ಪರಿಷತ್‌ ಚುನಾವಣೆಯಲ್ಲಿ ಯಾರೊಂದಿಗೂ ಜೆಡಿಎಸ್‌ ಮೈತ್ರಿ ಇಲ್ಲ: ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್‌ 14 ರಂದು ನಡೆಯಲಿರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈತ್ರಿ ಗೊಂದಲದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಯಾವುದೇ ಪಕ್ಷದ ಜೊತೆ ಯಾವುದೇ ಮೈತ್ರಿ ಒಪ್ಪಂದ ಇಲ್ಲ ಎಂದು ಹೇಳಿದ ಅವರು ಎರಡು ಪಕ್ಷಗಳ ನಡುವೆ ಹೋರಾಟ ಮಾಡುತ್ತೇವೆ ಎಂದರು. ಪರಿಷತ್ ಚುನಾವಣೆ ಘೋಷಣೆ ದಿನದಿಂದ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಾಗುತ್ತಿದೆ ಎಂದು ಅನೇಕ ಮಾಧ್ಯಮಗಳು ವರದಿ ಮಾಡಿದೆ. ಅಷ್ಟೇ ಅಲ್ಲದೆ ಜೆಡಿಎಸ್‌ ನಮ್ಮನ್ನು ಸೋಲಿಸಲು ಬಿಜೆಪಿ ಮೈತ್ರಿ ಮಾಡಿಕೊಂಡಿದೆ ಎಂದು ಕಾಂಗ್ರೆಸ್‌ ಮುಖಂಡರು ವ್ಯಾಖ್ಯಾನಿಸಿದ್ದಾರೆ. ಆದರೆ ಅವರ ಹೇಳಿಕೆಯಲ್ಲಿ ಹುರುಳಿಲ್ಲ ಎಂದರು.
ಸ್ಥಳೀಯ ಮಟ್ಟದಲ್ಲಿ ನಾಯಕರೇ ನಿರ್ಧಾರ ಮಾಡಲು ಅವರಿಗೆ ಅಧಿಕಾರ ನೀಡಲಾಗಿದೆ. 2023ರ ಚುನಾವಣೆಗೆ ನಮ್ಮ ಪಕ್ಷಕ್ಕೆ ಅನುಕೂಲ ಆಗುವ ರೀತಿಯಲ್ಲಿ ನಿರ್ಧಾರ ಮಾಡಿ ಎಂದು ಹೇಳಿದ್ದೇನೆ. ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ. 2023ಕ್ಕೂ ಯಾರ ಜೊತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಪರಿಷತ್‌ ಚುನಾವಣೆಯಲ್ಲಿ ನಾವು ಗೆಲ್ಲಬಹುದಾದ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧೆ ಮಾಡಿದ್ದೇವೆ. ಚುನಾವಣೆ ಪ್ರಚಾರದ ಅಂತ್ಯಕ್ಕೆ ಬಂದದ್ದೇವೆ. ಪರಿಷತ್ ಚುನಾವಣೆಗೆ ಜೆಡಿಎಸ್ ನಿಲುವಿನ ಬಗ್ಗೆ ಕುತೂಹಲ ಇದೆ. ಯಡಿಯೂರಪ್ಪನವರು ಸಾರ್ವಜನಿವಾಗಿ ಹೇಳಿದ್ದಾರೆ, ಎಲ್ಲಿ ನಾವು ಸ್ಪರ್ದಿಸುವುದಿಲ್ಲ ಅಲ್ಲಿ ಜೆಡಿಎಸ್‌ ಗೆ ಬೆಂಬಲ ಕೊಡಿ ಎಂದು, ಆದರೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಇದು ಯಡಿಯೂರಪ್ಪ ಮತ್ತು ಕುಮಾರಸ್ವಾಮಿಯವರ ವೈಯಕ್ತಿಕ ನಿರ್ಧಾರ. ನಮ್ಮ ಪಕ್ಷದಿಂದ ಯಾವುದೇ ಮೈತ್ರಿ ಇಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಯಾವುದೇ ಮೈತ್ರಿ ಇಲ್ಲ ಎಂದು ತಿಳಿಸಿದರು.
ಮುಂಬರುವ 2023ರ ವಿಧಾನಸಭಾ ಚುನಾವಣೆ ಹಿತದೃಷ್ಟಿಯಿಂದ ಸ್ಥಳೀಯವಾಗಿ ನಾವು ಪಕ್ಷ ಸಂಘಟನೆ ಮಾಡಲು ಕಾರ್ಯಗಾರ ಮಾಡಿದ್ದೇವೆ. ಮುಂದಿನ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲಬೇಕು ಎಂಬ ಗುರಿ ನಮ್ಮದಾಗಿದೆ. ಈ ನಿಟ್ಟಿನಲ್ಲಿ ತಯಾರಿ ನಡೆಸುತ್ತಿದ್ದೇವೆ ಎಂದರು.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement