ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಅಭೂತಪೂರ್ವ ಮಳೆಯಿಂದ ಉಂಟಾದ ಪ್ರವಾಹದಿಂದ 44 ಜನರು ಮೃತಪಟ್ಟಿದ್ದಾರೆ ಎಂದು ಆಂಧ್ರಪ್ರದೇಶ ಸರ್ಕಾರ ಮಾಹಿತಿ ನೀಡಿದೆ.
ಕಳೆದ ಹತ್ತು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಹುಡುಕಾಟ ನಡೆಸಿದಲ್ಲೆಲ್ಲ ಶವಗಳು ಪತ್ತೆಯಾಗುತ್ತಿದೆ. ಈವರೆಗೆ 44 ಶವಗಳನ್ನು ರಕ್ಷಣಾ ಸಿಬ್ಬಂದಿ ಹೊರ ತೆಗೆದಿದ್ದಾರೆ.
ಆಂಧ್ರಪ್ರದೇಶದ ಕಡಪಾ, ಅನಂತಪುರ, ನಲ್ಲೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದ್ದರಿಂದ ಪ್ರವಾಹ ಉಂಟಾಗಿ ಸಾಕಷ್ಟು ಸಾವುನೋವು ಸಂಭವಿಸಿದೆ. ನವೆಂಬರ್ 16 ರಿಂದಲೂ ನಿರಂತವರಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ನಾಪತ್ತೆಯಾದವರ ರಕ್ಷಣಾ ಕಾರ್ಯಾಚರಣೆಯ ವೇಳೆ 44 ಮಂದಿಯ ಶವ ಪತ್ತೆಯಾಗಿದೆ.ರಾಜ್ಯ ಸರ್ಕಾರ ಹೊರಡಿಸಿದ ಹೇಳಿಕೆಯ ಪ್ರಕಾರ, ಕಡಪ, ಚಿತ್ತೂರು, ಅನಂತಪುರ ಮತ್ತು ನೆಲ್ಲೂರು ನಾಲ್ಕು ಜಿಲ್ಲೆಗಳ 119 ಮಂಡಲಗಳ ಒಟ್ಟು 1990 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿದ್ದು, ಅದರಲ್ಲಿ 211 ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, 44 ಮಂದಿ ಮೃತಪಟ್ಟಿದ್ದಾರೆ. ಜನರು ಮತ್ತು 16 ಮಂದಿ ಇನ್ನೂ ಕಾಣೆಯಾಗಿದ್ದಾರೆ ಎಂದು ಸರ್ಕಾರ ಹೇಳಿದೆ.
ಮೃತರ ಕುಟುಂಬಗಳಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ರೆಡ್ಡಿ ಪರಿಹಾರ ಘೋಷಣೆ ಮಾಡಿದ್ದಾರೆ. ಆಂದ್ರಪ್ರದೇಶದಲ್ಲಿ ಮಳೆ ಇನ್ನೂ ಮುಂದುವರಿಯುವ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಅಲ್ಲದೇ ಕುಟುಂಬಸ್ಥರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲಾಗಿದೆ. ನಾಪತ್ತೆಯಾಗಿರುವವರ ಮಾಹಿತಿ ಕಲೆ ಹಾಕುವ ಕಾರ್ಯವನ್ನು ಮಾಡಲಾಗುತ್ತಿದೆ.
ನಿಮ್ಮ ಕಾಮೆಂಟ್ ಬರೆಯಿರಿ