ಬೆಂಗಳೂರು: ಕರ್ನಾಟಕದಲ್ಲಿರುವ ಚರ್ಚ್ಗಳ ಕುರಿತು ಮಾಹಿತಿ ಸಂಗ್ರಹಿಸಲು ಜುಲೈ 7ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಕೆಯಾಗಿದ್ದು, ಕರ್ನಾಟಕ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
ಮನವಿಯ ಜೊತೆ ಸಲ್ಲಿಸಲಾಗಿರುವ ʼಎʼನಿಂದ ʼಸಿʼ ವರೆಗಿನ ಅನುಬಂಧದ ಭಾಷಾಂತರದ ಪ್ರತಿಗಳನ್ನು ಸಲ್ಲಿಸುವಂತೆ ಅರ್ಜಿದಾರ ಸಂಸ್ಥೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ಗೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠವು ಶುಕ್ರವಾರ ನಿರ್ದೇಶಿಸಿದೆ ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.
ಅಲ್ಪಸಂಖ್ಯಾತರ ನಿರ್ದೇಶನಾಲಯವು ಹೊರಡಿಸಿರುವ ಆದೇಶವು ಅರ್ಥಹೀನ, ತಾರತಮ್ಯ ಮತ್ತು ಸಂವಿಧಾನದ ಅಡಿ ದೊರೆತಿರುವ ರಾಜ್ಯದಲ್ಲಿ ನೆಲೆಸಿರುವ ಅಪಾರ ಸಂಖ್ಯೆಯ ಜನರ ಖಾಸಗಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಚರ್ಚ್ಗಳು ಇರುವ ಸ್ಥಳ, ತಾಲ್ಲೂಕು, ಜಿಲ್ಲೆ ಮತ್ತು ಅವುಗಳ ವಿಧಾನಸಭಾ ಕೇತ್ರದ ವ್ಯಾಪ್ತಿಯ ದತ್ತಾಂಶವನ್ನು ಸಮೀಕ್ಷೆಯಲ್ಲಿ ಸಂಗ್ರಹಿಸಲು ಉದ್ದೇಶಿಸಲಾಗಿದೆ. ಜೊತೆಗೆ ಸಂಸ್ಥೆಯ ವಿಳಾಸ, ಖಾತೆಯ ನಂಬರ್, ಸರ್ವೆ ನಂಬರ್ ಮತ್ತು ಚರ್ಚಿನ ಪಾದ್ರಿಯ ವಿವರನ್ನು ಸಂಗ್ರಹಿಸಲು ಆದೇಶ ಮಾಡಲಾಗಿದೆ” ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಯಾವ ಕಾರಣಕ್ಕಾಗಿ ಚರ್ಚ್ಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂಬುದನ್ನು ಸರ್ಕಾರದ ಆಕ್ಷೇಪಾರ್ಹ ಆದೇಶದಲ್ಲಿ ವಿವರಿಸಲಾಗಿಲ್ಲ. ಅಲ್ಪಸಂಖ್ಯಾತರ ವರ್ಗಕ್ಕೆ ಬರುವ ಇತರೆ ಸಮುದಾಯಗಳನ್ನು ಹೊರತುಪಡಿಸಿ ಕೇವಲ ಚರ್ಚ್ಗಳಿಗೆ ಸಂಬಂಧಿಸಿದ ಮಾಹಿತಿಯನ್ನಷ್ಟೇ ಏಕೆ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿಲ್ಲ. ಮಾಹಿತಿ ಸಂಗ್ರಹದ ಹಿಂದಿನ ಉದ್ದೇಶನ ತಿಳಿಸಲಾಗಿಲ್ಲ. ಈ ರೀತಿ ಮಾಹಿತಿ ಸಂಗ್ರಹಿಸಲು ಯಾವುದೇ ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಆಕ್ಷೇಪಾರ್ಹವಾದ ಆದೇಶದ ಮೂಲಕ ಚರ್ಚ್ಗಳ ದತ್ತಾಂಶ ಸಂಗ್ರಹವು ಕಾನೂನುಬಾಹಿರ, ತಾರತಮ್ಯ, ಸ್ವೇಚ್ಛೆಯಿಂದ ಕೂಡಿದ್ದು, ಅಸಾಂವಿಧಾನಿಕವಾಗಿದೆ. ಸಂವಿಧಾನದ 14 ಮತ್ತು 21ನೇ ವಿಧಿಯಡಿ ದೊರೆತಿರುವ ಸಮಾನತೆ ಮತ್ತು ಖಾಸಗಿ ಹಕ್ಕನ್ನು ಉಲ್ಲಂಘಿಸುವುದರಿಂದ ಸರ್ಕಾರದ ಆದೇಶ ವಜಾಕ್ಕೆ ಅರ್ಹವಾಗಿದೆ ಎಂದು ವಿವರಿಸಲಾಗಿದೆ ಎಂದು ವರದಿ ತಿಳಿಸಿದೆ.
ಆಕ್ಷೇಪಾರ್ಹವಾದ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕು ಹಾಗೂ ಪ್ರತಿವಾದಿಗಳು ಯಾವುದೇ ತೆರನಾದ ದುರುದ್ದೇಶಪೂರಿತ ಕ್ರಮಕೈಗೊಳ್ಳದಂತೆ ಆದೇಶ ಮಾಡಬೇಕು. ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯಿದೆ 2019ರ ಅಡಿ ಪುಟ್ಟಸ್ವಾಮಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಾರ್ಗಸೂಚಿಯ ಪ್ರಕಾರ ಈಗಾಗಲೇ ಸಂಗ್ರಹಿಸಿರುವ ದತ್ತಾಂಶವನ್ನು ಸಂರಕ್ಷಿಸಿಡಲು ಸರ್ಕಾರಕ್ಕೆ ಆದೇಶ ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ