ಬೆಂಗಳೂರು: ಕರ್ನಾಟಕದಲ್ಲಿ ಏರಿಕೆಯಾಗುತ್ತಿರುವ ಕೋವಿಡ್-19 ಮತ್ತು ಓಮಿಕ್ರಾನ್ ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಈ ನಿಟ್ಟಿನಲ್ಲಿ ಮಂಗಳವಾರ ಸಂಜೆ ತಜ್ಞರೊಂದಿಗೆ ನಭೆ ನಡೆಸಿ ಕೋವಿಡ್ ಮತ್ತು ಒಮಿಕ್ರಾನ್ ತಡೆಯುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು, ಸೋಮವಾರ
ಅಕ್ಕಪಕ್ಕ ರಾಜ್ಯಗಳಲ್ಲಿ ಹಾಗೂ ಕರ್ನಾಟಕಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್-19(Covid-19) ಹಾಗೂ ಓಮಿಕ್ರಾನ್ (Omicron) ಸೋಂಕು ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ತಜ್ಞರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಗುರುವಾರ ಸಂಪುಟ ಸಭೆ:
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವು ಕ್ರಮಗಳ ಅಗತ್ಯದ ಬಗ್ಗೆ ತಜ್ಞರ ಜೊತೆ ಮಾತುಕತೆ, ಚರ್ಚೆ ನಡೆಸುತ್ತೇವೆ. ಅವರು ನೀಡಿದ ಸಲಹೆಗಳ ಆಧಾರದ ಮೇಲೆ ಗುರುವಾರ ಸಂಪುಟ ಸಹೋದ್ಯೋಗಿಗಳ ಜೊತೆ ಸಚಿವ ಸಂಪುಟ ನಡೆಸಿ ಚರ್ಚಿಸುತ್ತೇನೆ. ಸಭೆಯಲ್ಲಿ ರಾಜ್ಯದ ಒಟ್ಟಾರೆ ಸ್ಥಿತಿಗತಿ, ತೆಗೆದುಕೊಳ್ಳಬೇಕಾದ ದೀರ್ಘಾವಧಿ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಈ ಹಿಂದೆ ಕೋವಿಡ್ ಮೊದಲ ಮತ್ತು ಎರಡನೇ ಅಲೆ ಬಂದು ಲಾಕ್ ಡೌನ್ ಮಾಡಿ ಆದ ಅನುಭವಗಳು, ಆರೋಗ್ಯ ವ್ಯವಸ್ಥೆ, ಕೋವಿಡ್ ಮುನ್ನೆಚ್ಚರಿಕೆ ಯಾವ ರೀತಿ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಮತ್ತು ಜನತೆಗೆ ಸಹ ಗೊತ್ತಾಗಿದೆ. ಜನರು ಸ್ವಯಂ ನಿಯಂತ್ರಣ ಮಾಡಿಕೊಂಡು ಆರೋಗ್ಯ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಕಷ್ಟವಾಗುತ್ತದೆ ಎಂದ ಅವರು ಮುಂದಿನ ದಿನಗಳಲ್ಲಿ ಸೋಂಕಿನ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರುವ ಸುಳಿವನ್ನು ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ