
ಬೆಂಗಳೂರು: ಇಂದು ಸಂಜೆಯೇ ನಟ ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಹೇಳಿಕೆ ನೀಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಪಾರ್ಥಿವ ಶರೀರದ ಮೆರವಣಿಗೆ ಪ್ರಾರಂಭಿಸಲಾಗುತ್ತದೆ. ಸಂಜೆ 5ರಿಂದ 5:30ರ ವೇಳೆಗೆ ಕಂಠೀರವ ಸ್ಟುಡಿಯೋಗೆ ಬರಲಿದೆ. ಮಧ್ಯಾಹ್ನ 1.30ರ ವೇಳೆಗೆ ಪುನೀತ್ ಪುತ್ರಿ ದೆಹಲಿಗೆ ಬರುತ್ತಾರೆ. ಅಲ್ಲಿಂದ ಸಂಜೆ 4ರಿಂದ 5 ಗಂಟೆ ವೇಳೆಗೆ ಬೆಂಗಳೂರಿಗೆ ಬರಲಿದ್ದಾರೆ. ಅವರು ಬರುವವರೆಗೆ ಪೂಜೆಗಳನ್ನು ಮಾಡಲಾಗುತ್ತದೆ. ಪುತ್ರಿ ದ್ರಿತಿ ಬಂದ ಬಳಿಕ ಅಂತಿಮ ವಿಧಿವಿಧಾನ ಮಾಡಲಾಗುತ್ತದೆ. ಪಾರ್ವತಮ್ಮ ಸಮಾಧಿ ಪಕ್ಕದಲ್ಲಿಯೇ ಪುನೀತ್ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ರಾಕ್ಲೈನ್ ವೆಂಕಟೇಶ್ ಹೇಳಿಕೆ ನೀಡಿದ್ದಾರೆ.

ಪುನೀತ್ ಅಂತ್ಯಕ್ರಿಯೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ; ಪುತ್ರಿ ತಲುಪಿದ ನಂತರ ಸಮಯ ನಿಗದಿ: ಸಿಎಂ
ಪುನೀತ್ ಅಂತ್ಯಕ್ರಿಯೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರು, ಗಣ್ಯರಿಗೆ ಅವಕಾಶವಿದ್ದು, ಸಾರ್ವಜನಿಕರಿಗೆ ಅವಕಾಶ ಇಲ್ಲ, ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಪುನೀತ್ ಪುತ್ರಿ ದೆಹಲಿ ತಲುಪಿದ ಬಳಿಕ ಅಂತ್ಯಕ್ರಿಯೆ, ಮೆರವಣಿಗೆಯ ಬಗ್ಗೆ ಸಮಯ ನಿಗದಿ ಮಾಡಲಾಗುವುದು. ಮೆರವಣಿಗೆ, ಅಂತ್ಯಕ್ರಿಯೆಗೆ ಎಲ್ಲ ವ್ಯವಸ್ಥೆ ಮಾಡಿದ್ದೇವೆ. ಅಭಿಮಾನಿಗಳು ಸಂಯಮದಿಂದ ವರ್ತಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
ಅಂತ್ಯಕ್ರಿಯೆಗೆ ಸಕಲ ಸಿದ್ಧತೆ..:
ಕಂಠೀರವ ಸ್ಟುಡಿಯೋ ಆವರಣದಲ್ಲಿ ಡಾ. ರಾಜ್ಕುಮಾರ್ ಪ್ರತಿಷ್ಠಾನದ ಸ್ವಾಮ್ಯದಲ್ಲಿರುವ ಜಮೀನಿನಲ್ಲಿ ಸರ್ಕಾರದ ಸಕಲ ಗೌರವಗಳೊಂದಿಗೆ ಪುನೀತ್ ರಾಜ್ಕುಮಾರ್ ಅವರ ಅಂತ್ಯಸಂಸ್ಕಾರ ನಡೆಯಲಿದೆ. ಈ ಕುರಿತಾಗಿ ನಿನ್ನೆಯೇ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಲ್ಲಿ ತಿಳಿಸಲಾಗಿದೆ.
ವಿದೇಶದಲ್ಲಿರುವ ಮಗಳು ಇಂದು ಸಂಜೆ 4-30ರ ಸುಮಾರಿಗೆ ಬೆಂಗಳೂರಿಗೆ ತಲುಪಲಿದ್ದಾರೆ. ಮಗಳು ಬಂದ ಕೂಡಲೇ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಆರಂಭವಾಗಲಿದೆ. ದೆಹಲಿಗೆ ಮಗಳು ಆಗಮಿಸುತ್ತಿದ್ದಂತೆ ಇಲ್ಲಿ ಮೆರವಣಿಗೆ ಪ್ರಾರಂಭವಾಗಲಿದೆ. ಏರ್ ಇಂಡಿಯಾ ವಿಶೇಷ ವಿಮಾನದ ಮೂಲಕ ಮಗಳನ್ನು ಕರೆತರಲಾಗುತ್ತಿದೆ. ಈಗಾಗಲೇ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಸಂಸ್ಕಾರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಆರಂಭಿಸಲಾಗಿದೆ.
ಕಂಠೀರವ ಸ್ಟೇಡಿಯಂಗೆ ಸಿಎಂ ಭೇಟಿ..
ನಟ ಪುನೀತ್ ರಾಜಕುಮಾರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಕಂಠೀರವ ಕ್ರೀಡಾಂಗಣಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದರು.
ಕಂಠೀರವ ಸ್ಟೇಡಿಯಂಗೆ ತೆರಳಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನದ ವ್ಯವಸ್ಥೆಯನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಪುನೀತ್ ಸಹೋದರ ರಾಘವೇಂದ್ರ ರಾಜಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿದರು. ಈ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಜೊತೆಗಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ