ಬೆಂಗಳೂರು : ರಾಜ್ಯದಲ್ಲಿ ಉದ್ಯೋಗ ನೀತಿ ಯುವಕರಿಗೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭದಾಯಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆನ್ಲೈನ್ ಮೂಲಕ ವಿದ್ಯಾರ್ಥಿ ವೇತನ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆಳಸ್ಥರದ ಜನರಿಗೆ ನೀಡಲಾಗುವ ಈ ಮೊತ್ತವು ಅವರ ಬದುಕಿನ ಸಾಕಷ್ಟು ಬದಲಾವಣೆಗಳಿಗೆ ಕಾರಣವಾಗಲಿದೆ. ಹಲವಾರು ಜನರ ಬದುಕಿನ ಮುಖದಲ್ಲಿ ನಗೆ ತರಿಸುವಂತಹ ದೊಡ್ಡ ಬದಲಾವಣೆಗೆ ಇದು ದಾರಿ ಮಾಡುತ್ತದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ, ನೇರವಾಗಿ ಅವರ ಖಾತೆಗಳಿಗೆ ವಿದ್ಯಾರ್ಥಿ ವೇತನ ಜಮೆ ಆಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಮುಖ್ಯಮಂತ್ರಿಗಳು, ಇದಕ್ಕಾಗಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮತ್ತು ಇಲಾಖೆ ಅಧಿಕಾರಿಗಳನ್ನು ಅಭಿನಂದಿಸುವುದಾಗಿ ಹೇಳಿದರು.
ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಈ ಕಾರ್ಯಕ್ರಮದಿಂದ ಮಕ್ಕಳು ಉತ್ತಮ ಶಿಕ್ಷಣ ಪಡೆದು, ವಿವಿಧ ಉದ್ಯೋಗಳಲ್ಲಿ ತೊಡಗಿಕೊಂಡು ರಾಜ್ಯದ ಆರ್ಥಿಕತೆಯ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂದು ತಿಳಿಸಿದರು.
ಇದೇ ವೇಳೆ ಮಾತನಾಡಿದ ಸಚಿವ ಶಿವರಾಮ ಹೆಬ್ಬಾರ್, ಪ್ರಸ್ತುತ ಪೋರ್ಟಲ್ ಮುಖಾಂತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ 92,061 ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ 1,45,524 ಅರ್ಜಿಗಳು ಸ್ವೀಕೃತವಾಗಿದೆ ಎಂದರು.
ಇAದು ಸುಮಾರು 39 ಸಾವಿರ ಪ್ರೀ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ 50 ಸಾವಿರ ಸ್ವೀಕೃತ ಅರ್ಜಿಗಳ ದಾಖಲಾತಿಗಳು ಆಧಾರ್ ಮತ್ತು ಬ್ಯಾಂಕ್ ಲಿಂಕ್ ಆಗಿರುವುದು ಸರಿಯಾಗಿದ್ದು, ಸದರಿ 89,000 ಅರ್ಜಿಗಳಿಗೆ ಮಂಜೂರಾತಿ ನೀಡಿ ನೇರ ನಗದು ವರ್ಗಾವಣಿ (ಆಃಖಿ) ಮುಖಾಂತರ ಫಲಾನುಭವಿಗಳ ಖಾತೆಗೆ ನೇರವಾಗಿ ಸುಮಾರು ರೂ. 150 ಕೋಟಿ ಮೊತ್ತವನ್ನು ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಮುಖ್ಯಮಂತ್ರಿಗಳಾದ ಬಸವರಾಜ್ ಎಸ್. ಬೊಮ್ಮಾಯಿ ರವರು ಚಾಲನೆ ನೀಡಿದ್ದಾರೆ ಎಂದರು.
ಬಾಕಿ ಉಳಿದಿರುವ ವಿದ್ಯಾರ್ಥಿ ವೇತನ ಅರ್ಜಿಗಳಿಗೆ ಫೆಬ್ರವರಿ ಅಂತ್ಯದೊಳಗೆ, ಫಲಾನುಭವಿಗಳ ಆಧಾರ್ ಮತ್ತು ಬ್ಯಾಂಕ್ ಖಾತೆಗೆ ಲಿಂಕ್ ಒದಗಿಸಿ ಹಾಗೂ ಮೆಟ್ರಿಕ್ ನಂತರ ವಿದ್ಯಾರ್ಥಿಗಳ ಸಾಂಸ್ಥಿಕ ಪರಿಶೀಲನೆ ನಂತರ ಅರ್ಹ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಸಹಾಯಧನವನ್ನು ವರ್ಗಾಯಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಶಾಸಕರಾದ ಎಸ್.ರಾಮದಾಸ್, ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷಾ, ಕಾರ್ಮಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ.ಕಲ್ಪನಾ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಎಂ.ಪಿ. ಗುರುಪ್ರಸಾದ್ ಹಾಗೂ ಮಂಡಳಿ ಜಂಟಿ ಕಾರ್ಯದರ್ಶಿ ಡಾ. ಶಿವಪುತ್ರ ಬಾಬುರಾವ್ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ