ಬೆಂಗಳೂರಲ್ಲೇ 38,888 ಎಕರೆ ಸರ್ಕಾರಿ ಜಮೀನು ಅತಿಕ್ರಮಣ: ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ

ಸುವರ್ಣಸೌಧ (ಬೆಳಗಾವಿ): ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಸರ್ಕಾರಿ ಜಮೀನನ್ನು ಖಾಸಗಿಯವರು ಅತಿಕ್ರಮಿಸಿಕೊಂಡಿದ್ದು, ರಾಜ್ಯ ಸರ್ಕಾರ, ತನ್ನ ಜಮೀನನ್ನು ವಶಪಡಿಸಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಂಡಿದೆ ಮತ್ತು ಭೂಕಬಳಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯವನ್ನು ಸಹ ಸ್ಥಾಪನೆ ಮಾಡಿದೆ ಎಂದು ವಿಧಾನ ಪರಿಷತ್‍ನಲ್ಲಿ ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.
ಅವರು ಡಾ. ವೈ.ಎ. ನಾರಾಯಣ ಸ್ವಾಮಿ ಚುಕ್ಕೆ ಗುರುತಿನ ಪ್ರಶ್ನೆಗೆ ಸವಿವರವಾಗಿ ಉತ್ತರಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ 14,660 ಪ್ರಕರಣಗಳಲ್ಲಿ 38,888 ಎಕರೆ ಸರಕಾರಿ ಜಮೀನನ್ನು ಖಾಸಗಿಯವರು ಅತಿಕ್ರಮಿಸಿಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 38,546 ಪ್ರಕರಣಗಳಲ್ಲಿ 36,229 ಎಕರೆ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದನ್ನು ತಿಳಿಸಿದ ಸಚಿವ ಆರ್​. ಅಶೋಕ ಜನರು ಅತಿಕ್ರಮಿಸಲ್ಪಟ್ಟ ಗೋಮಾಳ ಮತ್ತು ಸರ್ಕಾರಿ ಜಮೀನುಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ 4,940 ಪ್ರಕರಣಗಳಲ್ಲಿ 16,420 ಎಕರೆ, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ 10,892 ಪ್ರಕರಣಗಳಲ್ಲಿ 11,779 ಎಕರೆ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಜಿಲ್ಲಾಧಿಕಾರಿಗೆ ಪ್ರತಿ ಶನಿವಾರ ಒತ್ತುವರಿ ಪ್ರಕರಣಗಳ ಪರಿಶೀಲನೆ ಜವಾಬ್ದಾರಿ ವಹಿಸಲಾಗಿದೆ. ಸರ್ಕಾರಿ ಜಮೀನುಗಳ ಒತ್ತುವರಿಯನ್ನು ತೆರವುಗೊಳಿಸಲು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿರುವುದನ್ನು ಹಾಗೂ ಸಮಿತಿಗಳು ಕಾರ್ಯ ಪ್ರವೃತ್ತರಾಗಿರುವುದನ್ನು ಸದನದ ಗಮನಕ್ಕೆ ತಂದ ಸಚಿವ ಅಶೋಕ, ಬೆಂಗಳೂರು ನಗರದಲ್ಲಿ ಅಪಾರ ಪ್ರಮಾಣದಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪ್ರತಿ ಶನಿವಾರ ಈ ಒತ್ತುವರಿ ಪ್ರಕರಣಗಳ ಪರಿಶೀಲನೆ ಮತ್ತು ವಶಕ್ಕೆ ಪಡೆದುಕೊಳ್ಳುವುದಕ್ಕೆ ಸಂಬಂಧಿಸಿದ ಜವಾಬ್ದಾರಿ ವಹಿಸಲಾಗಿದೆ ಎಂದರು.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ರಾಜ್ಯದಲ್ಲಿ 62,72,811 ಎಕರೆ ಸರ್ಕಾರಿ ಜಮೀನು:
ರಾಜ್ಯದಲ್ಲಿ ಒಟ್ಟು 62,72,811 ಎಕರೆ ಸರ್ಕಾರಿ ಜಮೀನು ಇದೆ. ಇದರಲ್ಲಿ ಒಟ್ಟು 14,27,195 ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದೆ. ವಿವಿಧ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಒಟ್ಟು 9,732 ಎಕರೆ, ಅಕ್ರಮ-ಸಕ್ರಮ ಯೋಜನೆ ಅಡಿ ಅರ್ಜಿ ಸಲ್ಲಿಸಿದ 9,97,198 ಎಕರೆ ಹಾಗೂ ಸಾರ್ವಜನಿಕ ಉದ್ದೇಶಗಳಿಗೆ ಬಳಕೆಯಾಗಿರುವ 14,048 ಎಕರೆ ಸರ್ಕಾರಿ ಜಮೀನು ಹೊರತುಪಡಿಸಿ 4,06,217 ಎಕರೆ ಒತ್ತುವರಿ ಜಮೀನು ತೆರವುಗೊಳಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ಒತ್ತುವರಿ ತಡೆಗೆ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಸ್ಥಾಪನೆ:
ಒತ್ತುವರಿ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವನ್ನು ರಚಿಸಲಾಗಿದೆ ಎಂದು ಸಚಿವ ಅಶೋಕ ಅವರು ವಿವರಿಸಿದರು.
ಒತ್ತುವರಿದಾರರ ವಿರುದ್ಧ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ 20,841 ಪ್ರಕರಣಗಳನ್ನು ದಾಖಲಿಸಲಾಗಿದ್ದು 4,712 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 16,129 ಪ್ರಕರಣಗಳು ಬಾಕಿ ಇವೆ. 61 ಜನರಿಗೆ ಒಂದು ವರ್ಷದಂತೆ ಶಿಕ್ಷೆ ವಿಧಿಸಲಾಗಿದೆ ಎಂದರು.

ನಿಮ್ಮ ಕಾಮೆಂಟ್ ಬರೆಯಿರಿ

advertisement