ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಆಡಳಿತ ಪಕ್ಷವಾದ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಆಘಾತವಾಗಿದೆ. ಉತ್ತರ ಪ್ರದೇಶ ಸರ್ಕಾರದಲ್ಲಿ, ಸಂಪುಟ ದರ್ಜೆ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಇದಾದ ನಂತರ ಕೆಲವೇ ಗಂಟೆಗಳಲ್ಲಿ, ಅವರ ನಿಕಟವರ್ತಿಗಳಾದ ರೋಷನ್ ಲಾಲ್ ವರ್ಮಾ, ಬ್ರಿಜೇಶ್ ಪ್ರಜಾಪತಿ, ಭಗವತಿ ಸಾಗರ್ ಮತ್ತು ವಿನಯ್ ಶಾಕ್ಯ ತಮ್ಮ ರಾಜೀನಾಮೆ ಪ್ರಕಟಿಸಿದ್ದಾರೆ.
ಮುಖ್ಯವಾಗಿ ಕೆಲ ತಿಂಗಳಿಂದ ಮೌರ್ಯ ಪಕ್ಷದ ಸಂಘಟನೆ ಹಾಗೂ ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿದ್ದರು ಎನ್ನಲಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣೆಯ ನಂತರ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಈ ಹಿಂದೆ ಒಂದು ಸಂದರ್ಭದಲ್ಲಿ ಹೇಳಿದ್ದರು. ಹೈಕಮಾಂಡ್ ಬೇರೆ ಯಾವುದೇ ಅಭ್ಯರ್ಥಿಯನ್ನೂ ಕಳುಹಿಸಬಹುದು. ಮುಖ್ಯಮಂತ್ರಿ ಅಭ್ಯರ್ಥಿ ಬೇರೆಯವರೂ ಆಗಿರಬಹುದು. ಎಲ್ಲವನ್ನೂ ಕೇಂದ್ರ ನಾಯಕತ್ವ ನಿರ್ಧರಿಸುತ್ತದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿರುದ್ಧ ಅಸಮಾಧಾನ ಹೊರಹಾಕಿದ್ದರು.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನಾಯಕತ್ವದಲ್ಲಿ ಮೌರ್ಯ ಅವರಿಗೆ ನಂಬಿಕೆ ಇಲ್ಲ ಮತ್ತು ಕಾರ್ಯಶೈಲಿಯ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮತ್ತೊಂದು ಕಾರಣವೆಂದರೆ ಸ್ವಾಮಿ ಪ್ರಸಾದ್ ಮೌರ್ಯ ಅವರು ತಮ್ಮ ಪುತ್ರ ಅಶೋಕ್ ಅವರಿಗೆ ಈ ಬಾರಿ ವಿಧಾನಸಭೆಗೆ ಟಿಕೆಟ್ ಕೇಳುತ್ತಿದ್ದಾರೆ. ಆದರೆ ಸ್ವಾಮಿ ಪ್ರಸಾದ್ ಮೌರ್ಯ ಅವರೇ ಶಾಸಕರು ಮತ್ತು ಸಚಿವರಾಗಿದ್ದರು. ಅಲ್ಲದೆ ಅವರ ಪುತ್ರಿ ಸಂಘಮಿತ್ರ ಮೌರ್ಯ ಬದೌನ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿದ್ದಾರೆ. ಬಿಜೆಪಿ ಬೇಡಿಕೆಯನ್ನು ಒಪ್ಪಿಕೊಳ್ಳುವ ಬಗ್ಗೆ ಒಲವು ತೋರಲಿಲ್ಲ. ಮೌರ್ಯ ಅವರು ಕುಶಿನಗರದ ಪದ್ರೌನಾ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದಾರೆ. ಹೀಗಾಗಿ ಪಕ್ಷ ತೊರೆಯಲು ಇದೂ ಒಂದು ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.
ಸ್ವಾಮಿ ಪ್ರಸಾದ್ ಮೌರ್ಯ ಅವರು ಸರ್ಕಾರದ ಕೆಲವು ವಿಷಯಗಳ ಬಗ್ಗೆ ಬಿಜೆಪಿಯ ಕೇಂದ್ರ ನಾಯಕತ್ವಕ್ಕೆ ನಿರಂತರವಾಗಿ ದೂರು ನೀಡುತ್ತಿದ್ದರು.ಸ್ವಾಮಿ ಪ್ರಸಾದ್ ಮೌರ್ಯ ಅವರ ರಾಜೀನಾಮೆಯೊಂದಿಗೆ, 13-14 ಶಾಸಕರು ಮತ್ತು ಅತೃಪ್ತ ಸಚಿವರನ್ನು ಉಳಿಸಿಕೊಳ್ಳಲು ಬಿಜೆಪಿ ದೊಡ್ಡ ಸವಾಲು ಎದುರಿಸುತ್ತಿದೆ. ಮೂಲಗಳ ಪ್ರಕಾರ, ಸ್ವಾಮಿ ಪ್ರಸಾದ್ ಮೌರ್ಯ ಅವರ ಮನವೊಲಿಸುವ ಜವಾಬ್ದಾರಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಗೆ ನೀಡಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಮತ್ತು ಸುನೀಲ್ ಬನ್ಸಾಲ್ ಅವರು ಉಳಿದ ‘ಅತೃಪ್ತ’ ಶಾಸಕರೊಂದಿಗೆ ಮಾತನಾಡಲಿದ್ದಾರೆ.
ಇನ್ನೂ ಕೆಲವು ಸಚಿವರು ಕೂಡ ಶೀಘ್ರದಲ್ಲೇ ಬಿಜೆಪಿ ತೊರೆಯಲಿದ್ದಾರೆ ಎಂಬ ಮಾತು ಕೂಡ ಕೇಳಿಬಂದಿದೆ. ಆದರೆ, ಮೌರ್ಯ ರಾಜೀನಾಮೆಗೆ ಹಳೆಯ ಸಮಸ್ಯೆಗಳೇ ಕಾರಣ. ಉತ್ತರ ಪ್ರದೇಶದ ಸರ್ಕಾರದ ಕಾರ್ಯವೈಖರಿ ಬಗ್ಗೆ ಅವರು ಈಗಾಗಲೇ ಕೋಪಗೊಂಡಿದ್ದರು. ಸ್ವಾಮಿ ಪ್ರಸಾದ್ ಮೌರ್ಯ ಅವರು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ತೊರೆದು 2017ರ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ್ದರು. ಇದೀಗ 2022ರ ಉತ್ತರ ಪ್ರದೇಶದ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಸಮಾಜವಾದಿ ಪಾರ್ಟಿ (ಎಸ್ಪಿ) ಸೇರಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ