ಸರ್ಕಾರದ ಮಹತ್ವದ ನಿರ್ಧಾರ : 2021- 22ನೇ ಸಾಲಿಗೂ ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಕೆ:

ಬೆಂಗಳೂರು: ಕಳೆದ ಸಾಲಿನಲ್ಲಿ ಬೇರೆ ಬೇರೆ ವಿಶ್ವ ವಿದ್ಯಾಲಯಗಳಲ್ಲಿ ಕಾರ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.
2021- 22ನೇ ಸಾಲಿಗೂ ಸೇವೆ ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಕಳೆದ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಇದ್ದವರನ್ನು ಒಂದು ದಿನದ ಮಟ್ಟಿಗೆ ಸೇವೆಯಿಂದ ಬಿಡುಗಡೆಗೊಳಿಸಿ ಪುನಃ ಸೇವೆಗೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಈ ಮೊದಲು ಸಲಹೆ ನೀಡಿದ್ದರು. ಈ ಸಂಬಂಧ ಅಂದಿನ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು.
ರಾಜ್ಯದ 412 ಪದವಿ ಕಾಲೇಜುಗಳಲ್ಲಿ ಸುಮಾರು 14,564 ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ ನಿಯಮಾವಳಿ ಪ್ರಕಾರ ಅತಿಥಿ ಉಪನ್ಯಾಸಕರು ವಿದ್ಯಾರ್ಹತೆ ಹೊಂದಿರುತ್ತಾರೆ. ಕಳೆದ 2 ವರ್ಷಗಳಿಂದ ಕೊರೊನಾ ಹಿನ್ನೆಲೆ ಅತಿಥಿ ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು.
ಅತಿ ಕಡಿಮೆ ವೇತನ ಮತ್ತು ಸೇವಾ ಭದ್ರತೆ ಇಲ್ಲದ ಕಾರಣ ಸಂಕಷ್ಟ ಅನುಭವಿಸುತ್ತಿದ್ದಾರೆ. ಈಗಾಗಲೇ ಕಡಿಮೆ ವೇತನ ಮತ್ತು ಭದ್ರತೆ ಇಲ್ಲದ ಕಾರಣ ರಾಜ್ಯದಲ್ಲಿ ಹಲವಾರು ಉಪನ್ಯಾಸಕರು ಆತ್ಮಹತ್ಯೆಗೆ ಶರಣಾಗಿದ್ದಾರೆಹೀಗಾಗಿ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕೆಂದು ಹೊರಟ್ಟಿ ಅವರು ಕೋರಿದ್ದರು.
ಎಲ್ಲ ವಿದ್ಯಾರ್ಹತೆ ಹಾಗೂ ಹಲವು ವರ್ಷಗಳ ಅನುಭವ ಅತಿಥಿ ಉಪನ್ಯಾಸಕರಿಗಿದೆ. ಹಲವಾರು ಜನ ವಯೋವಿತಿ ಮೀರುತ್ತಿರುವುದರಿಂದ ಅಭದ್ರತೆಯಲ್ಲಿ ಸಿಲುಕಿದ್ದಾರೆ ಎಂದು ವಿವರಿಸಿದ್ದರು. ಇವರಂತೆಯೇ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹಂಗಾಮಿಯಾಗಿ ಕರ್ತವ್ಯ ನಿರ್ವಹಿಸಿದ ಪದನಾಮ ಬದಲಾದ ಸ್ಥಳೀಯ ಅಭ್ಯರ್ಥಿ, ಸ್ಟಾಪ್‍ಗ್ಯಾಪ್, ಗುತ್ತಿಗೆ ಆಧಾರಿತ, ಅರೆಕಾಲಿಕ ಉಪನ್ಯಾಸಕರುಗಳನ್ನು ಸರ್ಕಾರ ಮಾನವೀಯತೆಯ ಆಧಾರದ ಮೇಲೆ ಸೂಕ್ತ ಕಾಯ್ದೆ ತಿದ್ದುಪಡಿ ಮಾಡಿ 1982, 1992, 1996 ಮತ್ತು 2003ರಲ್ಲಿ ಕಾಯಂ ಮಾಡಿರುವ ಉದಾಹರಣೆಗಳಿವೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿಗೆ ಪತ್ರದ ಬರೆದಿದ್ದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement