ಪತ್ನಿ ಹಾಗೂ ಮೂರ್ತಿ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷರಾದ ಗಾಯತ್ರಿ ಅವರಿಗೆ ಷರತ್ತುಬದ್ಧ ಕ್ರಯಪತ್ರದ ನಿಯಮಗಳಿಗೆ ವಿರುದ್ಧವಾಗಿ ಕ್ರಯ ಮಾಡಿಕೊಡುವ ಮೂಲಕ ಪಕ್ಷಪಾತ ಎಸಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ.
ಅಲ್ಲದೆ ನಿವೇಶನವನ್ನು ಮರಳಿ ವಶಕ್ಕೆ ಪಡೆಯುವಂತೆ ಕೆಎಚ್‌ಬಿಗೆ ಆದೇಶಿಸಿದೆ. ಹಾಗೂ ಕಾನೂನುಬಾಹಿರವಾಗಿ ನಡೆದುಕೊಂಡಿರುವ ಕೆಎಚ್‌ಬಿಯು ಒಂದು ಲಕ್ಷ ರೂಪಾಯಿ ದಂಡವನ್ನು ಒಂದು ತಿಂಗಳ ಒಳಗಾಗಿ ಬೆಂಗಳೂರು ವಕೀಲರ ಸಂಘಕ್ಕೆ ಪಾವತಿಸಬೇಕು ಎಂದು ಆದೇಶ ಹೊರಡಿಸಿದೆ.
ವಕೀಲ ಸುನೀಲ್‌ ಕುಮಾರ್‌ ಎಚ್‌ ಅವರ ಮೂಲಕ ಆದಿನಾರಾಯಣ ಶೆಟ್ಟಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ನೇತೃತ್ವದ ವಿಭಾಗೀಯ ಪೀಠವು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸತ್ಯಶೋಧನಾ ತನಿಖೆ ನಡೆಸುವಂತೆ ಆದೇಶಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆದೇಶಿಸಿದೆ. ಈ ಎಲ್ಲಾ ಪ್ರಕ್ರಿಯೆ ಆರು ತಿಂಗಳ ಒಳಗೆ ಮುಕ್ತಾಯವಾಗಬೇಕು ಎಂಬ ಗಡುವು ವಿಧಿಸಿದೆ.
ಕೆಎಚ್‌ಬಿಯು ಉಮೇಶ್‌ ಜಾಧವ್‌ ಪತ್ನಿ ಗಾಯತ್ರಿ ಅಧ್ಯಕ್ಷರಾಗಿರುವ ಮೂರ್ತಿ ಚಾರಿಟಬಲ್‌ ಟ್ರಸ್ಟ್‌ಗೆ ಬೆಂಗಳೂರಿನ ಯಲಹಂಕ ನ್ಯೂ ಟೌನ್‌ನ ಐದನೇ ಹಂತದಲ್ಲಿ 232 ಸ್ಕ್ವೇರ್‌ ಮೀಟರ್‌ಗಳ ಸಿ ಎ ನಿವೇಶನವನ್ನು 2004ರ ಜುಲೈ 23ರಂದು ಷರತ್ತಿಗೆ ಒಳಪಟ್ಟು ಕ್ರಯ ಮಾಡಿಕೊಟ್ಟಿದೆ. ಇದರ ಪ್ರಕಾರ ಸಾರ್ವಜನಿಕರ ಅನುಕೂಲಕ್ಕಾಗಿ ಎರಡು ವರ್ಷಗಳ ಒಳಗೆ ಶೈಕ್ಷಣಿಕ ಸಂಸ್ಥೆ ನಿರ್ಮಿಸಬೇಕು ಎಂದು ಹೇಳಲಾಗಿದೆ. ಕೆಎಚ್‌ಬಿ ನಿಯಮಾವಳಿಗಳ ಪ್ರಕಾರ ಸಿ ಎ ನಿವೇಶನದಲ್ಲಿ ಐದು ವರ್ಷಗಳ ಒಳಗೆ ಕಟ್ಟಡ ನಿರ್ಮಿಸದಿದ್ದರೆ ಯಾವುದೇ ನೋಟಿಸ್‌ ನೀಡದೇ ಅದನ್ನು ಕೆಎಚ್‌ಬಿ ವಶಪಡಿಸಿಕೊಳ್ಳಬಹುದಾಗಿದೆ. ನಿರ್ದಿಷ್ಟ ಕಾಲಮಿತಿಯಲ್ಲಿ ಯಾವುದೇ ಕಟ್ಟಡ ನಿರ್ಮಾಣ ಮಾಡದಿದ್ದರೂ ಸದ್ಯ ಮಾರುಕಟ್ಟೆಯಲ್ಲಿ 10 ಕೋಟಿ ರೂಪಾಯಿ ಬೆಲೆಬಾಳುವ ನಿವೇಶನವನ್ನು 2020ರ ಜುಲೈ 23ರಂದು 3.87 ಲಕ್ಷ ರೂಪಾಯಿ ಪಡೆದು ಕೆಎಚ್‌ಬಿಯು ಟ್ರಸ್ಟ್‌ಗೆ ಕ್ರಯ ಮಾಡಿಕೊಟ್ಟಿದೆ. ಇದೇ ನಿವೇಶನಕ್ಕೆ ಹೊಂದಿಕೊಂಡಿರುವ ಹೆಚ್ಚುವರಿಯಾಗಿದ್ದ ಸ್ಥಳ ಸೇರಿ ನಿವೇಶನದ ವಿಸ್ತೀರ್ಣವು 278.73 ಸ್ಕ್ವೇರ್‌ ಮೀಟರ್‌ ಆಗಿದ್ದು, ಅದಕ್ಕೆ ಪ್ರತ್ಯೇಕವಾಗಿ 18 ಲಕ್ಷ ರೂಪಾಯಿಗಳನ್ನು ಕೆಎಚ್‌ಬಿ ಪಡೆದುಕೊಂಡಿದೆ. ಕ್ರಯಪತ್ರ ಮಾಡಿಕೊಡುವಾಗ ಕರ್ನಾಟಕ ಗೃಹ ಮಂಡಳಿ ನಿವೇಶನ ಹಂಚಿಕೆ ನಿಯಮಾವಳಿ 1983ರನ್ನು ಪಾಲಿಸಲಾಗಿಲ್ಲ” ಎಂದು ಪೀಠವು ಹೇಳಿದೆ.
ಟ್ರಸ್ಟ್‌ ಅಧ್ಯಕ್ಷೆ ಗಾಯತ್ರಿ ಲೋಕಸಭಾ ಸದಸ್ಯ ಉಮೇಶ್‌ ಜಾಧವ್‌ ಪತ್ನಿ ಎಂಬ ಕಾರಣಕ್ಕೆ ಕೆಎಚ್‌ಬಿ ಪಕ್ಷಪಾತದ ನಿಲುವು ಕೈಗೊಂಡಿದೆ. ಮನವಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ದಾಖಲಿಸಿದ್ದ ಕೆಎಚ್‌ಬಿಯು ಪಿಐಎಲ್‌ ನಿರ್ವಹಣೆಗೆ ಅರ್ಹವಲ್ಲ. ಶಿಕ್ಷಣ ಸಂಸ್ಥೆ ಸ್ಥಾಪಿಸುವ ಸದುದ್ದೇಶದಿಂದ ಗಾಯತ್ರಿ ಕೋರಿಕೆ ಸಲ್ಲಿಸಿದ್ದರಿಂದ ನಿವೇಶನ ಹಂಚಿಕೆ ಮಾಡಲಾಗಿತ್ತು. ಸದರಿ ನಿವೇಶನವನ್ನು ಒಳಗೊಂಡು ಬೇರೊಬ್ಬರು ದಾವೆ ಹೂಡಿದ್ದರಿಂದ ಷರತ್ತುಬದ್ಧ ಕ್ರಯಪತ್ರದ ಭರವಸೆ ಜಾರಿಗೊಳಿಸಲಾಗಿಲ್ಲ. ಹೀಗಾಗಿ, 2020ರ ಜುಲೈನಲ್ಲಿ ಹೊಸದಾಗಿ ಕ್ರಯಪತ್ರ ಮಾಡಿಕೊಡಲಾಗಿದೆ ಎಂದು ವಾದಿಸಿತು. ಗಾಯತ್ರಿಯವರು ಟೆಂಡರ್‌ ಅಥವಾ ಹರಾಜಿನ ಮೂಲಕ ನಿವೇಶನ ಪಡೆದಿರುವ ಕುರಿತ ದಾಖಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಇದ್ಯಾವುದೂ ಕೆಎಚ್‌ಬಿಯ ಪ್ರತಿಕ್ರಿಯೆಯಲ್ಲಿ ಸ್ಥಾನ ಪಡೆದಿಲ್ಲ. ಸದಾಶಿವನಗರ ಯುವ ಸಂಘಟನೆ ವರ್ಸಸ್‌ ಕರ್ನಾಟಕ ಸರ್ಕಾರ ಮತ್ತು ಇತರರು ಪ್ರಕರಣದಲ್ಲಿ ಆಕ್ಷೇಪಾರ್ಹವಾದ ನಿವೇಶನದ ಬಗ್ಗೆ ಉಲ್ಲೇಖ ಇದೆಯಾದರೂ ಅದು ಈ ನಿವೇಶನಕ್ಕೆ ಸಂಬಂಧಪಟ್ಟಿಲ್ಲ” ಎಂದು ಪೀಠ ಆದೇಶದಲ್ಲಿ ಹೇಳಿದೆ.
ಸಾರ್ವಜನಿಕ ಒಳಿತಾಗಿ ಇರುವ ಸಿ ಎ ನಿವೇಶನವನ್ನು ನಿವೇಶನವನ್ನು ಕೆಎಚ್‌ಬಿಯು ಒಂದು ತಿಂಗಳ ಒಳಗೆ ತನ್ನ ವಶಕ್ಕೆ ಪಡೆಯಬೇಕು. ನಿಯಮಾವಳಿಗಳನ್ನು ಪಾಲಿಸದ ಕೆಎಚ್‌ಬಿಯು ಒಂದು ಲಕ್ಷ ರೂಪಾಯಿ ದಂಡದ ಹಣವನ್ನು ಒಂದು ತಿಂಗಳ ಒಳಗಾಗಿ ಬೆಂಗಳೂರು ವಕೀಲರ ಸಂಘದ ಖಾತೆಗೆ ಜಮೆ ಮಾಡಬೇಕು. ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸತ್ಯಶೋಧನೆ ತನಿಖೆ ನಡೆಸಬೇಕು. ಗೃಹ ಮಂಡಳಿಯ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆ ನಡೆಸುವುದರ ಜೊತೆಗೆ ಕೆಎಚ್‌ಬಿ ಪಾವತಿಸಲಿರುವ ದಂಡದ ಮೊತ್ತವನ್ನು ವಸೂಲಿ ಮಾಡಬೇಕು. ಈ ಎಲ್ಲಾ ಪ್ರಕ್ರಿಯೆ ಆರು ತಿಂಗಳ ಒಳಗೆ ಪೂರ್ಣಗೊಳ್ಳಬೇಕು” ಎಂದು ಪೀಠ ಆದೇಶದಲ್ಲಿ ತಿಳಿಸಿದೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement