ನವೆಂಬರ್ 14ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಧ್ಯಕ್ಷತೆಯಲ್ಲಿ ದಕ್ಷಿಣ ವಲಯದ ಸಮನ್ವಯದ ಸಭೆ, ಸಿಎಂ ಬೊಮ್ಮಾಯಿ ಭಾಗಿ

ಬೆಂಗಳೂರು: ದಕ್ಷಿಣ ವಲಯದ ಸಮನ್ವಯಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 14 ರಂದುಮುಖ್ಯಮಂತ್ರಿಗಳ ಸಭೆ ನಡೆಯಲಿದ್ದು, ನಾನು ಭಾಗವಹಿಸಲಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಪೂರ್ವಭಾವಿಯಾಗಿ ಶುಕ್ರವಾರ ಸಭೆ ನಡೆಸಿ, ಸಮ್ಮೇಳನದಲ್ಲಿ ಪ್ರಸ್ತಾಪಿಸಬೇಕಾದ ಅಂಶಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುಜರಾತ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಸನ್ಮಾನ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯದ ಎಲ್ಲ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಂ.ಆರ್. ಶ್ರೀನಿವಾಸಮೂರ್ತಿ ಅಧ್ಯಕ್ಷತೆಯ ಸಮಿತಿ ಹಾಗೂ ಎಸ್ಕಾಂ ಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ವರದಿ ನೀಡಲು ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಕೆ. ಜೈರಾಜ್ ಅಧ್ಯಕ್ಷತೆ ಸಮಿತಿ ರಚಿಸಲಾಗುವುದು ಎಂದು ಅವರು ತಿಳಿಸಿದರು.
ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳು ಲಾಭದಾಯಕವಾಗಿ ಕಾರ್ಯನಿರ್ವಹಿಸಲು ಹಾಗೂ ಜನತೆಗೆ ಉತ್ತಮ ಸೇವೆ ಒದಗಿಸಲು ಕೈಗೊಳ್ಳಬೇಕಾಗಿರುವ ಸುಧಾರಣಾ ಕ್ರಮಗಳ ಕುರಿತು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದ ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿ ರಚಿಸಲಾಗುತ್ತಿದೆ.
ಕೆ. ಜೈರಾಜ್ ಇಂಧನ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ಅನುಭವ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ವಿದ್ಯುತ್ ಸರಬರಾಜು ಕಂಪೆನಿಗಳು ಜನರಿಗೆ ಅತ್ಯುತ್ತಮ ಸೇವೆ ನೀಡುವ ಕುರಿತು ಹಾಗೂ ಹಣಕಾಸು ಸ್ಥಿತಿ ಸುಧಾರಣೆ ಕುರಿತು ಪರಿಶೀಲಿಸಿ ವರದಿ ನೀಡಲು ಅವರ ನೇತೃತ್ವದ ಸಮಿತಿ ರಚಿಸಲಾಗುತ್ತಿದೆ. ಶೀಘ್ರವೇ ಆದೇಶ ಹೊರಬೀಳಲಿದೆ ಎಂದು ತಿಳಿಸಿದರು.
ನವೆಂಬರ್ 16 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಹೂಡಿಕೆದಾರರಿಗೆ ಸುಗಮ ಕಾರ್ಯನಿರ್ವಹಣೆಗೆ ಅನುವು ಮಾಡಿಕೊಡುವ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದು, ಈ ಕುರಿತೂ ಸಹ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ಮತಾಂತರ ನಿಷೇಧ ಕಾಯ್ದೆ..:

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಮಠಾಧೀಶರು ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಇತರ ರಾಜ್ಯಗಳ ಕಾಯ್ದೆಗಳನ್ನು ಅಧ್ಯಯನ ನಡೆಸುತ್ತಿದ್ದು, ಶೀಘ್ರವೇ ರಾಜ್ಯವು ತನ್ನದೇ ಪ್ರತ್ಯೇಕ ಕಾಯ್ದೆಯನ್ನು ಹೊಂದಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
ಬಲವಂತದ, ಆಸೆ, ಆಮಿಷಗಳ ಮೂಲಕ ಮತಾಂತರ ಮಾಡುವುದು ಸಲ್ಲದು ಎಂದು ಸಂವಿಧಾನ ಹೇಳಿದೆ. ಈ ಕುರಿತು ಹಿಂದೆಯೂ ತಾನು ಬಹಿರಂಗ ಹೇಳಿಕೆ ನೀಡಿರುವುದಾಗಿ ಮುಖ್ಯಮಂತ್ರಿಗಳು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ತಿಳಿಸಿದರು.
ರಾಜ್ಯದಲ್ಲಿ ಅತಿವೃಷ್ಟಿಯಿಂದ ಕಳೆದ ಕೆಲವು ದಿನಗಳಲ್ಲಿ ಸಂಭವಿಸಿರುವ ಹಾನಿಯ ಕುರಿತು ವಿರೋಧ ಪಕ್ಷದ ನಾಯಕರು ಬರೆದಿರುವ ಪತ್ರ ಕೈಸೇರಿದೆ. ಅಧಿಕಾರಿಗಳಿಂದ ವಿವರಗಳನ್ನ ಪಡೆದು ವಿರೋಧ ಪಕ್ಷದ ನಾಯಕರಿಗೆ ಉತ್ತರಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement