ಕಂದಾಯ ದಾಖಲೆಗಳನ್ನು ಕೂಡಲೇ ಮನೆ ಬಾಗಿಲಿಗೆ ತಲುಪಿಸಿ: ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಸೂಚನೆ

ಬೆಂಗಳೂರು: ಕಂದಾಯ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯಡಿ ಅದನ್ನು ತಕ್ಷಣವೇ ತಲುಪಿಸುವಂತೆ ರಾಜ್ಯ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ಕುರಿತು ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಮೂಲಕ ಸೂಚನೆ ನೀಡಿದ್ದಾರೆ. ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ಸೂಚಿಸಲಾಗಿದ್ದು, ಈ ಯೋಜನೆಯಡಿ ಕಂದಾಯ ದಾಖಲೆಗಳನ್ನು ಮುದ್ರಿಸಿ, ಒಂದು ಪ್ಲಾಸ್ಟಿಕ್ ಲಕೋಟೆಯಲ್ಲಿ ಇರಿಸಿ, ರೈತರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಸೂಚಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಲ್ಪಾವಧಿ ಟೆಂಡರ್ ಕರೆಯುವ ಮೂಲಕ ಮುದ್ರಣದಾರರನ್ನು ಈಗಾಗಲೇ ಆಯ್ಕೆ ಮಾಡಲಾಗಿದ್ದು, ಅದರಂತೆ ಪಿಡಿಎಫ್ ನಮೂನೆಯಲ್ಲಿ ಕಂದಾಯ ದಾಖಲೆಗಳನ್ನು ಮುದ್ರಿಸಲು ಕುಟುಂಬವಾರು ಮತ್ತು ಗ್ರಾಮವಾರು ಮಾಹಿತಿ ನೀಡಲಾಗುತ್ತಿದ್ದು, ಅದರಂತೆ ಕ್ರಮ ಕೈಗೊಳ್ಳುವುದು ಎಂದು ತಿಳಿಸಲಾಗಿದೆ.
ಜಿಲ್ಲಾಧಿಕಾರಿಗಳು ತುರ್ತಾಗಿ, ಟೆಂಡರ್ ಮೂಲಕ ಆಯ್ಕೆ ಮಾಡಿ ಕಾರ್ಯಾದೇಶ ನೀಡಿರುವ ಮುದ್ರಣದಾರರಿಗೆ ಮುದ್ರಣ ಕಾರ್ಯವನ್ನು ತಕ್ಷಣದಿಂದ ಪ್ರಾರಂಭಿಸಿ, ದಿನಾಂಕ 07-02-2022ರ ಒಳಗಡೆ ಪೂರ್ಣಗೊಳಿಸುವಂತೆ ಸೂಚಿಸಬೇಕು ಹಾಗೂ ಮುದ್ರಿತ ದಾಖಲೆಗಳನ್ನು ದಿನಾಂಕ 08-02-2022ರೊಳಗೆ ಮುದ್ರಣದಾರರು ಸರಬರಾಜು ಮಾಡತಕ್ಕದ್ದು ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement