ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಮುಂಬೈ ನ್ಯಾಯಾಲಯ ನ. 6 ರ ವರೆಗೆ ಜಾರಿ ನಿರ್ದೇಶನಾಲಯದ (ಇಡಿ) ವಶಕ್ಕೆ ಒಪ್ಪಿಸಿದೆ.
ಸುದೀರ್ಘ 12 ಗಂಟೆಗಳ ವಿಚಾರಣೆಯ ನಂತರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶಮುಖ್ ಅವರನ್ನು ಮಂಗಳವಾರ ಬೆಳಗಿನ ಜಾವ ಜಾರಿ ನಿರ್ದೇಶನಾಲಯ ಬಂಧಿಸಿತ್ತು.
ಜೆಜೆ ಆಸ್ಪತ್ರೆಯಿಂದ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಮಧ್ಯಾಹ್ನ 12 ಗಂಟೆಯ ವೇಳೆಗೆ ಅವರನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪಿ. ಬಿ. ಜಾಧವ್ ಅವರ ಮುಂದೆ ಹಾಜರುಪಡಿಸಲಾಯಿತು. ಕಕ್ಷಿದಾರರ ವಾದ ಆಲಿಸಿದ ನ್ಯಾಯಾಧೀಶರು ದೇಶ್ಮುಖ್ ಅವರನ್ನು ಇ ಡಿ ವಶಕ್ಕೆ ಒಪ್ಪಿಸಿದರು.
ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ದೇಶಮುಖ್ ಮತ್ತು ಅವರ ಸಹಚರರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿತ್ತು. ಆ ಬಳಿಕ ಇ ಡಿ ತನಿಖೆ ಆರಂಭಿಸಿತ್ತು.
ಸೇವೆಯಿಂದ ವಜಾಗೊಂಡಿದ್ದ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರಿಗೆ ನಗರದ ವಿವಿಧ ರೆಸ್ಟೋರೆಂಟ್ಗಳು ಮತ್ತು ಬಾರ್ಗಳಿಂದ ₹ 4.7 ಕೋಟಿಗಳಷ್ಟು ಹಣ ವಸೂಲಿ ಮಾಡಿಕೊಡುವಂತೆ ಸೂಚಿಸುವ ಮೂಲಕ ದೇಶಮುಖ್ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡರು ಎಂಬುದು ಇ ಡಿ ವಾದವಾಗಿತ್ತು. ಸುಲಿಗೆ ಮಾಡಿದ ಹಣವನ್ನು ದೇಶ್ಮುಖ್ ಅವರು ತಮ್ಮ ಕುಟುಂಬ ಸದಸ್ಯರ ಒಡೆತನದಲ್ಲಿರುವ ನಾಗಪುರ ಮೂಲದ ಟ್ರಸ್ಟ್ಗೆ ವರ್ಗಾಯಿಸಿದ್ದಾರೆ ಎಂದು ಹೇಳಲಾಗಿತ್ತು.
ದೇಶ್ಮುಖ್ ಅವರಿಗೆ ಇಡಿ ಐದು ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ಅವರು ಸಮನ್ಸ್ಗಳಿಗೆ ಪ್ರತಿಕ್ರಿಯಿಸಿರಲಿಲ್ಲ. ಇದೇ ವೇಳೆ ಅವರು ತಮ್ಮ ವಿರುದ್ಧ ಸಮನ್ಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. ಅಲ್ಲದೆ ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯಗಳನ್ನು ಸಂಪರ್ಕಿಸಲು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶಿಸಿತ್ತು.
ದೇಶ್ಮುಖ್ ಅವರು ಸೋಮವಾರ ಇ ಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದರು. ಸುಮಾರು 12 ಗಂಟೆಗಳ ವಿಚಾರಣೆಯ ನಂತರ, ಮಂಗಳವಾರ ಬೆಳಗಿನ ಜಾವ ಅವರನ್ನು ಬಂಧಿಸಲಾಯಿತು.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ | |
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ