ಕೆ ಸಿ ವ್ಯಾಲಿ- ಎಚ್‌ ಎನ್‌ ವ್ಯಾಲಿ: ಪರಿಸರ ಪರಿಣಾಮ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದ ಹೈಕೋರ್ಟ್‌

ಬೆಂಗಳೂರು: ಕೋರಮಂಗಲ ಮತ್ತು ಚಲ್ಲಘಟ್ಟ ವ್ಯಾಲಿ (ಕೆ ಸಿ ವ್ಯಾಲಿ) ಮತ್ತು ಹೆಬ್ಬಾಳ ಮತ್ತು ನಾಗವಾರ ವ್ಯಾಲಿಗೆ (ಎಚ್‌ ಎನ್‌ ವ್ಯಾಲಿ) ಸಂಬಂಧಿಸಿದಂತೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಸಿದ್ಧಪಡಿಸಿರುವ ಪರಿಸರ ಪರಿಣಾಮ ಪರಿಶೀಲನಾ ವರದಿ ಸಲ್ಲಿಸಲು ಮಂಗಳವಾರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.
ಕೆ ಸಿ ವ್ಯಾಲಿ ಮತ್ತು ಎಚ್‌ ಎನ್‌ ವ್ಯಾಲಿ ಯೋಜನೆಯು ಅವೈಜ್ಞಾನಿಕವಾಗಿದೆ. ಇದರಿಂದ ಸಾಕಷ್ಟು ಜನರು ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ ಎಂದು ಆಕ್ಷೇಪಿಸಿ ಆರ್‌ ಆಂಜನ ರೆಡ್ಡಿ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ನೇತೃತ್ವದ ವಿಭಾಗೀಯ ಪೀಠವು ಈ ಆದೇಶ ನೀಡಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸರ್ಕಾರಿ ವಕೀಲೆ ಎಚ್‌ ವಾಣಿ ನ್ಯಾಯಾಲಯದ ನಿರ್ದೇಶನದಂತೆ ಐಐಎಸ್‌ಸಿ 2.37 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಅವರು ವರದಿ ನೀಡಿದ್ದಾರೆ. ಈ ವರದಿಯನ್ನು ಒಂದು ವಾರದಲ್ಲಿ ನ್ಯಾಯಾಲಯದ ಮುಂದೆ ಮಂಡಿಸಲಾಗುವುದು ಎಂದರು.
ಮಧ್ಯಪ್ರವೇಶ ಕೋರಿ ಮನವಿ ಸಲ್ಲಿಸಿರುವ ಹಿರಿಯ ವಕೀಲ ಎಕ್ಸ್‌ ಎಂ ಜೋಸೆಫ್‌ “ಯಾವುದೇ ತೆರನಾದ ಪರಿಶೀಲನಾ ವರದಿಯನ್ನು ಪಡೆಯದೇ ರಾಜ್ಯ ಸರ್ಕಾರವು ಟೆಂಡರ್‌ ಕರೆದಿದೆ. ಇದನ್ನು ಮುಂದುವರಿಸಲು ಅವಕಾಶ ನೀಡಬಾರದು” ಎಂದು ನ್ಯಾಯಾಲಯವನ್ನು ಕೋರಿದರು.
ವಕೀಲ ಪ್ರಿನ್ಸ್‌ ಐಸಾಕ್‌ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ಪರವಾಗಿ ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಟಿ ಆರ್‌ ಗಿರೀಶ್‌ ಅವರು “2020ರ ಜನವರಿ 28 ಮತ್ತು ಮಾರ್ಚ್‌ 10ರಂದು ಕರ್ನಾಟಕ ಹೈಕೋರ್ಟ್‌ ಮನವಿಯನ್ನು ಸ್ವಯಂಪ್ರೇರಿತ ಪ್ರಕರಣ ಎಂದು ಪರಿಗಣಿಸಿ ಅರ್ಜಿದಾರರನ್ನು ನಿರ್ಬಂಧಿಸಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದೇವೆ. ಸದರಿ ಮನವಿಯು ಸುಪ್ರೀಂ ಕೋರ್ಟ್‌ನಲ್ಲಿ ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಹೀಗಾಗಿ, ಮೂರು ವಾರಗಳ ಬಳಿಕ ವಿಚಾರಣೆಗೆ ನಿಗದಿಪಡಿಸಬೇಕು” ಎಂದು ಕೋರಿದರು.
ಪೀಠವು, ಪ್ರಕರಣವು ಸುಪ್ರೀಂ ಕೋರ್ಟ್‌ನಲ್ಲಿರುವುದರಿಂದ ಹೈಕೋರ್ಟ್‌ ನಿರ್ದಿಷ್ಟ ಆದೇಶ ಹೊರಡಿಸಲು ಬಯಸುವುದಿಲ್ಲ ಎಂದು ಹೇಳಿ ವಿಚಾರಣೆಯನ್ನು ಫೆಬ್ರವರಿ 3ಕ್ಕೆ ಮುಂದೂಡಿತು ಎಂದು ವರದಿ ತಿಳಿಸಿದೆ.
ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಣ್ಣ ನೀರಾವರಿ ಕೆರೆ ಕುಂಟೆಗಳಿಗೆ ಶುದ್ದೀಕರಿಸಿದ ನೀರನ್ನು ತುಂಬಿಸುವುದು ಕೆ ಸಿ ವ್ಯಾಲಿ ಮತ್ತು ಎಚ್‌ ಎನ್‌ ವ್ಯಾಲಿ ಉದ್ದೇಶವಾಗಿದೆ.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement