ಅಪಘಾತದಲ್ಲಿ ಗಾಯಗೊಂಡವರನ್ನು ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಯುವಕರಿಬ್ಬರನ್ನು ಉಪಚಾರ ಮಾಡಿ ತಮ್ಮ ಎಸ್ಕಾರ್ಟ್ ವಾಹನದಲ್ಲೇ ಗಾಯಾಳುಗಳನ್ನು ಆಸ್ಪತ್ರೆಗೆ ಕರೆತಂದು ದಾಖಲಿಸಿ ಗೃಹಸಚಿವ ಆರಗ ಜ್ಞಾನೇಂದ್ರ ಮಾನವೀಯತೆ ಮೆರೆದಿದ್ದಾರೆ. ಅವರ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.
ಶನಿವಾರ ಬೆಳಗ್ಗೆ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು, ಅವರು ಬರುವ ಮಾರ್ಗದಲ್ಲಿ ಮಂಡಗದ್ದೆ ಬಳಿ ಬೈಕ್ ಅಪಘಾತವಾಗಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಗೃಹ ಸಚಿವರು ಕಾರು ನಿಲ್ಲಿಸಿ ತಾವೇ ಗಾಯಾಳುಗಳಿಗೆ ಉಪಚರಿಸಿದ್ದಾರೆ. ಓರ್ವ ಯುವಕ ಪ್ರಜ್ಞಾಹೀನನಾಗಿದ್ದು ಆತನಿಗೆ ನೀರು ಕುಡಿಸಿ ಉಪಚರಿಸಿದ್ದಾರೆ.
ಬಳಿಕ ಆಂಬುಲೆನ್ಸ್ ಬರುವುದು ತಡವಾಗಬಹುದು ಎಂದು ತಿಳಿದ ಸಚಿವರು ತಮ್ಮ ಎಸ್ಕಾರ್ಟ್ ವಾಹನದಲ್ಲೇ ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಗೃಹ ಸಚಿವರ ಸಮಯ ಪ್ರಜ್ಞೆ ಹಾಗೂ ಮಾನವೀಯ ಗುಣಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement