ನವದೆಹಲಿ : ದೆಹಲಿಯ ಓಲ್ಡ್ ಸೀಮಾಪುರ ಪ್ರದೇಶದಲ್ಲಿ ಬೃಹತ್ ಮನೆಯೊಂದರಲ್ಲಿ ಮುಂಜಾನೆಯ ವೇಳೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹೊಗೆಯಿಂದ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಹೋರಿಲಾಲ್ ( 58 ವರ್ಷ), ಪತ್ನಿ ರೀನಾ ( 55 ವರ್ಷ), ಮಗ ಅಶು ( 24 ವರ್ಷ), ಮತ್ತು ಮಗಳು ರೋಹಿಣಿ (18 ವರ್ಷ ) ಎಂದು ಗುರುತಿಸಲಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಮೂರನೇ ಮಹಡಿಯ ಕೊಠಡಿಯಲ್ಲಿ ನಾಲ್ವರು ಕೂಡ ಮನೆಯಲ್ಲಿ ಮಲಗಿದ್ದರು, ಮುಂಜಾನೆ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ದಳಕ್ಕೆ ಬೆಳಗಿನ ಜಾವ 4.07ಕ್ಕೆ ಮಾಹಿತಿ ಲಭಿಸಿದೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ನಾಲ್ವರು ಕೂಡ ಉಸಿರುಗಟ್ಟಿ ಮೃತಪಟ್ಟಿದ್ದರು. ಅಗ್ನಿಶಾಮಕ ಸಿಬ್ಬಂದಿ ನಾಲ್ವರ ಮೃತದೇಹಗಳನ್ನು ಕೊಠಡಿಯಿಂದ ಹೊರಗೆ ತೆಗೆದಿದ್ದಾರೆ. ಹೋರಿಲಾಲ್ ಹಾಗೂ ರೀನಾ ದಂಪತಿ ಮತ್ತೋರ್ವ ಮಗ ಅಕ್ಷಯ್ ಎರಡನೇ ಮಹಡಿಯಲ್ಲಿ ಮಲಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಹೇಳಲಾಗಿದೆ.
ಸೊಳ್ಳೆ ಕಾಯಿಲ್ಗೆ ಬೆಂಕಿ ತಗುಲಿ ದಟ್ಟವಾದ ಹೊಗೆ ತುಂಬಿಕೊಂಡಿರುವುದು ಘಟನೆ ಕಾರಣ ಎಂದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾರತೀಯ ದಂಡ ಸಂಹಿತೆಯ 436 ಮತ್ತು 304 ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಎಲ್ಲಾ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ