ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಕಾಲಿಗೆ ಗುಂಡೇಟು, ಬಂಧನ

ಬೆಂಗಳೂರು: ಪೊಲೀಸರಿಗೆ ಸವಾಲೆಸೆದು ತಲೆ ಮರೆಸಿಕೊಂಡಿದ್ದ ಕುಖ್ಯಾತ ರೌಡಿ ಕಾಲಿಗೆ ಗುಂಡು ಹಾರಿಸಿ ಆತನನ್ನು ಸೆರೆ ಹಿಡಿಯುವಲ್ಲಿ ಹನುಮಂತನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ರೌಡಿಶೀಟರ್ ರಾಹುಲ್ ಅಲಿಯಾಸ್ ಸ್ಟಾರ್ (22) ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಈತನ ವಿರುದ್ಧ 4 ಕೊಲೆಯತ್ನ ಪ್ರಕರಣ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 21 ಪ್ರಕರಣಗಳು ದಾಖಲಾಗಿವೆ. ಈತನ ವಿರುದ್ಧ 8 ವಾರೆಂಟ್‍ಗಳಿವೆ. ರೌಡಿಶೀಟರ್ ಕುಳ್ಳ ರಿಜ್ವಾನ್ ಸಹಚರನಾಗಿರುವ ಆರೋಪಿ ರಾಹುಲ್ ಗಾಂಜಾ ಪ್ರಕರಣದಲ್ಲಿ ಹನುಮಂತನಗರ ಠಾಣೆ ಪೊಲೀಸರಿಗೆ ಬೇಕಾಗಿದ್ದ. ಈತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.

ಇತ್ತೀಚೆಗೆ ವಿಡಿಯೋವೊಂದನ್ನು ಮಾಡಿ ಪೊಲೀಸರನ್ನು ನಿಂಧಿಸಿ ನನ್ನನ್ನು ಬಂಧಿಸಲು ಆಗುವುದಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ. ಇಂದು, ಸೋಮವಾರ ಬೆಳಗಿನ ಜಾವ 4:30ರ ಸುಮಾರಿನಲ್ಲಿ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣನಗರದ ಬಳಿ ಸ್ಕೂಟರಿನಲ್ಲಿ ಆರೋಪಿ ರಾಹುಲ್ ಬರುತ್ತಿದ್ದಾನೆಂಬ ಮಾಹಿತಿ ಪಡೆದ ಪೊಲೀಸರು ಬಂಧಿಸಲು ಹೋಗಿದ್ದಾರೆ.
ಹನುಮಂತನಗರ ಠಾಣೆಸಬ್‍ಇನ್ಸ್‍ಪೆಕ್ಟರ್ ಬಸವರಾಜ್ ಪಾಟೀಲ್ ಹಾಗೂ ಸಿಬ್ಬಂದಿ ನೋಡಿದ ಆರೋಪಿಯು ಹೆಡ್‍ಕಾನ್‍ಸ್ಟೆಬಲ್ ಮೇಲೆ ಲಾಂಗ್‍ನಿಂದ ಹಲ್ಲೆ ನಡೆಸಿದ್ದಾನೆ. ಸಬ್‍ಇನ್ಸ್‍ಪೆಕ್ಟರ್ ಬಸವರಾಜ್ ಪಾಟೀಲ್ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿದ್ದಾರೆ. ಆದರೆ ಮತ್ತೆ ಹಲ್ಲೆಗೆ ಯತ್ನಿಸಿದಾಗ ಸಬ್‍ಇನ್ಸ್‍ಪೆಕ್ಟರ್ ಹಾರಿಸಿದ ಗುಂಡು ಆತನ ಬಲಗಾಲಿಗೆ ತಗುಲಿದಾಗ ಕುಸಿದು ಬಿದ್ದಿದ್ದಾನೆ. ತಕ್ಷಣ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರ್ಯಾಚರಣೆ ವೇಳೆ ಗಾಯಗೊಂಡಿರುವ ಹೆಡ್‍ಕಾನ್‍ಸ್ಟೆಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಮುಖ ಸುದ್ದಿ :-   ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕವಾಗಿಲ್ಲ : ಸಿಎಂ ಕಚೇರಿ ಸ್ಪಷ್ಟನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement